ನವದೆಹಲಿ : ಭಾರತೀಯ ಹವಾಮಾನ ಇಲಾಖೆಯ (IMD) ಮುನ್ಸೂಚನೆಯಂತೆ ಇಂದು (ಬುಧವಾರ) ದೇಶದ ಉತ್ತರ ಮತ್ತು ಪಶ್ಚಿಮ ರಾಜ್ಯಗಳಲ್ಲಿ ಮುಂಗಾರು ಮಳೆ ತೀವ್ರಗೊಳ್ಳಲಿದ್ದು, ದಕ್ಷಿಣ ಭಾರತದಲ್ಲಿ ಮಳೆಯ ಅಬ್ಬರ ತಗ್ಗಲಿದೆ. ಗುಜರಾತ್ ಮತ್ತು ಮಧ್ಯ ಮಹಾರಾಷ್ಟ್ರದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮುಂದಿನ ಒಂದು ವಾರದವರೆಗೆ ದಕ್ಷಿಣ ಪರ್ಯಾಯ ದ್ವೀಪ ಭಾರತದಲ್ಲಿ ಮಳೆ ಪ್ರಮಾಣ ಕ್ಷೀಣಿಸಲಿದೆ ಎಂದು ವರದಿಯಾಗಿದೆ.
ಉತ್ತರ ಮತ್ತು ಪಶ್ಚಿಮ ಭಾರತಕ್ಕೆ ‘ರೆಡ್ ಅಲರ್ಟ್’ ಭೀತಿ
ಗುಜರಾತ್ ಹಾಗೂ ಮಧ್ಯ ಮಹಾರಾಷ್ಟ್ರದ ಪ್ರತ್ಯೇಕ ಪ್ರದೇಶಗಳಲ್ಲಿ 204.4 ಮಿಲಿ ಮೀಟರ್ಗಿಂತಲೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದರೊಂದಿಗೆ ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಕೊಂಕಣ ಮತ್ತು ಗೋವಾ ರಾಜ್ಯಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಷ್ಟ್ರರಾಜಧಾನಿ ದೆಹಲಿ, ಹರ್ಯಾಣ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಬಿಹಾರದಲ್ಲೂ ಸಾಧಾರಣ ಮಳೆಯಾಗಲಿದ್ದು, ದೆಹಲಿಯಲ್ಲಿ ಹಳದಿ ಅಲರ್ಟ್ (Yellow Alert) ಮುಂದುವರಿದಿದೆ. ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದ ಬೆಟ್ಟಗುಡ್ಡಗಳ ಪ್ರದೇಶಗಳಲ್ಲಿ ಸರಣಿ ಮಳೆಯಿಂದಾಗಿ ದಿಢೀರ್ ಪ್ರವಾಹ ಎದುರಾಗುವ ಭೀತಿ ವ್ಯಕ್ತವಾಗಿದೆ.
ದಕ್ಷಿಣ ಭಾರತದಲ್ಲಿ ಒಣಹವೆ
ದಕ್ಷಿಣ ಭಾರತದ ಆಂಧ್ರಪ್ರದೇಶ, ತೆಲಂಗಾಣ, ರಾಯಲಸೀಮಾ, ತಮಿಳುನಾಡು ಮತ್ತು ಕರ್ನಾಟಕದ ಒಳನಾಡು ಪ್ರದೇಶಗಳಲ್ಲಿ ಜುಲೈ 27 ರವರೆಗೆ ಮಳೆಯು ಗಣನೀಯವಾಗಿ ಕಡಿಮೆಯಾಗಲಿದೆ. ಆದರೆ, ಪಶ್ಚಿಮ ಘಟ್ಟಗಳ ಪ್ರಭಾವದಿಂದಾಗಿ ಕರಾವಳಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಸ್ವಲ್ಪಮಟ್ಟಿಗೆ ಮಳೆ ಹಾಗೂ ಗಾಳಿ ಮುಂದುವರಿಯಲಿದೆ. ಮುಂಗಾರು ಮಾರುತಗಳ ಚಲನವಲನ ಉತ್ತರ ಭಾರತದತ್ತ ವಾಲಿರುವುದೇ ದಕ್ಷಿಣ ಭಾರತದಲ್ಲಿ ಮಳೆ ಕಡಿಮೆಯಾಗಲು ಮುಖ್ಯ ಕಾರಣ ಎಂದು ಹವಾಮಾನ ತಜ್ಞರು ಸ್ಪಷ್ಟಪಡಿಸಿದ್ದಾರೆ.
ಹರ್ಯಾಣ, ಈಶಾನ್ಯ ಮಧ್ಯಪ್ರದೇಶ, ನೈಋತ್ಯ ರಾಜಸ್ಥಾನ, ಉತ್ತರ ಛತ್ತೀಸ್ಗಢ ಹಾಗೂ ಬಂಗಾಳ ಕೊಲ್ಲಿಯ ಮೇಲ್ಭಾಗದಲ್ಲಿ ಉಂಟಾಗಿರುವ ಐದು ಚಂಡಮಾರುತದಂಥ ಸುಳಿಗಳು (Cyclonic Circulations) ಉತ್ತರ ಮತ್ತು ಪಶ್ಚಿಮ ಭಾರತದತ್ತ ಹೆಚ್ಚಿನ ತೇವಾಂಶವನ್ನು ಸೆಳೆಯುತ್ತಿವೆ. ಇದರಿಂದಾಗಿ ಈ ಭಾಗಗಳಲ್ಲಿ ಮಳೆ ತೀವ್ರಗೊಂಡಿದೆ. ಮುಂಗಾರಿನ ಈ ಏರಿಳಿತ ಸಾಮಾನ್ಯ ಪ್ರಕ್ರಿಯೆಯಾಗಿದ್ದರೂ, ಜಾಗತಿಕ ತಾಪಮಾನ ಏರಿಕೆಯಿಂದಾಗಿ ಕನಿಷ್ಠ ಅವಧಿಯಲ್ಲಿ ಭಾರಿ ಮಳೆ ಸುರಿಯುವ ಘಟನೆಗಳು ಹೆಚ್ಚಾಗುತ್ತಿವೆ. ಸುರಕ್ಷತೆಯ ದೃಷ್ಟಿಯಿಂದ ಗುಜರಾತ್, ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶದ ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ : ಐಷಾರಾಮಿ ಕಾರುಗಳಿಗೆ E20 ಪೆಟ್ರೋಲ್ ಕಂಟಕ? ಬೆಂಜ್, BMW ವಾಹನಗಳನ್ನೇ ಹಾಳು ಮಾಡ್ತಿದೆ ಎಥೆನಾಲ್ ಇಂಧನ!



















