ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅಗತ್ಯ ಬಿದ್ದರೆ ಹೈಕೋರ್ಟ್ ಮೊರೆ ಹೋಗುವುದಾಗಿ ಎಚ್ಚರಿಕೆ ನೀಡಿದೆ. ಚುನಾವಣಾ ಆಯೋಗವು ಬಿಜೆಪಿ ಅಣತಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯದ 5.40 ಕೋಟಿ ಮತದಾರರ ಪೈಕಿ ಸುಮಾರು 20 ಶೇಕಡಾ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇದು ಸಾಮಾನ್ಯ ಪರಿಷ್ಕರಣೆ ಅಲ್ಲ, ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ಕಡಿತಗೊಳಿಸುವ ಪ್ರಯತ್ನವಾಗಿದೆ ಎಂದು ನಾಯಕರು ಕಿಡಿಕಾರಿದ್ದಾರೆ.
ಮತದಾರರ ಮನೆಗಳಿಗೆ ಭೇಟಿ ನೀಡದೆ, ಗಣತಿ ನಮೂನೆಗಳನ್ನು ವಿತರಿಸದೆ ಹಾಗೂ ಸಮರ್ಪಕ ಪರಿಶೀಲನೆ ನಡೆಸದೆ ವಿವಿಧ ಕಾರಣಗಳನ್ನು ನೀಡಿ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಕಾಂಗ್ರೆಸ್ ದೂರಿದೆ. ಈ ರೀತಿಯಾಗಿ ಒಂದು ಕೋಟಿಗೂ ಹೆಚ್ಚು ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಪಕ್ಷ ಆರೋಪಿಸಿದೆ.
ಪ್ರತಿ ವಾರ ರಾಜಕೀಯ ಪಕ್ಷಗಳ ಸಭೆ ನಡೆಸಲಾಗುತ್ತಿದೆಯಾದರೂ, ಅದರಲ್ಲಿ ಕಾಂಗ್ರೆಸ್ ನೀಡಿರುವ ಸಲಹೆಗಳನ್ನು ಚುನಾವಣಾ ಆಯೋಗ ಪರಿಗಣಿಸುತ್ತಿಲ್ಲ ಎಂದು ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದ ಎಲ್ಲಾ ಮತಗಟ್ಟೆಗಳಲ್ಲಿ ಸಹಾಯ ಕೇಂದ್ರ ತೆರೆಯುವುದಾಗಿ ಭರವಸೆ ನೀಡಿದ್ದರೂ, ಅದನ್ನು ಜಾರಿಗೊಳಿಸದಿರುವುದು ಚುನಾವಣಾ ಅಧಿಕಾರಿಗಳ ವೈಫಲ್ಯ ಎಂದು ಟೀಕಿಸಿದ್ದಾರೆ.
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ನ್ಯಾಯಸಮ್ಮತ ಕ್ರಮ ಪಾಲನೆಯಾಗಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್, ಅಗತ್ಯವಿದ್ದರೆ ಈ ಪ್ರಕ್ರಿಯೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಿದ್ಧತೆ ನಡೆಸಿದೆ. ಈ ಮೂಲಕ ಚುನಾವಣಾ ಆಯೋಗದ ಕಾರ್ಯವೈಖರಿಯ ವಿರುದ್ಧ ಕಾಂಗ್ರೆಸ್ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಸೂಚನೆ ನೀಡಿದೆ.
ಇದನ್ನೂ ಓದಿ : ಮುಂಗಾರು ಅಧಿವೇಶನಕ್ಕೆ ಬಿಜೆಪಿ ರಣತಂತ್ರ.. ಸರ್ಕಾರಕ್ಕೆ ಸದನದಲ್ಲೇ ಬಿಸಿ ಮುಟ್ಟಿಸಲು ಇಂದು ಮಹತ್ವದ ಸಭೆ


















