ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಕಾಂಗ್ರೆಸ್ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ಸಚಿವ ಸ್ಥಾನ ವಂಚಿತರಿಗೆ ಹಾಗೂ ಅಧಿಕಾರ ಆಸೆ ಉಳ್ಳವರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.
“ಯಾರಿಗೆ ಅಧಿಕಾರ ಮತ್ತು ಸ್ಥಾನಮಾನ ಬೇಕೋ ಅವರು ಡಿ.ಕೆ ಶಿವಕುಮಾರ್ ಜೊತೆಗೆ ಹೋಗಿ, ಪಕ್ಷವನ್ನು ಸದೃಢವಾಗಿ ಬೆಳೆಸಬೇಕು ಅನ್ನೋರು ನಮ್ಮ ಜೊತೆಗೆ ಬನ್ನಿ” ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕರಿಗೆ ಹಾಗೂ ಸಚಿವ ಆಕ್ಷಾಂಕಿಗಳಿಗೆ ಖಡಕ್ ಮಾತುಗಳನ್ನು ಹೇಳಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ನೂತನ ಅಧ್ಯಕ್ಷರಾಗಿ ನೇಮಕವಾದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರು ನನ್ನನ್ನು ಕೆಪಿಸಿಸಿ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಾರೆ. ವಿದ್ಯಾರ್ಥಿ ದೆಸೆಯಿಂದ ನಾನು ಪಕ್ಷದಲ್ಲಿ ತೊಡಗಿಸಿಕೊಂಡಿದ್ದೇನೆ. ನಾನು ವರಿಷ್ಠರ ಬಳಿ ಹೋಗಿ ಯಾವತ್ತೂ ಸಚಿವ ಸ್ಥಾನ ಬೇಕು ಅಂತ ಕೇಳಿಲ್ಲ. ನಾನು ಅಧಿಕಾರಕ್ಕಾಗಿ ಪಕ್ಷದಲ್ಲಿ ಇಲ್ಲ. ನಾನು ಕಾಂಗ್ರೆಸ್ ಪಕ್ಷದ ಸಿಪಾಯಿ. ನಮ್ಮ ಹಿರಿಯರ ಆದರ್ಶ ಪಾಲಿಸಿಕೊಂಡು ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ಜವಾಬ್ದಾರಿ ಹೆಗಲೇರಿಸಿಕೊಂಡಿದ್ದಾರೆ.
ನಾನು ಹಿಂದುಳಿದ ಅಥವಾ ಮುಂದುವರಿದ ವರ್ಗಕ್ಕೆ ಸೇರಿದವನು ಎನ್ನುವುದು ಮುಖ್ಯವಲ್ಲ. ನಾನು ಮುಂದುವರೆದವರಿಗಿಂತ ಮುಂದುವರೆದವನು. 2028ಕ್ಕೆ ಮುಖ್ಯಮಂತ್ರಿ ಅಭ್ಯರ್ಥಿ ಅನ್ನೋದು ವಾಟ್ಸಪ್ ಯುನಿವರ್ಸಿಟಿಯ ಅಪಪ್ರಚಾರ. ನನಗೆ ಪಕ್ಷ ಕಟ್ಟುವ ಜವಾಬ್ದಾರಿ ಇದೆ. ಎಸ್ಐಆರ್, ಸಿಎಎ ವಿರುದ್ಧ ಹೋರಾಡುವ ಜವಾಬ್ದಾರಿ ಇದೆ. ಅಧಿಕಾರ ನನಗೆ ಮುಖ್ಯವಲ್ಲ, ನಾವು ಬೀದಿಗಿಳಿದು ಹೋರಾಟ ಮಾಡಬೇಕು ಎಂದಿದ್ದಾರೆ.
ಗುಜರಾತ್ ಮಾಡೆಲ್ ನಮಗೆ ಬೇಕಿಲ್ಲ, ಬದಲಾಗಿ ಕರ್ನಾಟಕ ಮಾಡೆಲ್ ಬಗ್ಗೆ ನಮಗೆ ಹೆಮ್ಮೆ ಇದೆ. ಸರ್ಕಾರ ಮತ್ತು ಪಕ್ಷದಲ್ಲಿ ಸಮನ್ವಯತೆಯಿಂದ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ.
ಇದನ್ನೂ ಓದಿ : ಟ್ರಂಪ್ಗೆ ಬಿಗ್ ಶಾಕ್ : ಇರಾನ್ ಯುದ್ಧಾಂತ್ಯಕ್ಕೆ ಅಮೆರಿಕ ಹೌಸ್ನಲ್ಲಿ ಮಹತ್ವದ ನಿರ್ಣಯ ಅಂಗೀಕಾರ!



















