ರಾಂಚಿ : ಜಾರ್ಖಂಡ್ ಪಬ್ಲಿಕ್ ಸರ್ವಿಸ್ ಕಮಿಷನ್ (ಜೆಪಿಎಸ್ಸಿ) ಮತ್ತು ಜಾರ್ಖಂಡ್ ಸ್ಟಾಫ್ ಸೆಲೆಕ್ಷನ್ ಕಮಿಷನ್ (ಜೆಎಸ್ಎಸ್ಸಿ) ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳನ್ನು ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಸೋಮವಾರ ಆರನೇ ದಿನಕ್ಕೆ ಕಾಲಿಟ್ಟಿದೆ.
ಇತ್ತೀಚೆಗಷ್ಟೇ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ರಾಷ್ಟ್ರವ್ಯಾಪಿ ಹೋರಾಟ ಮಾಡಿ, ಕೇಂದ್ರ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯುವಲ್ಲಿ ಯಶಸ್ವಿಯಾದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಈ ವಿದ್ಯಾರ್ಥಿ ಚಳವಳಿಗೂ ಬೆಂಬಲ ಸೂಚಿಸಿದೆ. ಪರೀಕ್ಷಾ ಅಕ್ರಮಗಳಿಗೆ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
‘ಜಂತರ್ ಮಂತರ್’ ಹೋರಾಟದ ನೆನಪು
ರಾಂಚಿಯ ಬಾಪು ವಾಟಿಕಾ ಮೈದಾನದಲ್ಲಿ ಸಣ್ಣ ಮಟ್ಟದಲ್ಲಿ ಆರಂಭವಾದ ಈ ಪ್ರತಿಭಟನೆ ಇದೀಗ ಬೃಹತ್ ವಿದ್ಯಾರ್ಥಿ ಚಳವಳಿಯಾಗಿ ರೂಪುಗೊಂಡಿದೆ. ಜುಲೈ 29ರಂದು ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ಜಮಾಯಿಸಿದ ನೂರಾರು ವಿದ್ಯಾರ್ಥಿಗಳು, ರಾಷ್ಟ್ರಧ್ವಜ ಹಿಡಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ದೃಶ್ಯಗಳು ಇತ್ತೀಚೆಗೆ ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಬೃಹತ್ ಪ್ರತಿಭಟನೆಯನ್ನು ನೆನಪಿಸುವಂತಿದ್ದವು. ನೀಟ್ (NEET) ಪರೀಕ್ಷಾ ಅಕ್ರಮ ಖಂಡಿಸಿ ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ದೆಹಲಿಯಲ್ಲಿ 26 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದ ಸೋನಮ್ ವಾಂಗ್ಚುಕ್ ಮಾದರಿಯಲ್ಲೇ, ಇಲ್ಲಿನ ವಿದ್ಯಾರ್ಥಿ ನಾಯಕ ದೇವೇಂದ್ರ ನಾಥ್ ಮಹತೋ ಕೂಡ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ವ್ಯಾಪಕ ಅಕ್ರಮಗಳ ಹಿನ್ನೆಲೆಯಲ್ಲಿ 14ನೇ ಜೆಪಿಎಸ್ಸಿ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ.
