ಬೆಂಗಳೂರು | ಬೆಂಗಳೂರಿನಲ್ಲಿ ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆ ಜಲಕ್ಷಾಮ ಮತ್ತಷ್ಟು ಗಂಭೀರವಾಗುತ್ತಿದೆ. ಇದರ ಮಧ್ಯೆ ಬಡ ಹಾಗೂ ಮಧ್ಯಮ ವರ್ಗದ ಜನರು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ನಗರದ ಬಸವನಗುಡಿ ಸುಂಕೇನಹಳ್ಳಿ ವಾರ್ಡ್ನಲ್ಲಿ ಸ್ಥಾಪಿಸಲಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕ ಕಳೆದ 2-3 ತಿಂಗಳಿಂದ ಬಂದ್ ಆಗಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 17 ಸಾವಿರ ವಿದ್ಯುತ್ ಬಿಲ್ ಬಾಕಿ ಉಳಿದ ಹಿನ್ನೆಲೆಯಲ್ಲಿ ಬೆಸ್ಕಾಂ ನೋಟಿಸ್ ನೀಡಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಹಣ ಪಾವತಿಸಲು ಮುಂದಾಗಿಲ್ಲ. ಇದರಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡು ಘಟಕ ಕಾರ್ಯನಿರ್ವಹಣೆ ನಿಂತಿದೆ.

ಸ್ಥಳೀಯ ನಿವಾಸಿಗಳು ಹೇಳುವಂತೆ, ಈ ಘಟಕವು ಸುತ್ತಮುತ್ತಲಿನ ಬಡ ಜನರಿಗೆ ಕಡಿಮೆ ದರದಲ್ಲಿ ಶುದ್ಧ ಕುಡಿಯುವ ನೀರನ್ನು ಒದಗಿಸುತ್ತಿತ್ತು. ಆದರೆ ಈಗ ಘಟಕ ಬಂದ್ ಆಗಿರುವುದರಿಂದ ದುಬಾರಿ ದರದಲ್ಲಿ ನೀರು ಖರೀದಿಸುವ ಅನಿವಾರ್ಯತೆ ಎದುರಾಗಿದೆ. ಇದಕ್ಕೆ ಮುಖ್ಯ ಕಾರಣವಾಗಿ ಬೆಸ್ಕಾಂ ಮತ್ತು ಜಲಮಂಡಳಿ ಅಧಿಕಾರಿಗಳ ನಡುವಿನ ಸಮನ್ವಯತೆಯ ಕೊರತೆ ಎದ್ದು ಕಾಣುತ್ತಿದೆ.
ಇತ್ತೀಚೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಇಂತಹ ನೀರಿನ ಘಟಕಗಳನ್ನು ಜಲಮಂಡಳಿಗೆ ಹಸ್ತಾಂತರಿಸಿದ್ದರೂ, ಯಾರು ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂಬ ಗೊಂದಲ ಮುಂದುವರಿದಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಮೂಲಭೂತ ಸೌಲಭ್ಯವೇ ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಈಗಾದರೂ ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಂಡು ಘಟಕವನ್ನು ಪುನರಾರಂಭ ಮಾಡುವುದೇ ಎಂಬುದು ಕಾದು ನೋಡಬೇಕಿದೆ.
ಇದನ್ನೂ ಓದಿ : ದಾಳಿ ನಿಲ್ಲಿಸಲು ಇರಾನ್ ಸೇನೆಗೆ ಮೊಜ್ತಬಾ ಆದೇಶ : “ಇದು ಯುದ್ಧದ ಅಂತ್ಯವಲ್ಲ” ಎಂದು ಅಮೆರಿಕಕ್ಕೆ ಎಚ್ಚರಿಕೆ!



















