ಮಧ್ಯಪ್ರದೇಶ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯ ಬಳಿ ಬಿ-1 ಕೋಚ್ನಲ್ಲಿ ಇಂದು ಬೆಳಿಗ್ಗೆ 5:15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.
ಈ ಕೋಚ್ನಲ್ಲಿ 68 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ. ತಕ್ಷಣ ಬೆಂಕಿ ಹೊತ್ತಿಕೊಂಡಿದ್ದ ಬೋಗಿಯನ್ನು ಬೇರ್ಪಡಿಸಲಾಯಿತು ಮತ್ತು ಸುರಕ್ಷತೆಗಾಗಿ ಓವರ್ ಹೆಡ್ ವಿದ್ಯುತ್ ಸರಬರಾಜನ್ನು (ಒಹೆಚ್ಇ) ತಕ್ಷಣವೇ ಆಫ್ ಮಾಡಲಾಯಿತು. ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಕೋಟಾಗೆ ತೆರಳಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
12431 ರಾಜಧಾನಿ ಎಕ್ಸ್ಪ್ರೆಸ್ ರೈಲು ಶುಕ್ರವಾರ ಕೇರಳದ ತಿರುವನಂತಪುರಂನಿಂದ ಹೊರಟು ಇಂದು ಮಧ್ಯಾಹ್ನ 12:30ಕ್ಕೆ ದೆಹಲಿಯ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣ ತಲುಪಬೇಕಿತ್ತು. ಬೆಂಕಿ ಕಾಣಿಸಿಕೊಂಡಾಗ ರೈಲು ಸುಮಾರು 2,600 ಕಿಲೋಮೀಟರ್ ಕ್ರಮಿಸಿತ್ತು. ದೆಹಲಿಗೆ ಸುಮಾರು 450 ಕಿಲೋಮೀಟರ್ ದೂರದಲ್ಲಿತ್ತು. ಬೆಂಕಿಯನ್ನು ತಕ್ಷಣವೇ ನಂದಿಸಲಾಗಿದೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ – ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್!


















