ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನ ಬೇಗೂರು ಹೋಬಳಿ, ಬಿಳೇಕಹಳ್ಳಿ ಗ್ರಾಮದ ಸ.ನಂ.154/11ರಲ್ಲಿ ಇರುವ 5 ಎಕರೆ ಸರ್ಕಾರಿ ಜಮೀನನ್ನು ವಶಕ್ಕೆ ಪಡೆದು ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಗೆ ಹಸ್ತಾಂತರಿಸುವ ಸರ್ಕಾರದ ಆದೇಶವನ್ನು ಇನ್ನೂ ಅನುಷ್ಠಾನಗೊಳಿಸಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ.

ದೂರಿನಲ್ಲಿ, ಕರ್ನಾಟಕ ಭೂ ಮಂಜೂರಾತಿ ನಿಯಮಗಳು, 1969ರ ನಿಯಮ 25ರ ಅನ್ವಯ ಈ ಜಮೀನಿನ ಮಂಜೂರಾತಿಯನ್ನು ಸರ್ಕಾರ ಈಗಾಗಲೇ ರದ್ದುಗೊಳಿಸಿರುವುದಾಗಿ ಉಲ್ಲೇಖಿಸಲಾಗಿದೆ. ಜೊತೆಗೆ, ಜಮೀನನ್ನು ಸರ್ಕಾರದ ವಶಕ್ಕೆ ಪಡೆದು ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಗೆ ಹಸ್ತಾಂತರಿಸುವಂತೆ ಸ್ಪಷ್ಟ ಆದೇಶ ಹೊರಡಿಸಲಾಗಿದೆ. ಆದರೆ, ಸರ್ಕಾರದ ಅಂತಿಮ ಆದೇಶ ಹೊರಬಂದಿದ್ದರೂ ಬೆಂಗಳೂರು ನಗರ ಜಿಲ್ಲಾಧಿಕಾರಿಯವರು ಇದುವರೆಗೆ ಯಾವುದೇ ವಶಪಡಿಸಿಕೊಳ್ಳುವ ಪ್ರಕ್ರಿಯೆ ಅಥವಾ ಹಸ್ತಾಂತರ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದರಿಂದ ಸರ್ಕಾರಿ ಜಮೀನಿನಲ್ಲಿರುವ ಅಪೊಲೊ ಆಸ್ಪತ್ರೆಯ ಅನಧಿಕೃತ ಸ್ವಾಧೀನ ಮತ್ತು ಬಳಕೆಯನ್ನು ಮುಂದುವರಿಯಲು ಅವಕಾಶ ಕಲ್ಪಿಸಿದಂತಾಗಿದೆ. ಈ ನಿರ್ಲಕ್ಷ್ಯವು ಸರ್ಕಾರದ ಆದೇಶದ ನೇರ ಉಲ್ಲಂಘನೆ ಮಾತ್ರವಲ್ಲದೆ ಸಾರ್ವಜನಿಕ ಆಸ್ತಿಯ ರಕ್ಷಣೆಯಲ್ಲಿ ಗಂಭೀರ ಆಡಳಿತಾತ್ಮಕ ವೈಫಲ್ಯವಾಗಿದೆ ಎಂದು ದಿನೇಶ್ ಕಲ್ಲಹಳ್ಳಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ಹೈಕೋರ್ಟ್ನ ರಿಟ್ ಅರ್ಜಿ ಸಂಖ್ಯೆ 17797/2018ರಲ್ಲಿ ನೀಡಿದ್ದ ನಿರ್ದೇಶನಗಳ ಹಿನ್ನೆಲೆಯಲ್ಲಿ ಸರ್ಕಾರವು ಮರುಪರಿಶೀಲನೆ ನಡೆಸಿ ಅಂತಿಮ ಆದೇಶ ಹೊರಡಿಸಿದ್ದರೂ, ಅದನ್ನು ಜಾರಿಗೆ ತರುವಲ್ಲಿ ವಿಳಂಬವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಜಿಲ್ಲಾಧಿಕಾರಿಗಳ ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಕಡತ ನಿರ್ವಹಣೆಯಲ್ಲಿನ ವಿಳಂಬದ ಕಾರಣಗಳನ್ನು ಪರಿಶೀಲಿಸಲು ಇಲಾಖಾ ತನಿಖೆ ಅಗತ್ಯವಿದೆ ಎಂದು ದಿನೇಶ್ ಕಲ್ಲಹಳ್ಳಿ ಅವರು ಆಗ್ರಹಿಸಿದ್ದು, ಸರ್ಕಾರಿ ಜಮೀನನ್ನು ತಕ್ಷಣ ವಶಕ್ಕೆ ಪಡೆದು, ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಗೆ ಹಸ್ತಾಂತರಿಸಲು ಕಾಲಮಿತಿಯೊಳಗಿನ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಜೊತೆಗೆ ಜಮೀನನ್ನು ವಶಕ್ಕೆ ಪಡೆದು ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಗೆ ಹಸ್ತಾಂತರಿಸುವ ಪ್ರಕ್ರಿಯೆ ವಿಳಂಬಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಿ, ಸಂಪೂರ್ಣ ಅನುಷ್ಠಾನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಆದೇಶ ನೀಡಬೇಕು ಎಂದು ದಿನೇಶ್ ಕಲ್ಲಹಳ್ಳಿ ಸಿ.ಎಸ್ ಡಾ. ಶಾಲಿನಿ ರಜನೀಶ್ ಅವರಿಗೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಮೊದಲ ದಿನವೇ ಮತದಾರರ ಪಟ್ಟಿ ಪರಿಷ್ಕರಣೆಗೆ ವೇಗ – 54.68 ಲಕ್ಷ ಗಣತಿ ನಮೂನೆ ವಿತರಣೆ!


















