ಬೆಂಗಳೂರು : ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ಸೈಬರ್ ವಂಚಕರಿಗೆ ನೀಡುತ್ತಿದ್ದ ಆರೋಪದ ಮೇಲೆ ಕೇರಳ ಮೂಲದ ಗುತ್ತಿಗೆದಾರನನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಲ್ಲಂ ಮೂಲದ ಅಜಯನ್ ಬಂಧಿತ ಆರೋಪಿಯಾಗಿದ್ದು, ಡಿಜಿಟಲ್ ಅರೆಸ್ಟ್ ಪ್ರಕರಣದಲ್ಲಿ ಕಿಂಗ್ಪಿನ್ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪ ಎದುರಿಸುತ್ತಿದ್ದಾನೆ.
ವೃತ್ತಿಯಲ್ಲಿ ಗುತ್ತಿಗೆದಾರನಾಗಿದ್ದ ಅಜಯನ್, ಡಿಜಿಟಲ್ ಅರೆಸ್ಟ್ ಪ್ರಕರಣದ ಆರೋಪಿಗಳ ಜೊತೆ ನಂಟು ಬೆಳೆಸಿಕೊಂಡು ನಕಲಿ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ನೀಡುತ್ತಿದ್ದ ಎನ್ನಲಾಗಿದೆ. ಕಮಿಷನ್ ನೀಡುವುದಾಗಿ ನೀಡಿದ ಆಮಿಷಕ್ಕೆ ಬಲಿಯಾಗಿ ಮ್ಯೂಲ್ ಅಕೌಂಟ್ಗಳ ಮಾಹಿತಿಯನ್ನು ಆರೋಪಿಗಳಿಗೆ ಒದಗಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಜಯನ್ ನೀಡಿದ್ದ ಬ್ಯಾಂಕ್ ಖಾತೆಗಳಿಗೆ ಕೋಟಿ ಕೋಟಿ ರೂಪಾಯಿ ಹಣ ಜಮೆಯಾಗಿದ್ದು, ಬಳಿಕ ಕಿಂಗ್ಪಿನ್ಗಳು ಆ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸುತ್ತಿದ್ದರು ಎನ್ನಲಾಗಿದೆ.
ಮ್ಯೂಲ್ ಅಕೌಂಟ್ಗಳ ಮೂಲಕ ಹಣ ವರ್ಗಾವಣೆ ನಡೆಸಲಾಗುತ್ತಿತ್ತು. ತನಿಖೆ ವೇಳೆ ಅಜಯನ್ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಅಜಯನ್ ಖಾತೆಯಿಂದಲೂ ಹಣವನ್ನು ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸೈಬರ್ ಕ್ರೈಂ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಡಿಜಿಟಲ್ ಅರೆಸ್ಟ್ ವಂಚನೆಯ ಹಿಂದೆ ದುಬೈನಲ್ಲಿ ಕುಳಿತು ಕಾರ್ಯನಿರ್ವಹಿಸುತ್ತಿದ್ದ ಮಾಸ್ಟರ್ಮೈಂಡ್ಗಳ ಕೈವಾಡವಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ದುಬೈನಲ್ಲಿ ಕುಳಿತು ಭಾರತದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ನಡೆಸುತ್ತಿದ್ದ ಗ್ಯಾಂಗ್ ಜೊತೆ ಅಜಯನ್ ಸಂಪರ್ಕ ಹೊಂದಿದ್ದ ಆರೋಪ ಕೇಳಿಬಂದಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸೈಬರ್ ಕ್ರೈಂ ಪೊಲೀಸರು, ವಿಚಾರಣೆ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್!



















