ಬೆಂಗಳೂರು: ದೇಶದ 9 ಕೋಟಿಗೂ ಅಧಿಕ ರೈತರಿಗೆ ಕೇಂದ್ರ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ಕೇಂದ್ರ ಸಂಪುಟವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು 2026-27 ರಿಂದ 2030-31ರವರೆಗೆ ವಿಸ್ತರಿಸಲು ಅನುಮೋದಿಸಿದೆ. ಈ ಅವಧಿಗೆ ಒಟ್ಟು 3.15 ಲಕ್ಷ ಕೋಟಿ ರೂಪಾಯಿ ಹಣವನ್ನು ವ್ಯಯಿಸಲು ತೀರ್ಮಾನಿಸಲಾಗಿದೆ. ಕೇಂದ್ರ ಸರ್ಕಾರದ ಈ ತೀರ್ಮಾನದಿಂದ ಮುಂದಿನ 5 ವರ್ಷಗಳ ಅವಧಿಗೆ ದೇಶದ ರೈತರು ವರ್ಷಕ್ಕೆ 6 ಸಾವಿರ ರೂಪಾಯಿ ಪಡೆಯಲಿದ್ದಾರೆ.
ಕೇಂದ್ರ ಸರ್ಕಾರವು ದೇಶದ 9.49 ಕೋಟಿ ರೈತರಿಗೆ ಪ್ರತಿ ವರ್ಷ 6 ಸಾವಿರ ರೂಪಾಯಿಯನ್ನು ತಲಾ 2 ಸಾವಿರ ರೂಪಾಯಿಗಳಂತೆ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಜಮೆ ಮಾಡುತ್ತದೆ. ನೇರ ನಗದು ವರ್ಗಾವಣೆ (DBT) ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡಲಾಗುತ್ತದೆ. ಈ ಯೋಜನೆಯನ್ನು ಕೇಂದ್ರ ಸರ್ಕಾರವೀಗ ಮುಂದಿನ 5 ವರ್ಷಗಳಿಗೆ ವಿಸ್ತರಣೆ ಮಾಡಿರುವುದು ರೈತರ ಮುಖದಲ್ಲಿ ಸಂತಸ ತಂದಿದೆ. ಇದಕ್ಕಾಗಿ 3.15 ಲಕ್ಷ ಕೋಟಿ ರೂ. ಮೀಸಲಿಡಲು ತೀರ್ಮಾನಿಸಿದೆ.
ಕರ್ನಾಟಕದ ರೈತರು ಸೇರಿ ದೇಶದ 9.49 ಕೋಟಿ ರೈತರು ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ರಸಗೊಬ್ಬರ ಖರೀದಿ ಸೇರಿ ರೈತರಿಗೆ ಕೃಷಿ ಚಟುವಟಿಕೆಗಳಿಗೆ ನೆರವಾಗಲಿ ಎಂದು ಕೇಂದ್ರ ಸರ್ಕಾರವು 2019ರಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯನ್ನು ಜಾರಿಗೆ ತಂದಿದೆ. ಯೋಜನೆ ಅಡಿಯಲ್ಲಿ ಇದುವರೆಗೆ 4.47 ಲಕ್ಷ ಕೋಟಿ ರೂಪಾಯಿಯನ್ನು ರೈತರ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ 4 ತಿಂಗಳಿಗೊಮ್ಮೆ ರೈತರ ಖಾತೆಗಳಿಗೆ 2 ಸಾವಿರ ರೂಪಾಯಿ ಜಮೆ ಮಾಡಲಾಗುತ್ತದೆ. ಇದುವರೆಗೆ 23 ಕಂತುಗಳಲ್ಲಿ ರೈತರ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಪ್ರತಿ ಬಾರಿಯೂ ಸರ್ಕಾರವು ರೈತರ ಖಾತೆಗಳಿಗೆ 18,984 ಕೋಟಿ ರೂಪಾಯಿಗಳನ್ನು ವರ್ಗಾವಣೆ ಮಾಡುತ್ತದೆ.



















