ಬೆಂಗಳೂರು : ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೇಯಿಂಗ್ ಗೆಸ್ಟ್ಗಳು, ಹಾಸ್ಟೆಲ್ಗಳು, ಹೋಟೆಲ್ಗಳು, ರೆಸ್ಟೋರೆಂಟ್ಗಳು ಹಾಗೂ ಆಹಾರ ತಯಾರಿಕಾ ಕೇಂದ್ರಗಳ ವಿರುದ್ಧ ಪಾಲಿಕೆ ಅಧಿಕಾರಿಗಳು ವಿಶೇಷ ತಪಾಸಣಾ ಕಾರ್ಯಾಚರಣೆ ಕೈಗೊಳ್ಳಲಿದ್ದಾರೆ. ಸಾರ್ವಜನಿಕರ ಸುರಕ್ಷತೆ, ಆರೋಗ್ಯ ಮತ್ತು ನೈರ್ಮಲ್ಯಕ್ಕೆ ಆದ್ಯತೆ ನೀಡುವಂತೆ ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕರ್ನಾಟಕ ಹೈಕೋರ್ಟ್ ನಿರ್ದೇಶನ ಹಾಗೂ ಸಾರ್ವಜನಿಕರಿಂದ ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಗೇರ್ ಸ್ಕೂಲ್ ರಸ್ತೆ, ನ್ಯೂ ಹಾರಿಜಾನ್ ಕಾಲೇಜು ಸುತ್ತಮುತ್ತ ಹಾಗೂ ತೂಬರಹಳ್ಳಿ ಪ್ರದೇಶಗಳಲ್ಲಿನ ಪಿಜಿಗಳ ಮೇಲೆ ವಿಶೇಷ ನಿಗಾ ವಹಿಸಲಾಗಿದೆ. ಪಿಜಿಗಳ ತಪಾಸಣೆಗೆ ನಗರ ಯೋಜನೆ, ಎಂಜಿನಿಯರಿಂಗ್, ಆರೋಗ್ಯ ಹಾಗೂ ಘನ ತ್ಯಾಜ್ಯ ನಿರ್ವಹಣಾ ವಿಭಾಗದ ಅಧಿಕಾರಿಗಳನ್ನು ಒಳಗೊಂಡ ಜಂಟಿ ತಂಡ ರಚಿಸಲಾಗಿದೆ.
ಕಟ್ಟಡ ಪರವಾನಗಿ, ಅನುಮೋದಿತ ನಕ್ಷೆ, ಸೆಟ್ಬ್ಯಾಕ್, ಅನಧಿಕೃತ ನಿರ್ಮಾಣ, ಹೆಚ್ಚುವರಿ ಮಹಡಿಗಳು ಹಾಗೂ ಕಟ್ಟಡದ ಅನುಮೋದಿತ ಬಳಕೆಯ ಬದಲಾವಣೆ ಸೇರಿದಂತೆ ಹಲವು ಅಂಶಗಳನ್ನು ಪರಿಶೀಲಿಸಲಾಗುತ್ತದೆ. ಇದರ ಜೊತೆಗೆ ವ್ಯಾಪಾರ ಪರವಾನಗಿ, ಕಟ್ಟಡದ ರಚನಾತ್ಮಕ ಸುರಕ್ಷತೆ, ಅಗ್ನಿ ಸುರಕ್ಷತಾ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ಒಳಚರಂಡಿ, ತ್ಯಾಜ್ಯ ನೀರು ಹಾಗೂ ಘನ ತ್ಯಾಜ್ಯ ನಿರ್ವಹಣೆಯನ್ನೂ ಪರಿಶೀಲಿಸಲಾಗುತ್ತದೆ. ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಮತ್ತು ಚರಂಡಿಗಳ ಒತ್ತುವರಿ ಹಾಗೂ ಪಾರ್ಕಿಂಗ್ ವ್ಯವಸ್ಥೆಯ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ.
