ಬೆಂಗಳೂರು : ಬೆಂಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಭಾರೀ ಬಿರುಗಾಳಿ ಮಳೆ ಸುರಿದ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೆಜೆಸ್ಟಿಕ್, ಮಲ್ಲೇಶ್ವರಂ, ಮೈಸೂರು ರಸ್ತೆ ಸೇರಿದಂತೆ ನಗರದ ಹಲವು ಪ್ರಮುಖ ಪ್ರದೇಶಗಳಲ್ಲಿ ಮಳೆರಾಯ ಆರ್ಭಟಿಸಿದ್ದು, ರಸ್ತೆಗಳು ಜಲಾವೃತವಾಗಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ನಿನ್ನೆ (ಮೇ.21) ಸಂಜೆ ವೇಳೆ ಸುರಿದ ಭಾರೀ ಮಳೆಯಿಂದ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ವಿಜಯನಗರ, ಶಾಂತಿನಗರ, ಲಾಲ್ಬಾಗ್, ಕಬ್ಬನ್ ಪಾರ್ಕ್, ಕೆ.ಆರ್.ಮಾರ್ಕೆಟ್, ಜಯನಗರ, ರಾಜಾಜಿನಗರ, ವಸಂತನಗರ, ವಿಧಾನಸೌಧ, ಮೈಸೂರು ರಸ್ತೆ, ಮಾಗಡಿ ರಸ್ತೆ, ಬಸವೇಶ್ವರನಗರ, ಮಲ್ಲೇಶ್ವರಂ, ಮೆಜೆಸ್ಟಿಕ್, ವಿಲ್ಸನ್ ಗಾರ್ಡನ್, ಮೈಸೂರು ಬ್ಯಾಂಕ್ ವೃತ್ತ ಹಾಗೂ ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿ ಆಲಿಕಲ್ಲು ಸಹಿತ ಮಳೆ ಸುರಿದಿದೆ. ಹಲವು ಕಡೆಗಳಲ್ಲಿ ಬೃಹತ್ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಕೆಆರ್ ಪುರದ ದೂರವಾಣಿ ನಗರ ಚರ್ಚ್ ಬಳಿ ಮಳೆ ಅಬ್ಬರಕ್ಕೆ ಬೃಹತ್ ಮರ ಹಾಗೂ ವಿದ್ಯುತ್ ಕಂಬ ನೆಲಕ್ಕುರುಳಿದ ಘಟನೆ ನಡೆದಿದೆ. ಮರದ ಅಡಿಯಲ್ಲಿ ಎರಡು ಬೈಕ್ಗಳು ಸಿಲುಕಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರಸ್ತೆ ಮಧ್ಯೆ ಮರ ಹಾಗೂ ಕಂಬ ಬಿದ್ದ ಪರಿಣಾಮ ದೂರವಾಣಿ ನಗರ–ರಾಮಮೂರ್ತಿನಗರ ಮುಖ್ಯರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನ ಸವಾರರು ಗಂಟೆಗಳ ಕಾಲ ಟ್ರಾಫಿಕ್ನಲ್ಲಿ ಸಿಲುಕಿ ನರಕಯಾತನೆ ಅನುಭವಿಸಿದರು. ವಿದ್ಯುತ್ ಕಂಬ ಬಿದ್ದ ಪರಿಣಾಮ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ಘಟನೆ ಕೆಆರ್ ಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇನ್ನೊಂದೆಡೆ ಯುಬಿ ಸಿಟಿಯ ಸದರ್ನ್ ಸ್ಟಾರ್ ಹೋಟೆಲ್ ಮುಂಭಾಗ ಸಂಜೆಯ ಭಾರೀ ಮಳೆಗೆ ರಸ್ತೆ ಕುಸಿದ ಪರಿಣಾಮ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಿದ್ದ ಇನ್ನೋವಾ ಕಾರೊಂದು ಗುಂಡಿಯಲ್ಲಿ ಸಿಲುಕಿಕೊಂಡಿದೆ. ರಸ್ತೆ ಕುಸಿದ ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದು, ಕಳಪೆ ಕಾಮಗಾರಿಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.
ರಾಜಾಜಿನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಮರ ಬಿದ್ದು ರಸ್ತೆ ಸಂಪೂರ್ಣ ಬಂದ್ ಆಗಿತ್ತು. ಮತ್ತೊಂದು ಕಡೆ ಲೈಟ್ ಕಂಬ ವಾಲಿಕೊಂಡಿದ್ದು, ಅಪಾಯದ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಾರ್ವಜನಿಕರು ಪರ್ಯಾಯ ಮಾರ್ಗವಾಗಿ ಸರ್ವಿಸ್ ರಸ್ತೆ ಬಳಕೆ ಮಾಡಿದ್ದು, ಸ್ಥಳಕ್ಕೆ ಆಗಮಿಸಿದ ಜಿಬಿಎ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಿದರು.
ಇಂದಿರಾನಗರ 16ನೇ ಕ್ರಾಸ್ನಲ್ಲಿ ಬೃಹತ್ ಮರ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಜಖಂಗೊಂಡಿದೆ. ಮರ ಬಿದ್ದ ರಭಸಕ್ಕೆ ಕಾರಿನ ಮೇಲ್ಭಾಗ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪುಲಿಕೇಶಿನಗರದಲ್ಲೂ ಮುಖ್ಯ ರಸ್ತೆಯಲ್ಲೇ ಮರ ಉರುಳಿ ಬಿದ್ದಿದ್ದು, ಪೊಲೀಸರು ಹಾಗೂ ಸಿಬ್ಬಂದಿಗಳು ತೆರವು ಕಾರ್ಯ ಆರಂಭಿಸಿದ್ದಾರೆ.
ನೆಲಮಂಗಲ ತಾಲೂಕಿನ ಮಲ್ಲಾಪುರದಲ್ಲಿ ಭಾರೀ ಮಳೆ ಹಾಗೂ ಗಾಳಿಗೆ ಖಾಸಗಿ ಕಾಲೇಜಿನ ಶೀಟ್ಗಳು ಹಾರಿ ಹೋಗಿ ಮನೆ ಮೇಲೆ ಬಿದ್ದ ಪರಿಣಾಮ ಮನೆ ಹಾನಿಗೊಳಗಾಗಿದೆ. ಹೊನ್ನರಾಮ ಎಂಬುವರಿಗೆ ಸೇರಿದ ಶೀಟ್ ಮನೆಗೆ ಹಾನಿಯಾಗಿದ್ದು, ಮನೆಯ ಮೇಲ್ಚಾವಣಿ, ಗೋಡೆ ಹಾಗೂ ಬಳಕೆ ಸಾಮಗ್ರಿಗಳು ಜಖಂಗೊಂಡಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ವೇಳೆ ಗ್ರಾಮದಲ್ಲಿ ನಾಲ್ಕೈದು ವಿದ್ಯುತ್ ಕಂಬಗಳು ಉರುಳಿಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.
ಇದನ್ನೂ ಓದಿ : ಪಂಚಾಯತ್ನಲ್ಲಿ ಮುಖ್ಯಾಧಿಕಾರಿಯ ನಕಲಿ ಸಹಿ, ಕಡತ ತಿದ್ದುಪಡಿ ಆರೋಪ : ಮೂವರ ವಿರುದ್ಧ ಪ್ರಕರಣ!



















