ನವದೆಹಲಿ : ಬೀದಿನಾಯಿಗಳ ಹಾವಳಿ ಮತ್ತು ಶ್ವಾನ ದಾಳಿಯಿಂದ ಸಾರ್ವಜನಿಕರನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ವೋಚ್ಚ ನ್ಯಾಯಾಲಯ ಇಂದು ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳು ಮತ್ತು ರಸ್ತೆಗಳಿಂದ ಬೀದಿನಾಯಿಗಳನ್ನು ತೆರವುಗೊಳಿಸಬೇಕು ಎಂಬ ತನ್ನ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಲು ಕೋರಿ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಶ್ವಾನಗಳನ್ನು ಸಂತಾನಶಕ್ತಿಹರಣ ಚಿಕಿತ್ಸೆಗೆ ಒಳಪಡಿಸಿದ ನಂತರವೂ ಅವುಗಳನ್ನು ಮರಳಿ ಅದೇ ಸಾರ್ವಜನಿಕ ಸ್ಥಳಗಳಿಗೆ ಬಿಡಬಾರದು ಎಂಬ ನಿಯಮವನ್ನು ನ್ಯಾಯಾಲಯ ಕಟ್ಟುನಿಟ್ಟಾಗಿ ಎತ್ತಿಹಿಡಿದಿದೆ. ನಾಯಿಗಳನ್ನು ಬೇರೆಡೆಗೆ ಸ್ಥಳಾಂತರಿಸುವುದರಿಂದ ಅವುಗಳು ಗೊಂದಲಕ್ಕೊಳಗಾಗಿ ಜನರ ಮೇಲೆ ಹೆಚ್ಚು ದಾಳಿ ನಡೆಸಬಹುದು ಎಂಬ ಪ್ರಾಣಿ ಪ್ರೇಮಿಗಳು ಹಾಗೂ ಸಂಘಟನೆಗಳ ವಾದವನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ.
ರಾಜ್ಯ ಸರ್ಕಾರಗಳ ವೈಫಲ್ಯಕ್ಕೆ ತರಾಟೆ
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಅರ್ಜಿಗಳ ವಿಚಾರಣೆ ನಡೆಸಿತು. ಸಾರ್ವಜನಿಕ ಸ್ಥಳಗಳಲ್ಲಿ ಬೀದಿನಾಯಿಗಳ ಸಂಖ್ಯೆ ಮಿತಿಮೀರುತ್ತಿರುವುದು “ಆತಂಕಕಾರಿ” ಸಂಗತಿ ಎಂದು ಅಭಿಪ್ರಾಯಪಟ್ಟ ಪೀಠ, ಮುಗ್ಧ ಜನರು ಹಾಗೂ ವಿಶೇಷವಾಗಿ ಚಿಕ್ಕ ಮಕ್ಕಳ ಮೇಲೆ ನಡೆಯುತ್ತಿರುವ ಶ್ವಾನ ದಾಳಿಯ ಘಟನೆಗಳನ್ನು ನಾವು ಯಾವುದೇ ಕಾರಣಕ್ಕೂ ಕಡೆಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಇದೇ ವೇಳೆ ಬೀದಿನಾಯಿಗಳ ನಿಯಂತ್ರಣದ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸದ ರಾಜ್ಯ ಸರ್ಕಾರಗಳ ವಿರುದ್ಧ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಶ್ವಾನಗಳ ಜನಸಂಖ್ಯೆಗೆ ಅನುಗುಣವಾಗಿ ಮೂಲಸೌಕರ್ಯಗಳನ್ನು ವಿಸ್ತರಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಮತ್ತು ಯಾವುದೇ ದೂರದೃಷ್ಟಿ ಇಲ್ಲದೆ ನಡೆಸಲಾದ ಸಂತಾನಶಕ್ತಿಹರಣ ಹಾಗೂ ಲಸಿಕಾ ಅಭಿಯಾನಗಳಿಂದಾಗಿ ಇಂದು ಪರಿಸ್ಥಿತಿ ಕೈಮೀರಿ ಹೋಗಿದೆ ಎಂದು ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.
