ಬಳ್ಳಾರಿ : ಜಿಲ್ಲೆಯ ಸಂಡೂರು ತಾಲೂಕಿನ ಸ್ವಾಮಿಹಳ್ಳಿಯಲ್ಲಿ ಸಾರ್ವಜನಿಕರ ಆರೋಗ್ಯ ಸೇವೆಗಾಗಿ ನಿರ್ಮಿಸಲಾದ ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರ ಕಳೆದ ನಾಲ್ಕು ವರ್ಷಗಳಿಂದ ಉದ್ಘಾಟನೆಯಾಗದೆ ಪಾಳು ಬಿದ್ದಿದೆ. ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಆಸ್ಪತ್ರೆ ಕಟ್ಟಡ ಇಂದು ರೋಗಿಗಳ ಸೇವೆಗೆ ಬಳಸಲಾಗದೆ ಕುಡುಕರ ಅಡ್ಡೆ ಹಾಗೂ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಜಿಲ್ಲಾ ಖನಿಜ ನಿಗಮದ ಅನುದಾನದಲ್ಲಿ 2020-21ನೇ ಸಾಲಿನಲ್ಲಿ ಅಂದಾಜು 1 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಬೃಹತ್ ಆಸ್ಪತ್ರೆ ಕಟ್ಟಡ ನಿರ್ಮಾಣಗೊಂಡಿತ್ತು. ಗ್ರಾಮದಲ್ಲಿ ಉತ್ತಮ ಆರೋಗ್ಯ ಸೌಲಭ್ಯ ದೊರೆಯಲಿ ಎಂಬ ಉದ್ದೇಶದಿಂದ ಗ್ರಾಮಸ್ಥರೇ ಸುಮಾರು 12 ಲಕ್ಷ ರೂಪಾಯಿ ವೆಚ್ಚ ಮಾಡಿ ಭೂಮಿ ಖರೀದಿಸಿ ಸರ್ಕಾರಕ್ಕೆ ನೀಡಿದ್ದರು. ಆದರೆ ಆಸ್ಪತ್ರೆ ನಿರ್ಮಾಣ ಪೂರ್ಣಗೊಂಡು ವರ್ಷಗಳೇ ಕಳೆದರೂ ಉದ್ಘಾಟನೆ ಮಾತ್ರ ಆಗದೆ ಕಟ್ಟಡ ವ್ಯರ್ಥವಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆ ಸುತ್ತಮುತ್ತ ಈಗ ಮದ್ಯದ ಬಾಟಲಿಗಳೇ ಕಾಣಸಿಗುತ್ತಿವೆ. ರಾತ್ರಿ ವೇಳೆಯಲ್ಲಿ ಕಟ್ಟಡ ಕುಡುಕರ ಅಡ್ಡವಾಗಿ ಮಾರ್ಪಡುತ್ತಿದ್ದು, ಕಿಟಕಿಗಳ ಗಾಜುಗಳು ಪುಡಿಪುಡಿಯಾಗಿವೆ. ಆಸ್ಪತ್ರೆಯ ಒಳಭಾಗದಲ್ಲಿ ಮಣ್ಣು, ಧೂಳು ತುಂಬಿಕೊಂಡಿದ್ದು, ನಿರ್ವಹಣೆಯ ಕೊರತೆಯಿಂದ ಕಟ್ಟಡ ಹಾಳಾಗುವ ಹಂತ ತಲುಪಿದೆ. ಸಾರ್ವಜನಿಕರ ತೆರಿಗೆ ಹಣದಲ್ಲಿ ನಿರ್ಮಾಣವಾದ ಆಸ್ಪತ್ರೆಯ ದುಸ್ಥಿತಿ ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ.

ಆಸ್ಪತ್ರೆ ಕಾರ್ಯಾರಂಭವಾಗದ ಕಾರಣ ಸ್ವಾಮಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೋಗಿಗಳು ಚಿಕಿತ್ಸೆಗಾಗಿ ದೂರದ ಪಟ್ಟಣಗಳಿಗೆ ತೆರಳಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ. ತುರ್ತು ಸಂದರ್ಭಗಳಲ್ಲಿ ಸಕಾಲಕ್ಕೆ ಚಿಕಿತ್ಸೆ ದೊರೆಯದೆ ಹಲವರು ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಗ್ರಾಮಸ್ಥರು ಮಾಡುತ್ತಿದ್ದು, ಕೂಡಲೇ ಆಸ್ಪತ್ರೆಯನ್ನು ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಆಸ್ಪತ್ರೆ ಕಾಂಗ್ರೆಸ್ ಸಂಸದ ಇ. ತುಕಾರಾಂ ಹಾಗೂ ಶಾಸಕಿ ಅನ್ನಪೂರ್ಣ ತುಕಾರಾಂ ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯಲ್ಲಿರುವುದು ವಿಶೇಷ. “ನಾಲ್ಕು ವರ್ಷಗಳಾದರೂ ಆಸ್ಪತ್ರೆ ಉದ್ಘಾಟನೆ ಯಾಕಾಗಿಲ್ಲ?”, “ಜನರ ಆರೋಗ್ಯಕ್ಕಿಂತ ಮುಖ್ಯವಾದ ಕೆಲಸ ಇನ್ನೇನಿದೆ?” ಎಂದು ಗ್ರಾಮಸ್ಥರು ಪ್ರಶ್ನಿಸುತ್ತಿದ್ದಾರೆ. ಸರ್ಕಾರಿ ಕಟ್ಟಡ ನಿರ್ಮಾಣ ಮಾಡಿ ಅದನ್ನು ಬಳಕೆಗೆ ತರದೇ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಆಸ್ಪತ್ರೆ ಆರಂಭಿಸದಿದ್ದರೆ ಹೋರಾಟ ನಡೆಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.
ಇದನ್ನೂ ಓದಿ : “ಹನಿಮೂನ್ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!


















