ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಕಾರ್ಯವೈಖರಿಯನ್ನು ತೀವ್ರವಾಗಿ ಟೀಕಿಸಿರುವ ರಾಷ್ಟ್ರೀಯ ಅಂಬೇಡ್ಕರ್ ಸೇನೆ, ಅವರನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಕೈಬಿಟ್ಟು ದಲಿತಪರ ಚಿಂತನೆ ಹೊಂದಿರುವ ಹೊಸ ಮುಖಕ್ಕೆ ಜವಾಬ್ದಾರಿ ನೀಡಬೇಕು ಎಂದು ಆಗ್ರಹಿಸಿದೆ.
ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಅಧ್ಯಕ್ಷ ಡಾ. ಅರ್ಜುನ್ ಗೋಪಾಲಯ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಹಾಗೂ ಮನವಿ ಸಲ್ಲಿಕೆ ವೇಳೆ ಈ ಬೇಡಿಕೆ ಮುಂದಿರಿಸಲಾಗಿದೆ. ದಲಿತ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿರಿಸಿದ ಎಸ್ಸಿಪಿ/ಟಿಎಸ್ಪಿ (SCSP/TSP) ನಿಧಿಯನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಳಸಿದ ಸಂದರ್ಭದಲ್ಲಿ ಸಚಿವರು ಸಮುದಾಯದ ಪರವಾಗಿ ಧ್ವನಿ ಎತ್ತುವಲ್ಲಿ ವಿಫಲರಾಗಿದ್ದಾರೆ ಎಂದು ಸಂಘಟನೆ ಆರೋಪಿಸಿದೆ.

ದಲಿತರ ಹಿತಾಸಕ್ತಿಗೆ ವಿರುದ್ಧವಾದ ಬೆಳವಣಿಗೆಗಳು ನಡೆದಾಗ ಮೌನ ವಹಿಸಿದ್ದ ಸಚಿವರು, ಈಗ ತಮ್ಮ ರಾಜಕೀಯ ಪ್ರಭಾವ ಕುಸಿಯುತ್ತಿರುವ ಸಂದರ್ಭದಲ್ಲಿ ದಲಿತ ಸಂಘಟನೆಗಳನ್ನು ಒಗ್ಗೂಡಿಸಿ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ರಾಷ್ಟ್ರೀಯ ಅಂಬೇಡ್ಕರ್ ಸೇನೆ ಗಂಭೀರ ಆರೋಪ ಮಾಡಿದೆ.

ಸಚಿವರ ಅವಧಿಯಲ್ಲಿ ದಲಿತ ಸಮುದಾಯದ ಅಭಿವೃದ್ಧಿಗೆ ಪೂರಕವಾದ ಯಾವುದೇ ಪರಿಣಾಮಕಾರಿ ಮತ್ತು ರಚನಾತ್ಮಕ ಕೆಲಸಗಳು ನಡೆದಿಲ್ಲ. ಕೆಲವು ಸಂಘಟನೆಗಳಿಗೆ ಆಮಿಷದ ಕಾಣಿಕೆಗಳನ್ನು ನೀಡಿ ರಾಜಕೀಯ ರಕ್ಷಾಕವಚವಾಗಿ ಬಳಸಿಕೊಳ್ಳುತ್ತಿರುವುದು ಖಂಡನೀಯ ಎಂದು ಸಂಘಟನೆ ತಿಳಿಸಿದೆ.
ದಲಿತ ಸಮುದಾಯದ ಮೂಲಭೂತ ಹಕ್ಕುಗಳು, ಅಭಿವೃದ್ಧಿ ಯೋಜನೆಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳ ರಕ್ಷಣೆಗಾಗಿ ಸಮಾಜ ಕಲ್ಯಾಣ ಇಲಾಖೆಗೆ ದಕ್ಷ, ಬದ್ಧತೆ ಹೊಂದಿರುವ ಹಾಗೂ ಸಮುದಾಯದ ಸಮಸ್ಯೆಗಳನ್ನು ಅರಿತ ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎಂದು ಸಂಘಟನೆ ಒತ್ತಾಯಿಸಿದೆ.
ಈ ಮೂಲಕ ಇಲಾಖೆಯ ಘನತೆಯನ್ನು ಮರುಸ್ಥಾಪಿಸಿ, ದಲಿತ ಸಮುದಾಯದ ಅಭಿವೃದ್ಧಿಗೆ ಹೊಸ ಚೈತನ್ಯ ತುಂಬುವ ಅಗತ್ಯವಿದೆ ಎಂದು ರಾಷ್ಟ್ರೀಯ ಅಂಬೇಡ್ಕರ್ ಸೇನೆ ಅಭಿಪ್ರಾಯಪಟ್ಟಿದೆ.
ಸರ್ಕಾರವು ಈ ಕುರಿತು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಅಧ್ಯಕ್ಷ ಡಾ. ಅರ್ಜುನ್ ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!


















