ಚಿಕ್ಕಮಗಳೂರು: ಕಾಫಿನಾಡು ಮತ್ತು ಮಲೆನಾಡಿನಲ್ಲಿ ತಡರಾತ್ರಿ ಭಾರೀ ಮಳೆಯಾಗಿದ್ದು, ಮಳೆಯ ಅಬ್ಬರಕ್ಕೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ.
ಕಳೆದ ರಾತ್ರಿ ಮೂಡಿಗೆರೆ ತಾಲೂಕಿನಾದ್ಯಂತ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಗೆ 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ. ಮೂಡಿಗೆರೆ ಪಟ್ಟಣ ಬಿಟ್ಟು ಇಡೀ ತಾಲೂಕಿನಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಭಾರೀ ಗಾಳಿ, ಮಳೆಗೆ ಮೂಡಿಗೆರೆಯಲ್ಲಿ ನೂರಾರು ಮರಗಳು ನೆಲಕ್ಕುರುಳಿವೆ.
ಧರೆಗುರುಳಿದ ವಿದ್ಯುತ್ ಕಂಬಗಳನ್ನು ತೆರವುಗೊಳಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ರಸ್ತೆ ಸಂಪರ್ಕ ಇಲ್ಲದ ಕಾರಣ ಕಂಬ ತೆರವುಗೊಳಿಸಲು ಸ್ಥಳೀಯರು ಮುಂದಾಗಿದ್ದಾರೆ. ಮೂಡಿಗೆರೆ ತಾಲೂಕಿನ ಬಣಕಲ್-ಮತ್ತಿಕಟ್ಟೆ ಮಾರ್ಗದಲ್ಲಿ ಘಟನೆ ನಡೆದಿದೆ.
ಗಾಳಿ, ಮಳೆ, ಸಿಡಿಲಿಗೆ ಬಿ.ಹೊಸಹಳ್ಳಿ ಗ್ರಾಮದ ಅಂಗನವಾಡಿ ಶಿಕ್ಷಕಿ ಗೌರಮ್ಮ ಎಂಬವರ ಮನೆ ಮೇಲೆ ತೆಂಗಿನಮರ ಬಿದ್ದಿದೆ. ಮನೆಯಲ್ಲಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಒಂದೇ ರಾತ್ರಿಯ ಮಳೆಗೆ ಮೂಡಿಗೆರೆ ತಾಲೂಕು ಅಕ್ಷರಶಃ ಕಂಗಾಲಾಗಿದೆ.
ಇದನ್ನೂ ಓದಿ: ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ – ಡಿಸಿ ಕಛೇರಿ ಎದುರು ಉಪವಾಸ ಸತ್ಯಾಗ್ರಹ


















