ತುಮಕೂರು : ಕಳೆದ ಏಪ್ರಿಲ್ 16ರಿಂದ ತುಮಕೂರಿನಾದ್ಯಂತ ನವಿಲುಗಳ ಸರಣಿ ಸಾವು ಆರಂಭವಾಗಿತ್ತು. ಕೇವಲ 11 ದಿನಗಳಲ್ಲಿ ಬರೋಬ್ಬರಿ 44 ನವಿಲುಗಳು ಮೃತಪಟ್ಟಿದ್ದವು. ಆರಂಭದಲ್ಲಿ ಜಿಲ್ಲೆಯಲ್ಲಿ ತಾಪಮಾನ ಏರುತ್ತಿದ್ದ ಕಾರಣ, ಅತಿಯಾದ ಶಾಖ ಮತ್ತು ನಿರ್ಜಲೀಕರಣದಿಂದ ಈ ಸಾವುಗಳು ಸಂಭವಿಸಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದರು.
ಆದರೆ, ಇದೀಗ ನವಿಲುಗಳ ನಿಗೂಢ ಸಾವಿನ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತಪಟ್ಟ ನವಿಲುಗಳ ರಕ್ತ ಹಾಗೂ ಅಂಗಾಂಗಗಳ ಮಾದರಿಯನ್ನು FSL ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಯಲ್ಲಿ H5N1 (ಹಕ್ಕಿ ಜ್ವರ) ಸೋಂಕು ಇರುವುದು ದೃಢಪಟ್ಟಿದೆ.
ಈಗ ಲಭ್ಯವಾಗಿರುವ ವರದಿಯು ನವಿಲುಗಳಲ್ಲಿ H5N1 ವೈರಸ್ ಇರುವುದನ್ನು ದೃಢಪಡಿಸಲಾಗಿದ್ದು, ಇದು ಸಾರ್ವಜನಿಕರಲ್ಲಿ ಮತ್ತು ರೈತರಲ್ಲಿ ಆತಂಕ ಮೂಡಿಸಿದೆ. ಹಕ್ಕಿ ಜ್ವರ ದೃಢಪಟ್ಟ ಬೆನ್ನಲ್ಲೇ ಪಶುಸಂಗೋಪನಾ ಇಲಾಖೆ ಮತ್ತು ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.
ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ರ್ಯಾಪಿಡ್ ರೆಸ್ಪಾನ್ಸ್ ಟೀಮ್ (RRP) ತಂಡಗಳನ್ನು ರಚಿಸಲಾಗಿದೆ. ಐದು ಹಳ್ಳಿಗಳಿಗೆ ಪ್ರತ್ಯೇಕವಾಗಿ 5 ತಂಡಗಳನ್ನು ನಿಯೋಜಿಸಲಾಗಿದ್ದು, ಪ್ರತಿಯೊಂದು ತಂಡದಲ್ಲಿ ಒಬ್ಬ ಪಿಡಿಒ, ಇಬ್ಬರು ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ಮತ್ತು ಇಬ್ಬರು ಅರಣ್ಯ ಇಲಾಖೆ ಅಧಿಕಾರಿಗಳು ಇರಲಿದ್ದಾರೆ. ನವಿಲುಗಳು ಮೃತಪಟ್ಟ ಊರ್ಡಿಗೆರೆ, ಗೂಳೂರು, ಬೊಮ್ಮನಹಳ್ಳಿ, ಟಿ.ಜಿ.ಪಾಳ್ಯ ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯನ್ನು ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಬರುವ 33 ಹಳ್ಳಿಗಳ ಮೇಲೆ ನಿಗಾ ಇರಿಸಲಾಗಿದ್ದು, ಸೋಂಕು ಹರಡದಂತೆ ಡಿಸ್ಇನ್ಫೆಕ್ಟ್ ಸ್ಪ್ರೇ ಮಾಡಲು ಸೂಚಿಸಲಾಗಿದೆ.
ಇದನ್ನೂ ಓದಿ : ಕೊಹ್ಲಿ ಅಬ್ಬರಕ್ಕೆ ಬ್ರೇಕ್ ಹಾಕಿದ ರಬಾಡಾ ಬೌಲಿಂಗ್ ಚಾಕಚಕ್ಯತೆ!



















