ಲಕ್ನೋ : ದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶಾದ್ಯಂತ ಜೆನ್ ಝೀಗಳ ಪ್ರತಿಭಟನೆ ಭಾರೀ ಸದ್ದು ಮಾಡಿದ ಬೆನ್ನಲ್ಲೇ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಶಿಕ್ಷಕರ ಕೊರತೆಯನ್ನು ಖಂಡಿಸಿ ನೂರಾರು ಶಾಲಾ ವಿದ್ಯಾರ್ಥಿಗಳು ರಸ್ತೆಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಲಕ್ನೋದ ಪಾರಾ ಪೊಲೀಸ್ ಠಾಣಾ ವ್ಯಾಪ್ತಿಯ ಬುದೇಶ್ವರ ಕ್ರಾಸಿಂಗ್ ಬಳಿ ಗುರುವಾರ ಶಾಲಾ ಸಮವಸ್ತ್ರದಲ್ಲಿದ್ದ ಜೈ ನಾರಾಯಣ ಶಾಲೆಯ ವಿದ್ಯಾರ್ಥಿಗಳು ರಸ್ತೆಯ ಮೇಲೆ ಕುಳಿತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ವಿದ್ಯಾರ್ಥಿಗಳ ಏಕಾಏಕಿ ಪ್ರತಿಭಟನೆಯಿಂದಾಗಿ ಭಾರೀ ದಟ್ಟಣೆಯಿರುವ ಈ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ಶಾಲೆಯಲ್ಲಿ ಶಿಕ್ಷಕರಿಲ್ಲದೆ ನಿಯಮಿತ ತರಗತಿಗಳು ನಡೆಯುತ್ತಿಲ್ಲ. ಮುಖ್ಯವಾದ ವಿಷಯಗಳಿಗೆ ಶಿಕ್ಷಕರಿಲ್ಲದ ಕಾರಣ ಮುಂಬರುವ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ತೀವ್ರ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ಮತ್ತು ಸ್ಥಳೀಯರು ವಿದ್ಯಾರ್ಥಿಗಳ ಹೋರಾಟವನ್ನು ಕುತೂಹಲದಿಂದ ವೀಕ್ಷಿಸಿದರು.
ಸ್ಥಳಕ್ಕೆ ಸಚಿವರ ಭೇಟಿ : ಸಾಂತ್ವನ ಹೇಳಿ ಶಾಲೆಗೆ ಕಳುಹಿಸಿದ ಅಸಿಮ್ ಅರುಣ್
ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ಕನ್ನೌಜ್ಗೆ ತೆರಳುತ್ತಿದ್ದ ಉತ್ತರ ಪ್ರದೇಶದ ಸಮಾಜ ಕಲ್ಯಾಣ ಸಚಿವ ಅಸಿಮ್ ಅರುಣ್ ಅವರು ತಮ್ಮ ವಾಹನವನ್ನು ನಿಲ್ಲಿಸಿ ವಿದ್ಯಾರ್ಥಿಗಳ ಬಳಿ ತೆರಳಿ ಮನವಿ ಆಲಿಸಿದರು. ವಿದ್ಯಾರ್ಥಿಗಳ ದೂರುಗಳನ್ನು ತಾಳ್ಮೆಯಿಂದ ಆಲಿಸಿದ ಸಚಿವರು, ಪರಿಸ್ಥಿತಿಯನ್ನು ತಿಳಿಗೊಳಿಸಿ, ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಚರ್ಚಿಸಿ ಶಿಕ್ಷಕರ ಕೊರತೆಯನ್ನು ತಕ್ಷಣವೇ ನೀಗಿಸುವ ಭರವಸೆ ನೀಡಿದರು. ತದನಂತರ ಸಚಿವರೇ ಮುತುವರ್ಜಿ ವಹಿಸಿ ವಿದ್ಯಾರ್ಥಿಗಳನ್ನು ಶಾಲಾ ಅವರಣಕ್ಕೆ ಕರೆದೊಯ್ದರು.
ದೇಶದ ವಿವಿಧ ರಾಜ್ಯಗಳಲ್ಲಿ ಶಿಕ್ಷಕರ ಕೊರತೆ ಹಾಗೂ ವರ್ಗಾವಣೆಯನ್ನು ಖಂಡಿಸಿ ‘ಜೆನ್ ಆಲ್ಫಾ’ (Gen Alpha) ವಿದ್ಯಾರ್ಥಿಗಳು ಬೀದಿಗಿಳಿಯುತ್ತಿರುವ ಸರಣಿ ಘಟನೆಗಳಿಗೆ ಈಗ ಲಕ್ನೋ ಕೂಡ ಸೇರ್ಪಡೆಯಾಗಿದೆ. ಇತ್ತೀಚೆಗಷ್ಟೇ ಜಾರ್ಖಂಡ್ನ ಗರ್ಹ್ವಾ ಜಿಲ್ಲೆಯಲ್ಲಿ ನೆಚ್ಚಿನ ಶಿಕ್ಷಕರ ವರ್ಗಾವಣೆ ಖಂಡಿಸಿ ಮತ್ತು ರಾಜಸ್ಥಾನದ ಅಲ್ವಾರ್ನಲ್ಲಿ ಶಾಲೆಗೆ ಬೀಗ ಜಡಿದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇರುವುದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು, ಶಿಕ್ಷಣ ಇಲಾಖೆಯು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ಸಾರ್ವಜನಿಕರೂ ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ : ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ


















