ಬೆಂಗಳೂರು : ಕರ್ನಾಟಕದಲ್ಲಿ ತೀವ್ರ ಚರ್ಚೆ, ಕುತೂಹಲಕ್ಕೆ ಕಾರಣವಾಗಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯು (ಎಸ್ಐಆರ್) ಮಂಗಳವಾರದಿಂದ (ಜೂನ್ 30) ಆರಂಭವಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಹಾಗಾಗಿ, ಜನರು ಅಗತ್ಯ ದಾಖಲೆಗಳನ್ನು ತೋರಿಸಿ, ಅರ್ಜಿ ಭರ್ತಿ ಮಾಡಿಕೊಳ್ಳುವ ಮೂಲಕ ನಿಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವುದನ್ನು ತಡೆಯಬಹುದಾಗಿದೆ.
ಯಾವೆಲ್ಲ ಪ್ರಕ್ರಿಯೆ ನಡೆಯಲಿದೆ?
ರಾಜ್ಯಾದ್ಯಂತ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಲಿದ್ದಾರೆ. ನಿಗದಿತ ನಮೂನೆಗಳನ್ನು ನೀಡಿ ಭರ್ತಿ ಮಾಡಿಸಿಕೊಳ್ಳಲಿದ್ದಾರೆ. ಹೊಸ ಹೆಸರುಗಳ ಸೇರ್ಪಡೆ ಮಾಡಿ, ಮೃತಪಟ್ಟವರು, ಮನೆ ಖಾಲಿ ಮಾಡಿದವರ ಹೆಸರನ್ನು ಮತಪಟ್ಟಿಯಿಂದ ಕೈಬಿಡಲಾಗುತ್ತದೆ. ಹಾಗೆಯೇ, ಎರಡೆರೆಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಇದ್ದರೆ, ಅಂತಹವರ ಹೆಸರನ್ನು ಒಂಧು ಕಡೆ ಮಾತ್ರ ಉಳಿಸಲಾಗುತ್ತದೆ. ಇದರ ಜತೆಗೆ ಗುರುತಿನ ಚೀಟಿಯಲ್ಲಿ ಏನಾದರೂ ದೋಷಗಳು ಇದ್ದರೆ ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶವಿದೆ.
ರಾಜ್ಯಾದ್ಯಂತ ಒಟ್ಟು 59,050ಕ್ಕೂ ಹೆಚ್ಚು ಮತಗಟ್ಟೆ ಮಟ್ಟದ ಅಧಿಕಾರಿಗಳು ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. 2026ರ ಮೇ 12ರ ವರೆಗಿನ ಅಂಕಿ-ಅಂಶಗಳ ಪ್ರಕಾರ, ರಾಜ್ಯದ ಒಟ್ಟು 5,55,74,064 ಮತದಾರರನ್ನು ವಿಶೇಷ ಪರಿಷ್ಕರಣೆಗೆ ಒಳಪಡಿಸಲಾಗುತ್ತದೆ. ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇರಬೇಕು ಎಂದು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಂದ ಪ್ರತಿಯೊಂದು ಮತಗಟ್ಟೆಗೆ ಬೂತ್ ಮಟ್ಟದ ಏಜೆಂಟರನ್ನು ನೇಮಿಸಲಾಗಿದೆ.
ಯಾವ ದಾಖಲೆ ಇರಬೇಕು?
ಅಧಿಕಾರಿಗಳು ನಿಮ್ಮ ಮನೆಗೆ ಭೇಟಿ ನೀಡಿದಾಗ ಹಲವು ದಾಖಲೆಳು ನಿಮ್ಮ ಬಳಿ ಇರಬೇಕು. ಕುಟುಂಬದ ಸದಸ್ಯರ ಗುರುತಿನ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾಸ್ ಪೋರ್ಟ್ ಸೈಜಿನ ಫೋಟೊ, ವಯಸ್ಸಿನ ಪುರಾವೆಯಾಗಿ ಜನನ ಪ್ರಮಾಣಪತ್ರ, ಎಸ್ಸೆಸ್ಸೆಲ್ಸಿ ಮಾರ್ಕ್ಸ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಗಳು ನಿಮ್ಮ ಬಳಿ ಇರಬೇಕು ಎಂದು ತಿಳಿಸಲಾಗಿದೆ. ಕಾಯಂ ನಿವಾಸಿ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಸರ್ಕಾರ ನೀಡಿದ ಮನೆ ಹಂಚಿಕೆ ಪ್ರಮಾಣಪತ್ರಗಳು ಕೂಡ ನೆರವಿಗೆ ಬರಲಿವೆ.
ಜುಲೈ 29ರವರೆಗೆ ಪರಿಷ್ಕರಣೆ ನಡೆಯಲಿದೆ. ಆಗಸ್ಟ್ 5ರಂದು ಕರಟು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟ ಮಾಡಲಾಗುತ್ತದೆ. ಅಧಿಕಾರಿಗಳ ನಿರ್ಧಾರದ ಬಗ್ಗೆ ಅಸಮಾಧಾನ ಇದ್ದರೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ. ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ಹಾಗೂ ಸಹಾಯಕ್ಕಾಗಿ ಉಚಿತ ಸಹಾಯವಾಣಿ ಸಂಖ್ಯೆ 1950ಗೆ ಕರೆ ಮಾಡಬಹುದು. ಇನ್ನು ECINET ಮೊಬೈಲ್ ಆ್ಯಪ್ ಅಥವಾ voters.eci.gov.in ವೆಬ್ ಸೈಟ್ ಗೆ ಭೇಟಿ ನೀಡಿ ನೀವೇ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಬಹುದು.
ಇದನ್ನೂ ಓದಿ : ನಾಳೆಯಿಂದ ಬೆಂಗಳೂರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ; ಮನೆ-ಮನೆಗೆ ಬಿಎಲ್ಒ ಭೇಟಿ!



















