ಬೆಂಗಳೂರು : ನಗರದ ಬನ್ನೇರುಘಟ್ಟ ರಸ್ತೆಯ ವಿವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದ 12 ವರ್ಷದ ಅರ್ಹನ್ ಪಾಷಾ ಎಂಬಾತ ಶಾಲೆ ಕೊಠಡಿಯಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಜೂನ್ 10ರಂದು ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ತರಗತಿ ಕೊಠಡಿಯಲ್ಲಿ ಅರ್ಹನ್ ಏಕಾಏಕಿ ಕುಸಿದು ಬಿದ್ದಿದ್ದಾನೆ. ಅದಕ್ಕೂ ಮೊದಲು ತನಗೆ ಸುಸ್ತಾಗಿದೆ ಎಂದು ಶಿಕ್ಷಕಿ ಬಳಿ ಹೇಳಿಕೊಂಡಿದ್ದರೂ, ಮಗುವಿನ ಆರೋಗ್ಯದ ಬಗ್ಗೆ ಶಾಲಾ ಶಿಕ್ಷಕರು ಸೂಕ್ತ ಗಮನ ಹರಿಸಲಿಲ್ಲ ಎಂಬ ಆರೋಪ ಕೇಳಿಬಂದಿದೆ.
ಕುಸಿದು ಬಿದ್ದ ಅರ್ಹನ್ನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯದೆ, ಸುಮಾರು 45 ನಿಮಿಷಗಳ ಕಾಲ ಶಾಲೆಯ ಕೊಠಡಿಯಲ್ಲೇ ಇರಿಸಲಾಗಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ವೇಳೆ ಮಗುವನ್ನು ಕೊಠಡಿಯಲ್ಲೇ ಇರಿಸಿರುವ ಸಿಸಿಟಿವಿ ದೃಶ್ಯವೂ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ದರೆ ಮಗುವಿನ ಜೀವ ಉಳಿಸಹುದಿತ್ತು ಎಂದು ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ.
ಘಟನೆ ನಡೆದ ಸುಮಾರು 45 ನಿಮಿಷಗಳ ಬಳಿಕವೇ ಶಾಲಾ ಸಿಬ್ಬಂದಿ ಮಗುವಿನ ಕುಟುಂಬಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದರು. ವಿಷಯ ತಿಳಿದ ತಕ್ಷಣ ಶಾಲೆಗೆ ಧಾವಿಸಿದ ಕುಟುಂಬಸ್ಥರು, ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲು ಶಾಲೆಯ ವ್ಯಾನ್ ನೀಡುವಲ್ಲೂ ಸಿಬ್ಬಂದಿ ಹಿಂದೇಟು ಹಾಕಿದ್ದರು ಎಂದು ಆರೋಪಿಸಿದ್ದಾರೆ. ಕೊನೆಗೆ ಕುಟುಂಬಸ್ಥರೇ ಬೈಕ್ನಲ್ಲಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.
ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು, ಮಗು ಈಗಾಗಲೇ ಮೃತಪಟ್ಟಿದೆ ಎಂದು ತಿಳಿಸಿದ್ದಾರೆ. ಇನ್ನೂ ಅರ್ಧಗಂಟೆ ಮೊದಲೇ ಆಸ್ಪತ್ರೆಗೆ ಕರೆತಂದಿದ್ದರೆ ಮಗುವಿನ ಜೀವ ಉಳಿಯುವ ಸಾಧ್ಯತೆ ಇತ್ತು ಎಂದು ವೈದ್ಯರು ಹೇಳಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಇದೇ ವೇಳೆ, ಪ್ರಕರಣವನ್ನು ಮುಚ್ಚಿಹಾಕಲು ಮಗುವಿನ ಕುಟುಂಬಕ್ಕೆ ಹಣದ ಆಮಿಷ ಒಡ್ಡಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಶಾಲಾ ಸಿಬ್ಬಂದಿಯ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ನೇರ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಸಿಎ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್-ನವೆಂಬರ್ ಪರೀಕ್ಷೆಗಳಿಗೆ ನೋಂದಣಿ ಆರಂಭ!


















