ಬಳ್ಳಾರಿ : ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಬಿರುಗಾಳಿ ಸಮೇತ ಸುರಿದ ಭಾರಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಲ್ಲಿ ನಿನ್ನೆ ಸಂಜೆ ವೇಳೆಗೆ ಏಕಾಏಕಿ ಆರಂಭವಾದ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ನಗರದ ಹಲವೆಡೆ ದೊಡ್ಡ ದೊಡ್ಡ ಮರಗಳು ಧರೆಗೆ ಉರುಳಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ. ಮಳೆಯ ಅಬ್ಬರದಿಂದ ಜನರು ಮನೆಗಳಿಂದ ಹೊರಬರಲು ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರಸ್ತೆಗಳು ನೀರಿನಿಂದ ತುಂಬಿ ಹರಿಯುತ್ತಿವೆ.
ನಗರದ ಅಂಧ್ರಾಳ್, ಕೌಲ್ ಬಜಾರ್ ಹಾಗೂ ದೇವಿನಗರ ಪ್ರದೇಶಗಳಲ್ಲಿ ಬಿರುಗಾಳಿಯ ತೀವ್ರತೆಗೆ ರಸ್ತೆ ಬದಿಯ ಅನೇಕ ಮರಗಳು ರಸ್ತೆಯ ಮಧ್ಯೆ ಅಡ್ಡಲಾಗಿ ಬಿದ್ದಿವೆ. ಕೆಲವೆಡೆ ವಿದ್ಯುತ್ ಕಂಬಗಳ ಮೇಲೂ ಮರಗಳು ಉರುಳಿರುವ ಕಾರಣ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮರಗಳು ರಸ್ತೆಗಳಿಗೆ ಅಡ್ಡವಾಗಿ ಬಿದ್ದಿರುವ ಮಾಹಿತಿ ಸಿಗುತ್ತಿದ್ದಂತೆಯೇ ಮಹಾನಗರ ಪಾಲಿಕೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಜೆಸಿಬಿ ಯಂತ್ರಗಳ ಸಹಾಯದಿಂದ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. ಹಲವು ಪ್ರದೇಶಗಳಲ್ಲಿ ರಾತ್ರಿ ವೇಳೆಯಲ್ಲಿಯೇ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಸ್ತೆಗಳನ್ನು ಸಂಚಾರಕ್ಕೆ ಮುಕ್ತಗೊಳಿಸಲು ಹರಸಾಹಸಪಟ್ಟಿದ್ದಾರೆ. ಮಳೆಯ ನಡುವೆಯೂ ಕಾರ್ಯಾಚರಣೆ ಮುಂದುವರಿದಿದ್ದು, ಸಾರ್ವಜನಿಕರು ಕೂಡ ಅಧಿಕಾರಿಗಳ ಕಾರ್ಯಕ್ಕೆ ಸಹಕಾರ ನೀಡಿದ್ದಾರೆ.
ಬೆಂಗಳೂರು ರೋಡ್ ಹಾಗೂ ಕೌಲ್ ಬಜಾರ್ ಭಾಗಗಳಲ್ಲಿ ಭಾರಿ ಮಳೆಯ ನೀರು ಮನೆಗಳಿಗೆ ನುಗ್ಗಿ ನಿವಾಸಿಗಳ ಬದುಕನ್ನೇ ಅಸ್ತವ್ಯಸ್ತಗೊಳಿಸಿದೆ. ಮಳೆಯ ನೀರಿನ ಜೊತೆಗೆ ಚರಂಡಿ ನೀರು ಸೇರಿ ಮನೆಗಳ ಒಳಗೆ ಹರಿದು ಬಂದಿದ್ದು, ಕುಟುಂಬಗಳನ್ನು ಸಂಕಷ್ಟಕ್ಕೆ ಸಿಲುಕಿವೆ.
ಇನ್ನು ಭಾರಿ ಮಳೆಯಿಂದ ನಗರದ ಬಹುತೇಕ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ಅಂಡರ್ ಪಾಸ್ಗಳಲ್ಲಿ ನೀರು ಸಂಗ್ರಹಗೊಂಡ ಪರಿಣಾಮ ದ್ವಿಚಕ್ರ ವಾಹನ ಸವಾರರು ಹಾಗೂ ಕಾರು ಚಾಲಕರು ಸಂಕಷ್ಟ ಅನುಭವಿಸಿದ್ದಾರೆ.
ಇದನ್ನೂ ಓದಿ : ಸರ್ಕಾರಿ ಬ್ಯಾಂಕ್ಗಳಿಂದ ಸಾಲದ ವಿಚಾರದಲ್ಲಿ ದೊಡ್ಡ ಸಾಧನೆ : ಇದರಿಂದ ಸಾರ್ವಜನಿಕರಿಗೇನು ಲಾಭ?



















