ರಾಂಚಿ : ನೇಮಕಾತಿ ಅಕ್ರಮಗಳನ್ನು ಖಂಡಿಸಿ ಸೋಮವಾರ ಜಾರ್ಖಂಡ್ ವಿಧಾನಸಭೆ ಚಲೋ ನಡೆಸಿದ ಉದ್ಯೋಗಾಕಾಂಕ್ಷಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಬಲಪ್ರಯೋಗ ಮತ್ತು ಲಾಠಿಚಾರ್ಜ್ ಖಂಡಿಸಿ ಬಿಜೆಪಿ ಮಂಗಳವಾರ ರಾಜ್ಯವ್ಯಾಪಿ ಬಂದ್ಗೆ ಕರೆ ನೀಡಿದೆ. ಜಾರ್ಖಂಡ್ ಮುಕ್ತಿ ಮೋರ್ಚಾ (JMM) ನೇತೃತ್ವದ ಸರ್ಕಾರವು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವ ಬದಲು ದೌರ್ಜನ್ಯ ಎಸಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಭಾರಿ ಪ್ರತಿಭಟನೆ ನಡೆಸಿದ್ದು, ರಾಜ್ಯದಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ.
ಟೈರ್ಗೆ ಬೆಂಕಿ, ರಸ್ತೆ ಸಂಚಾರ ಸ್ತಬ್ಧ
ಬೆಳಗ್ಗೆ 8 ಗಂಟೆಯಿಂದ ಆರಂಭವಾದ ಬಂದ್ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ರಾಂಚಿಯ ಕಿಶೋರಗಂಜ್, ಅರ್ಗೋರಾ, ಕಾಂಕೆ ಹಾಗೂ ಹರ್ಮು ಚೌಕ್ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ರಸ್ತೆ ತಡೆ ನಡೆಸಿದ್ದಾರೆ. ನ್ಯೂಕ್ಲಿಯಸ್ ಮಾಲ್ ಬಳಿ ಹಾಗೂ ಪ್ರಮುಖ ವೃತ್ತಗಳಲ್ಲಿ ಟೈರ್ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದಾಗಿ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡು, ಪ್ರಯಾಣಿಕರು ಪರದಾಡುವಂತಾಯಿತು. ಪ್ರತಿಭಟನಾಕಾರರನ್ನು ನಿಯಂತ್ರಿಸುವ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನೂಕಾಟ, ತಳ್ಳಾಟವೂ ನಡೆಯಿತು. ಭದ್ರತಾ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕ ಸಾರಿಗೆಯನ್ನು ಕಡಿತಗೊಳಿಸಲಾಗಿತ್ತು ಮತ್ತು ವ್ಯಾಪಾರ ವಹಿವಾಟುಗಳು ಸ್ತಬ್ಧಗೊಂಡಿದ್ದವು.
ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗ
ಜೆಪಿಎಸ್ಸಿ (JPSC) ಮತ್ತು ಜೆಎಸ್ಎಸ್ಸಿ (JSSC) ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜುಲೈ 25ರಿಂದ ಸುದೀರ್ಘ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು ಸೋಮವಾರ ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ್ದರು. ಈ ವೇಳೆ ಬ್ಯಾರಿಕೇಡ್ಗಳನ್ನು ಮುರಿದು ಮುಂದೆ ನುಗ್ಗಿದ ಸಾವಿರಾರು ಅಭ್ಯರ್ಥಿಗಳನ್ನು ತಡೆಯಲು ಪೊಲೀಸರು ಜಲಫಿರಂಗಿ, ಅಶ್ರುವಾಯು ಬಳಸಿ, ಲಾಠಿಪ್ರಹಾರ ನಡೆಸಿದ್ದರು. ಈ ಸಂಘರ್ಷದಲ್ಲಿ 14ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದವು. ಇದರ ಬೆನ್ನಲ್ಲೇ ಒಂಬತ್ತು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿದ್ಯಾರ್ಥಿ ಮುಖಂಡ ದೇವೇಂದ್ರ ನಾಥ್ ಮಹತೋ ಅವರ ಸ್ಥಿತಿಯೂ ಗಂಭೀರಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿದ್ಯಾರ್ಥಿಗಳ ಸ್ಪಷ್ಟನೆ
ಮತ್ತೊಂದೆಡೆ, ಈ ಹೋರಾಟಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿರುವ ವಿದ್ಯಾರ್ಥಿ ಸಂಘಟನೆಯ ಮುಖಂಡರು, ತಮ್ಮ ಪ್ರತಿಭಟನೆಗೂ ಯಾವುದೇ ರಾಜಕೀಯ ಪಕ್ಷಕ್ಕೂ ನೇರ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ. ತಮ್ಮ ಬೇಡಿಕೆಗಳಿಗೆ ಬೆಂಬಲ ನೀಡುವವರನ್ನು ಸ್ವಾಗತಿಸುವುದಾಗಿ ಹೇಳಿರುವ ವಿದ್ಯಾರ್ಥಿಗಳು, ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರೊಂದಿಗೆ ನೇರ ಮಾತುಕತೆಗೆ ಪಟ್ಟು ಹಿಡಿದಿದ್ದಾರೆ. ಪರೀಕ್ಷಾ ಅಕ್ರಮಗಳ ಕುರಿತು ಸ್ವತಂತ್ರ ಸಿಬಿಐ ಅಥವಾ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು ಹಾಗೂ ಪರೀಕ್ಷಾ ಮಂಡಳಿಗಳಲ್ಲಿ ಪಾರದರ್ಶಕತೆ ತರಬೇಕು ಎಂಬುದು ಉದ್ಯೋಗಾಕಾಂಕ್ಷಿಗಳ ಪ್ರಮುಖ ಬೇಡಿಕೆಯಾಗಿದೆ.
ಇದನ್ನೂ ಓದಿ : ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟ ; ಸಿದ್ದರಾಮಯ್ಯ ಮೌನಕ್ಕೆ ಜಾರಿದ್ಯಾಕೆ?



