ಪ್ರತಿಯೊಂದು ಪಿಜಿಯ ಪರಿಶೀಲನಾ ವರದಿಯನ್ನು ಆಸ್ತಿವಾರು ಸಿದ್ಧಪಡಿಸಿ, ಅಗತ್ಯವಿದ್ದಲ್ಲಿ ಉಲ್ಲಂಘನೆಗಳ ಜಿಯೋ-ಟ್ಯಾಗ್ ಛಾಯಾಚಿತ್ರಗಳನ್ನು ದಾಖಲಿಸುವಂತೆ ಸೂಚಿಸಲಾಗಿದೆ. ಸಂಪೂರ್ಣ ತಪಾಸಣಾ ಕಾರ್ಯವನ್ನು ಏಳು ದಿನಗಳೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಆಯುಕ್ತರು ಗಡುವು ನೀಡಿದ್ದಾರೆ.
ಇನ್ನು ಆಹಾರ ಸುರಕ್ಷತೆಗೂ ಪಾಲಿಕೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಹೋಟೆಲ್, ಧಾಬಾ, ರೆಸ್ಟೋರೆಂಟ್ ಹಾಗೂ ಆಹಾರ ಪೂರೈಕೆ ಕೇಂದ್ರಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಸಂಗ್ರಹಣೆ ಅಥವಾ ಬಳಕೆ, ಕಳಪೆ ನೈರ್ಮಲ್ಯ, ಅಸುರಕ್ಷಿತ ನೀರಿನ ಬಳಕೆ ಹಾಗೂ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ಆಹಾರ ತಯಾರಿಕಾ ಸ್ಥಳಗಳ ಸ್ವಚ್ಛತೆ, ಆಹಾರ ಪದಾರ್ಥಗಳ ವೈಜ್ಞಾನಿಕ ಸಂಗ್ರಹಣೆ, ಸಿಬ್ಬಂದಿಯ ವೈಯಕ್ತಿಕ ಸ್ವಚ್ಛತೆ, ಕೀಟ ನಿಯಂತ್ರಣ ಮತ್ತು ಅಗತ್ಯ ತಾಪಮಾನ ನಿಯಂತ್ರಣ ವ್ಯವಸ್ಥೆಗಳನ್ನೂ ನಿಯಮಿತವಾಗಿ ಪರಿಶೀಲಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಪಾಸಣೆ ಮತ್ತು ಜಾರಿ ಕಾರ್ಯದಲ್ಲಿ ಅಧಿಕಾರಿಗಳು ಅಥವಾ ಸಿಬ್ಬಂದಿಯಿಂದ ನಿರ್ಲಕ್ಷ್ಯ ಕಂಡುಬಂದರೆ ಅವರನ್ನೇ ನೇರ ಜವಾಬ್ದಾರರನ್ನಾಗಿ ಪರಿಗಣಿಸಿ ಶಿಸ್ತು ಕ್ರಮಕ್ಕೆ ವರದಿ ಸಲ್ಲಿಸಲಾಗುವುದು ಎಂದು ಆಯುಕ್ತ ಡಿ.ಎಸ್. ರಮೇಶ್ ಎಚ್ಚರಿಕೆ ನೀಡಿದ್ದಾರೆ. ಪಿಜಿ, ಹಾಸ್ಟೆಲ್ ಹಾಗೂ ಆಹಾರ ತಯಾರಿಕಾ ಕೇಂದ್ರಗಳು ಅಗತ್ಯ ಪರವಾನಗಿಗಳನ್ನು ಪಡೆದು, ಕಟ್ಟಡ, ಆರೋಗ್ಯ, ನೈರ್ಮಲ್ಯ, ತ್ಯಾಜ್ಯ ನಿರ್ವಹಣೆ ಮತ್ತು ಆಹಾರ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪಾಲಿಕೆ ಮನವಿ ಮಾಡಿದೆ.
ಇದನ್ನೂ ಓದಿ : ಮದುವೆ ಮನೆಯಲ್ಲೂ ‘ಡಿ ಬಾಸ್, ಡಿ ಬಾಸ್’ ಜೈಕಾರ ; ಫ್ಯಾನ್ಸ್ಗೆ ವಿಜಯಲಕ್ಷ್ಮಿ ಹೇಳಿದ್ದೇನು?



