‘ಸರ್ಕಾರವನ್ನು ಎಚ್ಚರಿಸಲು ನಾವು ಎಚ್ಚರವಾಗಿದ್ದೇವೆ’
ಭಾರೀ ಮಳೆ ಮತ್ತು ಸಿಡಿಲಿನಂತಹ ಪ್ರತಿಕೂಲ ಹವಾಮಾನದ ನಡುವೆಯೂ ವಿದ್ಯಾರ್ಥಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರೊಬ್ಬರು ತಮ್ಮ ಆಕ್ರೋಶವನ್ನು ಹೊರಹಾಕುತ್ತಾ, “ಮಳೆಗಾಲದಲ್ಲಿ ಜಾರ್ಖಂಡ್ನ ಆಕಾಶದಲ್ಲಿ ಮುಂಗಾರು ಮೋಡಗಳು ಕವಿಯುವುದು ಸಹಜ, ಆದರೆ ಭ್ರಷ್ಟಾಚಾರದ ಕಪ್ಪು ಮೋಡಗಳು ರಾಜ್ಯದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕಾರ್ಮೋಡವಾಗಿ ಕವಿದಿವೆ. ಈ ಮೋಡಗಳು ಚದುರುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ” ಎಂದು ಎಚ್ಚರಿಸಿದ್ದಾರೆ. ಸರ್ಕಾರದ ಆತ್ಮಸಾಕ್ಷಿ ಎಚ್ಚರಗೊಳ್ಳುವವರೆಗೂ ನಾವು ನಿದ್ರಿಸುವುದಿಲ್ಲ, ಆಡಳಿತ ವ್ಯವಸ್ಥೆಯನ್ನು ಎಚ್ಚರಿಸಲು ನಾವು ಎಚ್ಚರವಾಗಿದ್ದೇವೆ ಎಂದು ವಿದ್ಯಾರ್ಥಿಗಳು ದೃಢ ಸಂಕಲ್ಪ ವ್ಯಕ್ತಪಡಿಸಿದ್ದಾರೆ.
ಸಿಜೆಪಿ ಬೆಂಬಲ ಘೋಷಣೆ
ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ‘ಎಕ್ಸ್’ (X) ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಜೆಪಿ ಮುಖಂಡ ಅಭಿಜಿತ್ ದೀಪ್ಕೆ, “ಪರೀಕ್ಷಾ ಅಕ್ರಮ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಜಾರ್ಖಂಡ್ನ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ್ದೇನೆ. ಸಿಜೆಪಿ ಜಾರ್ಖಂಡ್ನ ಎಲ್ಲಾ ವಿದ್ಯಾರ್ಥಿಗಳ ಬೆನ್ನಿಗೆ ನಿಲ್ಲಲಿದ್ದು, ಅವರ ನ್ಯಾಯಯುತ ಬೇಡಿಕೆಗಳನ್ನು ಬೆಂಬಲಿಸುತ್ತದೆ” ಎಂದು ಭರವಸೆ ನೀಡಿದ್ದಾರೆ.
ಪರೀಕ್ಷಾ ಅಕ್ರಮಗಳಷ್ಟೇ ಅಲ್ಲದೆ, ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯ ಬಗ್ಗೆಯೂ ವಿದ್ಯಾರ್ಥಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೋಳಿ ಸಾಕಾಣಿಕೆ ಮತ್ತು ಇತರ ಪರ್ಯಾಯ ವೃತ್ತಿಗಳಿಂದ ನಾವು ತೃಪ್ತರಾಗಿಲ್ಲ, ನಮಗೆ ಕಾಯಂ ಸರ್ಕಾರಿ ಉದ್ಯೋಗ ಬೇಕು ಎಂದು ಮುಖ್ಯಮಂತ್ರಿಯವರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಜಾರ್ಖಂಡ್ನಲ್ಲಿ ಒಟ್ಟಾರೆ ಶೇ.3.2ರಷ್ಟು ನಿರುದ್ಯೋಗ ದರವಿದ್ದರೂ, ನಗರ ಪ್ರದೇಶಗಳಲ್ಲಿ ಇದು ಶೇ. 8.1ರಷ್ಟಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.
ಇದನ್ನೂ ಓದಿ : ಸಂಸತ್ತಲ್ಲಿ ‘ರಾಮಮಂದಿರ ದೇಣಿಗೆ ಕಳವು’ ವಿವಾದದ ಕಿಚ್ಚು : ‘ಚಂದಾ ಚೋರ್’ ಘೋಷಣೆ ಕೂಗಿ ವಿರೋಧ ಪಕ್ಷಗಳ ಭಾರಿ ಪ್ರತಿಭಟನೆ!



















