ಬೆಂಗಳೂರು : ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ನಡೆಸಲು ಕರೆ ನೀಡಲಾಗಿದ್ದು, ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸುವುದು ಸೇರಿದಂತೆ ಕರ್ನಾಟಕದ ಹಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಯಲಿದೆ.
ಬಂದ್ನ ಭಾಗವಾಗಿ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಟೌನ್ಹಾಲ್ನಿಂದ ಭಾರಿ ಮೆರವಣಿಗೆ ಆರಂಭವಾಗಲಿದೆ. ಟೌನ್ಹಾಲ್ನಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಯಲಿದ್ದು, ಹಲವು ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರನ್ನು 15 ದಿನಗಳ ಕಾಲ ಹರಿಸುವಂತೆ ಆದೇಶಿಸಿರುವುದಕ್ಕೆ ಕನ್ನಡ ಒಕ್ಕೂಟ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯದ ಜಲ ಸಂಪನ್ಮೂಲ ಹಾಗೂ ರೈತರ ಹಿತದೃಷ್ಟಿಯಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಬಂದ್ ಮೂಲಕ ಸರ್ಕಾರದ ಗಮನ ಸೆಳೆಯಲು ಕನ್ನಡಪರ ಸಂಘಟನೆಗಳು ಮುಂದಾಗಿವೆ.
ಇದರ ಜೊತೆಗೆ ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆಗಳನ್ನು ಜಾರಿಗೊಳಿಸಬೇಕು, ಮೇಕೆದಾಟು ಯೋಜನೆಯನ್ನು ತಕ್ಷಣ ಅನುಷ್ಠಾನಗೊಳಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಡಲಾಗಿದೆ. ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು ಎಂಬ ಒತ್ತಾಯವೂ ಪ್ರತಿಭಟನೆಯಲ್ಲಿ ಇರಲಿದೆ.
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬುದನ್ನು ಸ್ಪಷ್ಟಪಡಿಸುವ ನಿರ್ಣಯ ಕೈಗೊಳ್ಳಬೇಕು ಎಂಬ ಬೇಡಿಕೆಯನ್ನೂ ಕನ್ನಡ ಒಕ್ಕೂಟ ಮುಂದಿಟ್ಟಿದೆ. ರಾಜ್ಯದ ಗಡಿ, ನೀರು ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಬೇಕು ಎಂಬ ಸಂದೇಶವನ್ನು ಬಂದ್ ಹಾಗೂ ಮೆರವಣಿಗೆಯ ಮೂಲಕ ನೀಡಲು ಸಂಘಟನೆಗಳು ಸಜ್ಜಾಗಿವೆ.
ಮೆರವಣಿಗೆಯಲ್ಲಿ ಸಾ.ರಾ. ಗೋವಿಂದು, ಕೆ.ಆರ್. ಕುಮಾರ್, ಶಿವರಾಮೇಗೌಡ, ಕರವೇ ಪ್ರವೀಣ್ ಕುಮಾರ್ ಶೆಟ್ಟಿ, ಮಂಜುನಾಥ್ ದೇವ್, ಹೆಚ್.ವಿ. ಗಿರೀಶ್ ಗೌಡ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳ ಮುಖಂಡರು ಭಾಗವಹಿಸುವ ನಿರೀಕ್ಷೆಯಿದೆ.
ಬೆಂಗಳೂರಲ್ಲಿ ನೀರಸ ಪ್ರತಿಕ್ರಿಯೆ
ಕರ್ನಾಟಕ ಬಂದ್ಗೆ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಮುಖ ಕನ್ನಡ ಸಂಘಟನೆಗಳು ಹಾಗೂ ಸಾರಿಗೆ ಒಕ್ಕೂಟಗಳು ಬಂದ್ಗೆ ಬೆಂಬಲ ನೀಡದಿರುವುದರಿಂದ ನಗರದಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕ ಜನಜೀವನ ಎಂದಿನಂತೆ ಸಾಗುತ್ತಿದೆ.
ಬಂದ್ ಹಿನ್ನೆಲೆಯಲ್ಲಿ ನಗರದಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಸಾರ್ವಜನಿಕರಿಗೆ ಹಾಗೂ ಆಸ್ತಿಗೆ ಯಾವುದೇ ಹಾನಿಯಾಗದಂತೆ ತಡೆಯಲು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಕೇಂದ್ರ, ಪಶ್ಚಿಮ, ವಾಯುವ್ಯ ಹಾಗೂ ಎಲೆಕ್ಟ್ರಾನಿಕ್ ಸಿಟಿ ವಿಭಾಗಗಳಲ್ಲಿ ಬಿಗಿ ಪೊಲೀಸ್ ಕಾವಲು ಹಾಕಲಾಗಿದೆ. ತಮಿಳು ಭಾಷಿಕರು ಹೆಚ್ಚಾಗಿ ವಾಸಿಸುವ ಪ್ರದೇಶಗಳು ಹಾಗೂ ಗಡಿ ಭಾಗಗಳಲ್ಲಿ ಇನ್ಸ್ಪೆಕ್ಟರ್ಗಳ ನೇತೃತ್ವದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.
ಇದನ್ನೂ ಓದಿ : ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್ಗುಪ್ತಾ ಬೆಂಬಲ!



















