ಬೆಂಗಳೂರು : ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆರ್.ಆರ್.ನಗರ ವಲಯ ಕಚೇರಿಯಲ್ಲಿ ಬಿ ಖಾತೆಯಿಂದ ಎ ಖಾತೆಗೆ ಪರಿವರ್ತನೆ ಮಾಡಿಸಿಕೊಳ್ಳಲು ಬಂದ ಸಾರ್ವಜನಿಕರಿಂದ ಭ್ರಷ್ಟ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ವೇಳೆ ಜಿಬಿಎ ಅಧಿಕಾರಿಗಳ ವಿರುದ್ಧ ಸಿಟ್ಟಿಗೆದ್ದ ಸಾರ್ವಜನಿಕರು ಕಚೇರಿಗೆ ತೆರಳಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ.
ಮೇ ತಿಂಗಳಲ್ಲೇ ಬಿ ಖಾತೆಯಿಂದ ಎ ಖಾತೆಗೆ ಪರಿವರ್ತನೆಗಾಗಿ ಅರ್ಜಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ಮಹಿಳೆಯೊಬ್ಬರು ಆರ್.ಆರ್.ನಗರ ವಲಯ ಕಚೇರಿಗೆ ತೆರಳಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಒಬ್ಬೊಬ್ಬ ಅರ್ಜಿದಾರರನ್ನು ಪ್ರತ್ಯೇಕವಾಗಿ ಕರೆಸಿ ಎ ಖಾತೆ ಮಾಡಿಕೊಡಲು ₹40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. “ಜಂಟಿ ಆಯುಕ್ತೆ ಮೇಡಂಗೆ ಕೊಡಬೇಕು, ಇಲ್ಲಿ ಎಲ್ಲವೂ ಹೀಗೇ ನಡೆಯುತ್ತದೆ” ಎಂದು ಅಧಿಕಾರಿಗಳು ಹೇಳಿಕೆ ವಿಡಿಯೋದಲ್ಲಿ ಸೆರೆಯಾಗಿದೆ ಎನ್ನಲಾಗಿದೆ.
ಈ ಘಟನೆ ಕುರಿತು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಪ್ರತಿಕ್ರಿಯಿಸಿದ್ದು, “ಈ ವಿಷಯ ನನ್ನ ಗಮನಕ್ಕೆ ಬಂದಿದೆ. ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿ ತನಿಖೆ ಮಾಡಲಾಗುತ್ತದೆ. ವಿಡಿಯೋದಲ್ಲಿ ಉಲ್ಲೇಖಿಸಿರುವಂತೆ ಭ್ರಷ್ಟಾಚಾರ ನಡೆದಿರುವುದು ದೃಢಪಟ್ಟರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದ್ದಾರೆ.
ಈ ಕುರಿತು ಈಗಾಗಲೇ ಪಶ್ಚಿಮ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಅವರಿಗೆ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ. ಅವರ ವರದಿ ಬಂದ ಬಳಿಕ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ ; ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆಯಲ್ಲಿ 102 ಪೌರ ಕಾರ್ಮಿಕರ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ


















