ನವದೆಹಲಿ: ರಾಷ್ಟ್ರರಾಜಧಾನಿಯ ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ನಾಲ್ಕು ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಕನಿಷ್ಠ 9 ಮಂದಿ ಸಜೀವ ದಹನವಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಹನ್ನೆರಡಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದಾರೆ.
ವಿವೇಕ್ ವಿಹಾರ್ನ ಕಟ್ಟಡದ ಎರಡನೇ ಅಂತಸ್ತಿನಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಮೂರು ಮತ್ತು ನಾಲ್ಕನೇ ಅಂತಸ್ತಿನವರೆಗೂ ವ್ಯಾಪಿಸಿ ಇಡೀ ಕಟ್ಟಡವನ್ನು ಆವರಿಸಿದೆ. ಮಾಹಿತಿ ತಿಳಿದ ತಕ್ಷಣವೇ 14 ಅಗ್ನಿಶಾಮಕ ವಾಹನಗಳು ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಸತತ ಎರಡು ಗಂಟೆಗಳ ಕಾಲ ಹರಸಾಹಸ ಪಟ್ಟ ಸಿಬ್ಬಂದಿ, ಬೆಳಿಗ್ಗೆ 6 ಗಂಟೆ ಸುಮಾರಿಗೆ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಎಸಿ ಸ್ಫೋಟದಿಂದ ಅವಘಡ ಶಂಕೆ?
ದುರಂತಕ್ಕೆ ನಿಖರವಾದ ಕಾರಣ ಇನ್ನೂ ಪೊಲೀಸ್ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ. ಆದರೆ, ಹವಾನಿಯಂತ್ರಣ (ಎಸಿ) ಯಂತ್ರದಲ್ಲಿ ಉಂಟಾದ ಸ್ಫೋಟವೇ ಈ ಅನಾಹುತಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯ ನಿವಾಸಿಯೊಬ್ಬರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಹಲವರನ್ನು ರಕ್ಷಿಸಲಾಗಿದೆಯಾದರೂ, ಇನ್ನೂ ಒಂದೆರಡು ಕುಟುಂಬಗಳು ಕಟ್ಟಡದೊಳಗೆ ಸಿಲುಕಿರುವ ಸಾಧ್ಯತೆಯಿದೆ ಎಂದು ಪ್ರತ್ಯಕ್ಷದರ್ಶಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಅಗ್ನಿಶಾಮಕ ದಳದವರು ಬಾಲ್ಕನಿ ಮೂಲಕ ಅನೇಕರನ್ನು ರಕ್ಷಣೆ ಮಾಡಿದ್ದು, ಹಿಂಭಾಗದ ಫ್ಲಾಟ್ಗಳಲ್ಲಿದ್ದವರು ತಾವಾಗಿಯೇ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ಸುಟ್ಟು ಕರಕಲಾದ ಶವಗಳು, ಕಟ್ಟಡದೊಳಗೆ ಭೀಕರ ದೃಶ್ಯ
ಬೆಂಕಿಯ ತೀವ್ರತೆಗೆ ಸಿಲುಕಿ ಮೃತಪಟ್ಟವರ ದೇಹಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಕಟ್ಟಡದೊಳಗೆ ಪೀಠೋಪಕರಣಗಳು ಸುಟ್ಟು ಬೂದಿಯಾಗಿದ್ದು, ಛಾವಣಿಯ ಅವಶೇಷಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭೀಕರ ದೃಶ್ಯಗಳು ಕಂಡುಬಂದಿವೆ. ಗಾಯಾಳುಗಳನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಶಹದಾರ ಡಿಸಿಪಿ ರಾಜೇಂದ್ರ ಪ್ರಸಾದ್ ಮೀನಾ, “ಬೆಳಗಿನ ಜಾವ 4 ಗಂಟೆಗೆ ಕರೆ ಬಂದ ಕೂಡಲೇ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಬೆಂಕಿ ನಿಯಂತ್ರಣದ ಬಳಿಕ ಕಟ್ಟಡದಲ್ಲಿ ವ್ಯಾಪಕ ಶೋಧ ಕಾರ್ಯ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಸಂಜಯ್ ಗೋಯಲ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ.



















