ನವದೆಹಲಿ : ನೀಟ್ ಪರೀಕ್ಷಾ ಅಕ್ರಮ ಹಾಗೂ ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಮರುದಿನವೇ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಇಂದು(ಭಾನುವಾರ) ದೇಶದ ನೂತನ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಜಂತರ್ ಮಂತರ್ ಸೇರಿದಂತೆ ದೇಶಾದ್ಯಂತ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ನಡೆಸಿದ ಬೃಹತ್ ಹೋರಾಟದ ನಂತರ ಪ್ರಧಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ಬೆನ್ನಲ್ಲೇ, ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಲಾಗಿತ್ತು.
ಜವಾಬ್ದಾರಿ ನಿರ್ವಹಣೆಯ ಶಪಥ
ಅಧಿಕಾರ ಸ್ವೀಕರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ತಮ್ಮ ಮೇಲೆ ನಂಬಿಕೆಯಿಟ್ಟು ಈ ಗುರುತರ ಜವಾಬ್ದಾರಿ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು. “ನನಗೆ ವಹಿಸಲಾದ ಈ ಜವಾಬ್ದಾರಿಯನ್ನು ಅತ್ಯಂತ ನಮ್ರತೆ ಹಾಗೂ ಕರ್ತವ್ಯ ಪ್ರಜ್ಞೆಯಿಂದ ಸ್ವೀಕರಿಸಿದ್ದೇನೆ. ಪ್ರಧಾನಿಯವರ ಮಾರ್ಗದರ್ಶನದಲ್ಲಿ ನನ್ನ ಸಂಪೂರ್ಣ ಸಾಮರ್ಥ್ಯ ಮತ್ತು ನಿಷ್ಠೆಯಿಂದ ಈ ಹೊಣೆಗಾರಿಕೆಯನ್ನು ನಿರ್ವಹಿಸುತ್ತೇನೆ. ಕಳೆದ 12 ವರ್ಷಗಳ ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಐತಿಹಾಸಿಕ ಸಾಧನೆಗಳಾಗಿವೆ” ಎಂದು ಅವರು ತಿಳಿಸಿದ್ದಾರೆ.
ಮಾಜಿ ಸಚಿವ ಪ್ರಧಾನ್ ಶ್ರಮ ಸ್ಮರಿಸಿದ ನೂತನ ಸಚಿವರು
ಪದತ್ಯಾಗ ಮಾಡಿದ ಧರ್ಮೇಂದ್ರ ಪ್ರಧಾನ್ ಅವರ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಜೋಶಿ, ಕಳೆದ ನಾಲ್ಕೈದು ವರ್ಷಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ಯಶಸ್ವಿಯಾಗಿ ಅನುಷ್ಠಾನಗೊಳಿಸುವಲ್ಲಿ ಪ್ರಧಾನ್ ಅವರ ಪಾತ್ರ ಪ್ರಮುಖವಾಗಿತ್ತು ಎಂದರು. ನೂತನ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ದೇಶದ ಶೈಕ್ಷಣಿಕ ಕ್ಷೇತ್ರವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಶ್ರಮಿಸುವುದಾಗಿಯೂ ಭರವಸೆ ನೀಡಿದರು.
ಪ್ರತಿಭಟನೆ ಹಿಂಪಡೆದ ಸಿಜೆಪಿ, ದೆಹಲಿಯಲ್ಲಿ ಯಥಾಸ್ಥಿತಿ
ಕೇಂದ್ರ ಸರ್ಕಾರದೊಂದಿಗೆ ನಡೆಸಿದ ಸರಣಿ ಮಾತುಕತೆಗಳ ನಂತರ ಹಾಗೂ ಸಚಿವರ ರಾಜೀನಾಮೆ ಬೆನ್ನಲ್ಲೇ, ಪರೀಕ್ಷಾ ಪದ್ಧತಿಯಲ್ಲಿ ಸುಧಾರಣೆ ತರುವ ಸರ್ಕಾರದ ಭರವಸೆಯ ಮೇರೆಗೆ ಸಿಜೆಪಿ ತನ್ನ ಪ್ರತಿಭಟನೆಯನ್ನು ಹಿಂಪಡೆದಿದೆ. ಪ್ರತಿಭಟನೆ ಮುಕ್ತಾಯಗೊಳ್ಳುತ್ತಿದ್ದಂತೆ ದೆಹಲಿಯಲ್ಲಿ ಸ್ಥಗಿತಗೊಂಡಿದ್ದ ಇಂಟರ್ನೆಟ್ ಸೇವೆಗಳನ್ನು ಮರುಸ್ಥಾಪಿಸಲಾಗಿದ್ದು, ಬಂದ್ ಆಗಿದ್ದ 18 ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಇದರೊಂದಿಗೆ ದೇಶದ ರಾಜಧಾನಿಯಲ್ಲಿ ಜನಜೀವನ ಮತ್ತೆ ಸಹಜಸ್ಥಿತಿಗೆ ಮರಳಿದೆ.
ಇದನ್ನೂ ಓದಿ : 47 ಅಧಿಕಾರಿಗಳನ್ನು ವಜಾಗೊಳಿಸಿದ ಬೆನ್ನಲ್ಲೇ NTAಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ!



















