ಬೆಂಗಳುರು : ಹಾಲಿ ಸಾರಿಗೆ ಸಚಿವ ಹಾಗೂ ಹಿಂದಿನ ನಗರಾಭಿವೃದ್ಧಿ ಸಚಿವರಾಗಿದ್ದ ಬೈರತಿ ಸುರೇಶ್ ಅವರ ಆಡಳಿತಾವಧಿಯಲ್ಲಿ ನಗರಾಭಿವೃದ್ಧಿ ಇಲಾಖೆ, ನಗರ ಮತ್ತು ಗ್ರಾಮ ಯೋಜನಾ ಸಂಸ್ಥೆಗಳು, ಯೋಜನಾ ಪ್ರಾಧಿಕಾರಗಳು ಹಾಗೂ ಸ್ಥಳೀಯ ನಗರಾಭಿವೃದ್ಧಿ ಸಂಸ್ಥೆಗಳಲ್ಲಿ ವ್ಯಾಪಕ ಭ್ರಷ್ಟಾಚಾರ, ಲಂಚಗಾರಿಕೆ, ಅಧಿಕಾರ ದುರುಪಯೋಗ, ಸ್ವಜನಪಕ್ಷಪಾತ ಮತ್ತು ಅಕ್ರಮ ಚಟುವಟಿಕೆಗಳು ನಡೆದಿರುವ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಹಿನ್ನೆಲೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿ, ಸಮಗ್ರ, ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣ ಯೋಜನಾ ಪ್ರಾಧಿಕಾರದ ಟೌನ್ ಪ್ಲಾನಿಂಗ್ ಅಧಿಕಾರಿ ಶರಣಪ್ಪ ಮಡಿವಾಳರ ಅವರು ಲೇಔಟ್ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡುವ ಸಲುವಾಗಿ 73.60 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿರುವುದು ವೈರಲ್ ವಿಡಿಯೋ ಮೂಲಕ ಬಹಿರಂಗಗೊಂಡಿದೆ. ವಿಡಿಯೊದಲ್ಲಿನ ಸಂಭಾಷಣೆಯಲ್ಲಿ ಅಧಿಕಾರಿ ಹಣದ ವ್ಯವಹಾರದ ಕುರಿತು ನೇರವಾಗಿ ಚರ್ಚಿಸಿರುವುದು ಮತ್ತು ಕಚೇರಿ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ ರಹಸ್ಯವಾಗಿ ಮಾತುಕತೆ ನಡೆಸಿರುವುದು ದಾಖಲಾಗಿರುವುದಾಗಿ ಆರೋಪಿಸಲಾಗಿದೆ.

ಇದೇ ವೇಳೆ, ಲಂಚದ ಹಣದಲ್ಲಿ “ಸಚಿವರಿಗೂ ಪಾಲು ನೀಡಬೇಕಾಗುತ್ತದೆ” ಎಂದು ಅಧಿಕಾರಿ ಹೇಳಿರುವುದಾಗಿ ವಿಡಿಯೊದಲ್ಲಿ ಕೇಳಿಬಂದಿರುವುದು ಪ್ರಕರಣಕ್ಕೆ ಮತ್ತಷ್ಟು ಗಂಭೀರ ಸ್ವರೂಪ ನೀಡಿದೆ. ಈ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸುವುದು ಅಗತ್ಯವಾಗಿದ್ದು, ಪ್ರಕರಣವನ್ನು ಕೇವಲ ಒಬ್ಬ ಅಧಿಕಾರಿಯ ಮಟ್ಟಕ್ಕೆ ಸೀಮಿತಗೊಳಿಸದೆ ಅದರ ಹಿಂದಿರುವ ರಾಜಕೀಯ, ಆಡಳಿತಾತ್ಮಕ ಮತ್ತು ಆರ್ಥಿಕ ಹಿತಾಸಕ್ತಿಗಳನ್ನೂ ತನಿಖೆಗೊಳಪಡಿಸಬೇಕು ಎಂದು ದಿನೇಶ್ ಕಲ್ಲಹಳ್ಳಿ ಒತ್ತಾಯಿಸಿದ್ದಾರೆ.

ಬೈರತಿ ಸುರೇಶ್ ಅವರು ನಗರಾಭಿವೃದ್ಧಿ ಸಚಿವರಾಗಿದ್ದ ಅವಧಿಯಲ್ಲಿ ಇಲಾಖೆಯ ಅಧೀನದಲ್ಲಿರುವ ವಿವಿಧ ಯೋಜನಾ ಪ್ರಾಧಿಕಾರಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಭ್ರಷ್ಟಾಚಾರ, ಅಕ್ರಮ ಲೇಔಟ್ ಮತ್ತು ಕಟ್ಟಡ ನಕ್ಷೆ ಅನುಮೋದನೆ, ಸಾರ್ವಜನಿಕ ಆಸ್ತಿಗಳ ದುರುಪಯೋಗ, ಕಾನೂನುಬಾಹಿರ ಅನುಮತಿಗಳು ಹಾಗೂ ಸ್ವಜನಪಕ್ಷಪಾತದ ಕುರಿತು ಹಲವು ದೂರುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದ್ದರೂ, ಅವುಗಳ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪವನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವೈರಲ್ ವಿಡಿಯೋದಲ್ಲಿ ಪ್ರಸ್ತಾಪವಾಗಿರುವ ಆರೋಪಗಳ ಬಗ್ಗೆ ಉನ್ನತ ಮಟ್ಟದ, ಸ್ವತಂತ್ರ ಹಾಗೂ ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ದಿನೇಶ್ ಕಲ್ಲಹಳ್ಳಿ ರಾಜ್ಯಪಾಲರನ್ನು ಕೋರಿದ್ದಾರೆ. ಪ್ರಕರಣದ ನೈಜ ಸತ್ಯಾಂಶ ಹೊರಬರಬೇಕಾದರೆ ಸಂಪೂರ್ಣ ವ್ಯವಸ್ಥೆಯ ಕಾರ್ಯವೈಖರಿಯನ್ನೇ ತನಿಖೆಗೆ ಒಳಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯವನ್ನೂ ದಿನೇಶ್ ಕಲ್ಲಹಳ್ಳಿ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ ; ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!



















