ಬೆಂಗಳೂರು : ಇಂದು (ಏಪ್ರಿಲ್ 24) ವರನಟ ಡಾ.ರಾಜ್ ಕುಮಾರ್ ಅವರಿಗೆ 97ನೇ ವರ್ಷದ ಜನ್ಮದಿನ. 97ನೇ ಜಯಂತಿ ಆಚರಿಸಲು ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆಗಳು ನಡೆದಿದೆ.
ಇಂದು ಬೆಳಗ್ಗೆ 9.30 ಬಳಿಕ ಕಂಠೀರವ ಸ್ಟುಡಿಯೋದಲ್ಲಿರುವ ಅಣ್ಣಾವ್ರ ಸಮಾಧಿಗೆ ಕುಟುಂಬಸ್ಥರು ವಿಶೇಷ ಪೂಜೆ ಸಲ್ಲಿಸಿದರು. ಸರ್ಕಾರದ ವತಿಯಿಂದಲೂ ಗೌರವ ಸಲ್ಲಿಸಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಇನ್ನು, ಅಣ್ಣಾವ್ರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳು ಅನ್ನದಾನ, ರಕ್ತದಾನ ಶಿಬಿರಗಳನ್ನು ಹಮ್ಮಿಕೊಂಡಿದ್ದು, ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಅಭಿಮಾನಿಗಳು ಕಂಠೀರವ ಸ್ಟುಡಿಯೋ ಕಡೆ ಹರಿದು ಬರುತ್ತಿದ್ದಾರೆ. ಸ್ಟುಡಿಯೋ ಸುತ್ತಮುತ್ತ ರಾಜ್ ಕುಮಾರ್ ಅವರ ಭವ್ಯ ಕಟೌಟ್ಗಳು ರಾರಾಜಿಸುತ್ತಿವೆ.
ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಅವರು ಅಣ್ಣಾವ್ರ ಸಮಾಧಿಗೆ ಭೇಟಿ ನೀಡಿ ಗೌರವ ಸಲ್ಲಿಸಿದರು. ಈ ಬಾರಿ ಸುಮಾರು 29 ಕಡೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದ್ದಾರೆ.
ಕಂಠೀರವ ಸ್ಟುಡಿಯೋವನ್ನು ಇನ್ನಷ್ಟು ಅಭಿವೃದ್ಧಿಪಡಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದ ಅವರು, ಇಲ್ಲಿ ಅಣ್ಣಾವ್ರ ಜೊತೆಗೆ ಪಾರ್ವತಮ್ಮ ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಹಾಗೂ ಅಂಬರೀಷ್ ಅವರ ಸಮಾಧಿಗಳಿದ್ದು, ಪ್ರತೀ ವಾರ ಸುಮಾರು 10 ಸಾವಿರ ಮಂದಿ ಭೇಟಿ ನೀಡುವ ಸ್ಥಳವಾಗಿರುವುದಾಗಿ ಹೇಳಿದರು.
ಇದೇ ವೇಳೆ ಡಾ. ರಾಜ್ ಕುಮಾರ್ ಅವರಿಗೆ ಭಾರತ ರತ್ನ ನೀಡಬೇಕು ಎಂಬ ಬೇಡಿಕೆಯನ್ನು ಪುನರುಚ್ಚರಿಸಿದ ಗೋಪಾಲಯ್ಯ, ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವದಾಗಿ ತಿಳಿಸಿದರು.
ಇದನ್ನೂ ಓದಿ : ವಿಮಾನದಲ್ಲಿ ಬಂದು ಕಾಪರ್ ಕಳ್ಳತನ – ಬೆಂಗಳೂರಿನಲ್ಲಿ ಖತರ್ನಾಕ್ ಗ್ಯಾಂಗ್ ಬಂಧನ!



















