ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಸ್ಯಾಂಡಲ್ವುಡ್ ನಟ ದರ್ಶನ್ ಅವರಿಗೆ ಮತ್ತೆ ಭಾರೀ ಹಿನ್ನಡೆ ಉಂಟಾಗಿದೆ. ಇಂದು ಸುಪ್ರೀಂ ಕೋರ್ಟ್ನಲ್ಲಿ ನಡೆದ ಜಾಮೀನು ಅರ್ಜಿಯ ಮಹತ್ವದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ.
ಕಳೆದ 8 ತಿಂಗಳುಗಳಿಂದ ಜೈಲುವಾಸ ಅನುಭವಿಸುತ್ತಿರುವ ದರ್ಶನ್, ಸೆಷನ್ಸ್ ಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ತೀವ್ರ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ದರ್ಶನ್ ಸಲ್ಲಿಕೆ ಮಾಡಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಾದ-ವಿವಾದಗಳನ್ನು ಆಲಿಸಿ ಮಹತ್ವದ ತೀರ್ಪು ನೀಡಿದೆ.
ಜಾಮೀನು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಪೀಠವು ಪ್ರಕರಣದ ವಿಚಾರಣೆ ನಡೆಯುತ್ತಿರುವ ವೇಗದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಪ್ರಕರಣದಲ್ಲಿ ಒಟ್ಟು 272 ಸಾಕ್ಷಿಗಳಿದ್ದಾರೆ. ಆದರೆ, ಕಳೆದ 7 ತಿಂಗಳುಗಳಲ್ಲಿ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ ಎಂದು ತಿಳಿದ ನ್ಯಾಯಾಲಯವು ಗರಂ ಆಗಿದೆ. “ಹೀಗೆ ವಿಚಾರಣೆ ನಡೆದರೆ ಪ್ರಕರಣ ಮುಕ್ತಾಯವಾಗಲು ತುಂಬಾ ಸಮಯ ಬೇಕಾಗುತ್ತದೆ. ವಿಚಾರಣೆ ತುಂಬಾ ನಿಧಾನಗತಿಯಲ್ಲಿ ಸಾಗುತ್ತಿದೆ” ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ವಿಚಾರಣೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಮಹತ್ವದ ಗಡುವನ್ನು ವಿಧಿಸಿದ್ದು, ಮುಂದಿನ ವರ್ಷ ಅಂದರೆ 2027ರ ಮೇ 15ರ ಒಳಗಾಗಿ ಈ ಪ್ರಕರಣದ ಸಂಪೂರ್ಣ ವಿಚಾರಣೆಯನ್ನು ಮುಗಿಸಬೇಕು ಎಂದು ಆದೇಶಿಸಿದೆ. ಇಂದಿನಿಂದ ಒಂದು ವರ್ಷದೊಳಗೆ ವಿಚಾರಣೆ ಪ್ರಕ್ರಿಯೆ ಅಂತ್ಯಗೊಳ್ಳಬೇಕು ಮತ್ತು ಈ ನಿಟ್ಟಿನಲ್ಲಿ ಪ್ರತಿದಿನ ವಿಚಾರಣೆ ನಡೆಸಬೇಕು ಎಂದು ಸೂಚನೆ ನೀಡಿದೆ. ಈ ಗಡುವಿನ ನಂತರವೇ ಜಾಮೀನು ಅರ್ಜಿಯನ್ನು ಮರು ಪರಿಗಣಿಸುತ್ತೇವೆ ಎಂದು ನ್ಯಾಯಮೂರ್ತಿ ಪರ್ದಿವಾಲಾ ಅವರಿದ್ದ ಪೀಠ ತೀರ್ಪು ನೀಡಿದೆ.
ಇನ್ನು, ಮುಂದಿನ ವರ್ಷ ಮೇ 15ರವರೆಗೆ ದರ್ಶನ್ಗೆ ಜಾಮೀನು ನಿರಾಕರಿಸಿರುವ ಸುಪ್ರೀಂ ಕೋರ್ಟ್, ದರ್ಶನ್ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ನೀಡುವಂತೆ ಸೂಚನೆ ನೀಡಿದೆ. ಬೇರೆ ವಿಚಾರಣಾಧೀನ ಕೈದಿಗಳಿಗೆ ಜೈಲಿನಲ್ಲಿ ಯಾವೆಲ್ಲಾ ಸೌಲಭ್ಯಗಳು ಸಿಗುತ್ತವೆಯೋ, ಅಂತಹ ಸೌಲಭ್ಯಗಳು ದರ್ಶನ್ಗೂ ಸಿಗಬೇಕು. ಮೂಲಭೂತ ಅವಶ್ಯಕತೆಗಳನ್ನು ಒದಗಿಸುವುದು ಅಧಿಕಾರಿಯ ಕರ್ತವ್ಯ’ಎಂದು ನ್ಯಾಯಾಲಯ ಹೇಳಿದೆ.
ಸುಪ್ರೀಂಕೋರ್ಟ್ನ ಈ ನಿರ್ಧಾರದಿಂದ ದರ್ಶನ್ ಅಭಿಮಾನಿಗಳಿಗೆ ನಿರಾಸೆಯಾಗಿದ್ದು, ಇನ್ನು ಕನಿಷ್ಠ ಒಂದು ವರ್ಷದ ಕಾಲ ವಿಚಾರಣೆಯ ಹಂತವನ್ನು ಎದುರಿಸಬೇಕಾದ ಅನಿವಾರ್ಯತೆ ನಟ ದರ್ಶನ್ಗೆ ಎದುರಾಗಿದೆ.
ಇದನ್ನೂ ಓದಿ : ಪೆಟ್ರೋಲ್ ಬೆಲೆ ಏರಿಕೆ ಮಿಸ್ಟರ್ ನರೇಂದ್ರ ಮೋದಿ ಅವರ ಕೊಡುಗೆ : ಡಿಕೆಶಿ ಲೇವಡಿ



















