ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಬಳಿಕವೂ ಕಾಂಗ್ರೆಸ್ನಲ್ಲಿ ಅಸಮಾಧಾನದ ಹೊಗೆ ತಣ್ಣಗಾಗಿಲ್ಲ. ಒಂದೆಡೆ ಸಚಿವ ಸ್ಥಾನ ಸಿಗದಿರುವುದಕ್ಕೆ ಆಕಾಂಕ್ಷಿ ಶಾಸಕರ ಅಸಮಾಧಾನ ಮುಂದುವರಿದಿದ್ದರೆ, ಮತ್ತೊಂದೆಡೆ ಈಗಾಗಲೇ ಸಚಿವರಾಗಿರುವ ಕೆಲವರು ತಮಗೆ ಬೇಕಾದ ಖಾತೆಗಾಗಿ ಪಟ್ಟು ಹಿಡಿದಿರುವುದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತೀವ್ರ ತಲೆನೋವಾಗಿ ಪರಿಣಮಿಸಿದೆ.
ಸಂಪುಟ ವಿಸ್ತರಣೆ ಬಳಿಕ ರಾಜ್ಯದಲ್ಲಿ ಸೃಷ್ಟಿಯಾಗಿರುವ ಅಸಮಾಧಾನ ಹಾಗೂ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ನಾಯಕರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ ಮತ್ತೊಮ್ಮೆ ದೆಹಲಿ ನಾಯಕರೊಂದಿಗೆ ಚರ್ಚೆ ನಡೆಸಿ ಗೊಂದಲಗಳಿಗೆ ಬ್ರೇಕ್ ಹಾಕಲು ಸಿಎಂ ಸಜ್ಜಾಗಿದ್ದಾರೆ. ಇಂದು ಸಂಜೆ ಅಥವಾ ನಾಳೆ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.
ದೆಹಲಿಯಲ್ಲಿ ನಡೆಯಲಿರುವ ಮಾತುಕತೆಯಲ್ಲಿ ಸಚಿವರ ಖಾತೆಗಳ ಬದಲಾವಣೆ, ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರಿಗೆ ಅವಕಾಶ ನೀಡುವ ವಿಚಾರ ಸೇರಿದಂತೆ ಹಲವು ಪ್ರಮುಖ ವಿಷಯಗಳು ಚರ್ಚೆಯಾಗುವ ಸಾಧ್ಯತೆ ಇದೆ. ಈಗಿರುವ ಸಚಿವ ಸಂಪುಟದಲ್ಲೇ ಒಂದೆರಡು ಸಚಿವರಿಗೆ ಸ್ಥಾನ ಕಳೆದುಕೊಳ್ಳುವ ಆತಂಕ ಎದುರಾಗಿದ್ದು, ಕೆಲ ಸಚಿವರ ಖಾತೆಗಳನ್ನು ಬದಲಾವಣೆ ಮಾಡುವ ಸಾಧ್ಯತೆಯೂ ಇದೆ ಎಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ನಡೆದಿದೆ.
ಸದ್ಯದ ಲೆಕ್ಕಾಚಾರದ ಪ್ರಕಾರ ಒಕ್ಕಲಿಗ ಸಮುದಾಯದಿಂದ ಐವರು, ಲಿಂಗಾಯತ ಸಮುದಾಯದಿಂದ ಏಳು ಹಾಗೂ ಅಲ್ಪಸಂಖ್ಯಾತ ಸಮುದಾಯದಿಂದ ಮೂವರು ಸಚಿವರಾಗಿದ್ದಾರೆ. ಈ ಮೂರು ಸಮುದಾಯಗಳಲ್ಲಿರುವ ಕೆಲ ಸಚಿವರನ್ನು ಸಂಪುಟದಿಂದ ಕೈಬಿಟ್ಟು, ಸಚಿವ ಸ್ಥಾನಕ್ಕಾಗಿ ಕಾಯುತ್ತಿರುವ ಅಸಮಾಧಾನಿತ ಶಾಸಕರಿಗೆ ಅವಕಾಶ ನೀಡುವ ಸಾಧ್ಯತೆಯ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.
ಒಂದೆಡೆ ಸಚಿವ ಸ್ಥಾನ ಸಿಗದ ಹಿರಿಯ ಶಾಸಕರನ್ನು ಸಮಾಧಾನಪಡಿಸುವ ಸವಾಲು, ಮತ್ತೊಂದೆಡೆ ಸಚಿವರಿಗೆ ಖಾತೆ ಹಂಚಿಕೆ ಹಾಗೂ ಖಾತೆ ಬದಲಾವಣೆಯ ಬೇಡಿಕೆಗಳನ್ನು ನಿಭಾಯಿಸುವ ಅನಿವಾರ್ಯತೆ ಸಿಎಂ ಡಿ.ಕೆ. ಶಿವಕುಮಾರ್ ಅವರ ಮುಂದಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ನಲ್ಲಿನ ಈ ಗೊಂದಲಗಳಿಗೆ ಹೈಕಮಾಂಡ್ ಯಾವ ರೀತಿಯ ಪರಿಹಾರ ಸೂಚಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.
ಸಚಿವ ಸಂಪುಟ ವಿಸ್ತರಣೆ ಮುಗಿದರೂ ಕಾಂಗ್ರೆಸ್ನೊಳಗಿನ ಅಸಮಾಧಾನ ಸಂಪೂರ್ಣವಾಗಿ ಶಮನವಾಗದ ಹಿನ್ನೆಲೆಯಲ್ಲಿ ಇದೀಗ ಎಲ್ಲರ ಕಣ್ಣು ಮತ್ತೆ ದೆಹಲಿ ಬೆಳವಣಿಗೆಗಳತ್ತ ನೆಟ್ಟಿದೆ. ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿಯ ಬಳಿಕ ಸಚಿವರ ಖಾತೆ ಹಂಚಿಕೆ ಹಾಗೂ ಅಸಮಾಧಾನಿತ ಶಾಸಕರಿಗೆ ಸಂಬಂಧಿಸಿದಂತೆ ಯಾವ ನಿರ್ಧಾರ ಹೊರಬೀಳಲಿದೆ ಎಂಬುದು ಸದ್ಯದ ರಾಜಕೀಯ ಕುತೂಹಲವಾಗಿದೆ.
ಇದನ್ನೂ ಓದಿ : ಬಿಡದಿ ಟೌನ್ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!



















