ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ದಿಲೀಪ್ ರಾಜ್ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ದಿಲೀಪ್ ರಾಜ್ ಅಕಾಲಿಕ ಮರಣ ಅಪಾರ ಸಂಖ್ಯೆಯ ಅಭಿಮಾನಿಗಳು ಮತ್ತು ಚಿತ್ರರಂಗಕ್ಕೆ ಬರಸಿಡಿಲು ಬಡಿದಂತಾಗಿದೆ.
ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ದಿಲೀಪ್ ರಾಜ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಇಂದು ಬೆಳಗ್ಗೆ ವೈದ್ಯರನ್ನು ಭೇಟಿ ಮಾಡಲು ಅಪಾಯಿಂಟ್ಮೆಂಟ್ ಕೂಡ ಪಡೆದಿದ್ದರು ಎನ್ನಲಾಗಿದೆ. ಆದರೆ ಬೆಳಗಿನ ವೇಳೆಯಲ್ಲೇ ತೀವ್ರ ಹೃದಯಾಘಾತ ಸಂಭವಿಸಿ ಅವರು ನಿಧನರಾಗಿದ್ದಾರೆ. ಅಕಾಲಿಕ ಸಾವಿನ ಸುದ್ದಿ ಚಿತ್ರರಂಗಕ್ಕೆ ಆಘಾತ ತಂದಿದೆ.
ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿ ಮನೆಮಾತಾಗಿದ್ದ ದಿಲೀಪ್ ರಾಜ್ ಅವರು ಎಲ್ಲರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಸದ್ಯ ಅವರ ನಿಧನಕ್ಕೆ ಎಲ್ಲರೂ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.
ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ನಿವಾಸದಲ್ಲಿ ದಿಲೀಪ್ ರಾಜ್ ಅವರ ಪಾರ್ಥೀವ ಶರೀರವನ್ನು ಇರಿಸಲಾಗಿದೆ. ಕಿರುತೆರೆ ಮತ್ತು ಚಿತ್ರರಂಗದ ಅನೇಕರು ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. 47ನೇ ವಯಸ್ಸಿಗೆ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿರುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಇಡೀ ಚಿತ್ರರಂಗವನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ.
ಫಾರ್ಮ್ ಹೌಸ್ನಲ್ಲೇ ಅಂತ್ಯ ಸಂಸ್ಕಾರ
ನಟ ದಿಲೀಪ್ ರಾಜ್ ಅವರಿಗೆ ತಮ್ಮ ರಾಮನಗರದ ಬಳಿಯ ಫಾರ್ಮ್ ಹೌಸ್ ಮೇಲೆ ಅಪಾರ ಅಭಿಮಾನವಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಅವರ ಅಂತ್ಯ ಸಂಸ್ಕಾರವನ್ನು ಅವರು ನೆಚ್ಚಿನ ಫಾರ್ಮ್ ಹೌಸ್ನಲ್ಲೇ ನಡೆಸಲು ಕುಟುಂಬ ತೀರ್ಮಾನಿಸಿದೆ. ಇಂದು ಸಂಜೆ ಸುಮಾರು 4ರಿಂದ 5 ಗಂಟೆಯೊಳಗೆ ರಾಮನಗರದ ಸಮೀಪ ಇರುವ ಫಾರ್ಮ್ ಹೌಸ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಕುಟುಂಬಸ್ಥರು, ಬಂಧುಗಳು ಹಾಗೂ ಚಿತ್ರರಂಗದ ಹಲವರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಗುರುತು ಮೂಡಿಸಿದ್ದ ದಿಲೀಪ್ ರಾಜ್ ಅವರ ಅಗಲಿಕೆ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ.
ಇದನ್ನೂ ಓದಿ : ಎಲೆಕ್ಟ್ರಿಕಲ್ ಬೈಕ್ ಬ್ಯಾಟರಿ ಬ್ಲಾಸ್ಟ್ ಆಗಿ ವ್ಯಕ್ತಿ ಸಾವು!



















