ಬೀದರ್ : ಬೀದರ್ ಜಿಲ್ಲೆನಲ್ಲಿ ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗುತ್ತಿದೆ. ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನೀರಿಗಾಗಿ ಜನರು ಪರದಾಡುತ್ತಿದ್ದಾರೆ.
ಗ್ರಾಮದ ಭೋರಲಿಂಗೇಶ್ವರ ಕಾಲೋನಿಯಲ್ಲಿ ಹನಿನೀರಿಗೂ ಜನ ಕಿಲೋಮೀಟರ್ಗಳಷ್ಟು ದೂರ ನಡೆದು ನೀರು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಾರದಲ್ಲಿ ಒಂದೆರಡು ಬಾರಿ ಮಾತ್ರ ನೀರು ಬಿಡಲಾಗುತ್ತಿದ್ದು, ಅದು ಕೂಡ ಕಲುಷಿತವಾಗಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ.
ಕಲುಷಿತ ನೀರಿನಿಂದ ಚರ್ಮ ತುರಿಕೆ, ವಾಂತಿ, ಬೇಧಿ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಕೆಲವರು ಆಸ್ಪತ್ರೆಗೆ ದಾಖಲಾಗುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಈ ಹಿನ್ನೆಲೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳಾ ಪಿಡಿಓ ಕವಿತಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜನರು ತಕ್ಷಣ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.
ಆರು ತಿಂಗಳಿನಿಂದ ಸಮಸ್ಯೆ ಕುರಿತು ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮೇಲಾಧಿಕಾರಿಗಳಿಗೆ ಕರೆ ಮಾಡಿದರೂ ಸ್ಪಂದನೆ ಇಲ್ಲದೆ ಇರುವುದಾಗಿ, ಜಿಪಂ ಸಿಇಒ ಹಾಗೂ ಇಒಗಳಿಗೂ ಮಾಹಿತಿ ನೀಡಿದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಅಳಲು ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಹಾಸ್ಟೆಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ : ಕನಿಷ್ಠ ವೇತನ, ಸೇವಾ ಭದ್ರತೆಗಾಗಿ ಆಗ್ರಹ


