ಸುಪ್ರೀಂ ಕೋರ್ಟ್ ನಿರ್ದೇಶನಗಳು
ಈ ಗಂಭೀರ ಸಮಸ್ಯೆಯನ್ನು ನಿವಾರಿಸಲು ಸುಪ್ರೀಂ ಕೋರ್ಟ್ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸದಾಗಿ ಕೆಲವು ಪ್ರಮುಖ ಆದೇಶಗಳನ್ನು ನೀಡಿದೆ. ಇದರ ಪ್ರಕಾರ, ಎಲ್ಲಾ ರಾಜ್ಯಗಳು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ (AWBI) ನಿಯಮಗಳನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು. ದೇಶದ ಪ್ರತಿ ಜಿಲ್ಲೆಯಲ್ಲೂ ಕನಿಷ್ಠ ಒಂದಾದರೂ ಪ್ರಾಣಿ ಜನನ ನಿಯಂತ್ರಣ (ABC) ಕೇಂದ್ರವನ್ನು ಸ್ಥಾಪಿಸುವುದು ಕಡ್ಡಾಯ. ಸಾರ್ವಜನಿಕರ ರಕ್ಷಣೆಗಾಗಿ ಎಲ್ಲಾ ಆಸ್ಪತ್ರೆಗಳಲ್ಲಿ ಆ್ಯಂಟಿ-ರೇಬೀಸ್ (ರೇಬೀಸ್ ನಿಗ್ರಹ) ಲಸಿಕೆಗಳು ಹಾಗೂ ಅಗತ್ಯ ಔಷಧಿಗಳು ಸದಾ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಮುಖ್ಯವಾಗಿ, ಈ ನಿರ್ದೇಶನಗಳನ್ನು ಜಾರಿಗೊಳಿಸುವ ಮತ್ತು ಬೀದಿನಾಯಿಗಳನ್ನು ಹಿಡಿಯುವ ಕರ್ತವ್ಯದಲ್ಲಿ ತೊಡಗಿರುವ ಅಧಿಕಾರಿಗಳ ರಕ್ಷಣೆಗೆ ಕೋರ್ಟ್ ನಿಂತಿದ್ದು, ಅವರ ವಿರುದ್ಧ ಯಾವುದೇ ರೀತಿಯ ಪೊಲೀಸ್ ಪ್ರಕರಣಗಳನ್ನು ದಾಖಲಿಸದಂತೆ ರಕ್ಷಣೆ ನೀಡಿದೆ.
ನವೆಂಬರ್ 2025ರ ಐತಿಹಾಸಿಕ ತೀರ್ಪು
ಆಸ್ಪತ್ರೆಗಳು, ಉದ್ಯಾನವನಗಳು (ಪಾರ್ಕ್ಗಳು) ಮತ್ತು ರೈಲ್ವೆ ನಿಲ್ದಾಣಗಳಂತಹ ಪ್ರಮುಖ ಸಾರ್ವಜನಿಕ ಸ್ಥಳಗಳಿಂದ ಬೀದಿನಾಯಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿ, ಅವುಗಳನ್ನು ಪ್ರತ್ಯೇಕ ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕು ಎಂದು ಸುಪ್ರೀಂ ಕೋರ್ಟ್ ಕಳೆದ 2025ರ ನವೆಂಬರ್ 7 ರಂದು ತೀರ್ಪು ನೀಡಿತ್ತು. ಈ ನಿರಾಶ್ರಿತ ಶ್ವಾನಗಳ ನಿರಂತರ ಪಾಲನೆ, ಲಸಿಕೆ ಮತ್ತು ಸಂತಾನಶಕ್ತಿಹರಣ ಚಿಕಿತ್ಸೆಗೆ ತರಬೇತಿ ಪಡೆದ ತಜ್ಞರನ್ನು ನೇಮಿಸಬೇಕು ಎಂದು ಸೂಚಿಸಲಾಗಿತ್ತು. ಅಷ್ಟೇ ಅಲ್ಲದೆ, ನಿಯೋಜಿತ ಪ್ರದೇಶಗಳನ್ನು ಹೊರತುಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ನಾಯಿಗಳಿಗೆ ಆಹಾರ ನೀಡುವುದನ್ನು ನಿಷೇಧಿಸಲಾಗಿತ್ತು. ಇದೀಗ ಅಧಿಕಾರಿಗಳು ಬೀದಿನಾಯಿಗಳನ್ನು ಹಿಡಿಯುವುದನ್ನು ತಡೆಯುವ ಅಥವಾ ಕಾನೂನಿಗೆ ಅಡ್ಡಿಪಡಿಸುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಎಚ್ಚರಿಸಿದೆ.
ಇದನ್ನೂ ಓದಿ : ತಾಯಿ ಬೈದಿದ್ದಕ್ಕೆ ಡೆತ್ನೋಟ್ ಬರೆದಿಟ್ಟು ಅಪ್ರಾಪ್ತ ಸಹೋದರಿಯರು ನಾಪತ್ತೆ!



















