ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಇನ್ನೂ ಅಂತಿಮ ಹಂತಕ್ಕೆ ತಲುಪಿಲ್ಲ. ಸಚಿವ ಸ್ಥಾನಕ್ಕಾಗಿ ಕಾಯುತ್ತಿರುವ ಆಕಾಂಕ್ಷಿಗಳು ಇದೀಗ ಹೈಕಮಾಂಡ್ ನಾಯಕರ ನಿರ್ಧಾರದತ್ತ ಕಣ್ಣಿಟ್ಟಿದ್ದಾರೆ. ಯಾವುದೇ ಕ್ಷಣದಲ್ಲಿ ಸಂಪುಟ ವಿಸ್ತರಣೆಯ ಪಟ್ಟಿ ಬಿಡುಗಡೆಯಾಗಬಹುದು ಎಂಬ ನಿರೀಕ್ಷೆ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ.
ಸಚಿವ ಸ್ಥಾನ ಆಕಾಂಕ್ಷಿಗಳು ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಯತ್ತ ಗಮನ ಹರಿಸಿದ್ದು, ರಾಜ್ಯ ನಾಯಕರ ಮೇಲೆ ವಿಶ್ವಾಸವಿಟ್ಟು ಬೆಂಗಳೂರಿಗೆ ಮರಳಿದ್ದಾರೆ. ಅಧಿವೇಶನದೊಳಗೆ ಸಚಿವ ಸ್ಥಾನಗಳ ಪಟ್ಟಿ ಅಂತಿಮಗೊಳ್ಳಲಿದೆ ಎಂಬ ಭರವಸೆ ಆಕಾಂಕ್ಷಿಗಳಲ್ಲಿದೆ.
ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ನೀಡಿರುವ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್ ಪರಿಶೀಲಿಸಿದ್ದು, ಯಾರಿಗೆ ಅವಕಾಶ ನೀಡಬೇಕು ಎಂಬ ಬಗ್ಗೆ ವರಿಷ್ಠರ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ. ಮುಂದಿನ ವಾರದೊಳಗೆ ಬಹುತೇಕ ಸಂಪುಟ ಪಟ್ಟಿಯ ತಯಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ.
ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಹೈಕಮಾಂಡ್ ನಾಯಕರು ಎಲ್ಲ ಅಂಶಗಳನ್ನು ಅಳೆದು ತೂಗಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ರಾಜ್ಯ ನಾಯಕರಿಗೆ ಮತ್ತೊಮ್ಮೆ ದೆಹಲಿಗೆ ಬುಲಾವ್ ಬರುವ ಸಾಧ್ಯತೆಯೂ ಇದೆ.
ಸಂಪುಟ ವಿಸ್ತರಣೆಯ ದಿನಾಂಕ ಹಾಗೂ ಸಚಿವರ ಹೆಸರುಗಳ ಬಗ್ಗೆ ಸ್ಪಷ್ಟತೆ ಸಿಗದ ಹಿನ್ನೆಲೆಯಲ್ಲಿ ಆಕಾಂಕ್ಷಿಗಳಲ್ಲಿ ಕುತೂಹಲ ಮುಂದುವರಿದಿದ್ದು, ರಾಜ್ಯ ರಾಜಕೀಯದಲ್ಲಿ ಈ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ : ಕರ್ನಾಟಕ ಲೋಕಾಯುಕ್ತದಲ್ಲಿ 25 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಪಿಯುಸಿ ಪಾಸಾಗಿದ್ದರೆ ಸಾಕು


















