ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ರಾಜ್ಯದ ರೈತರು ಹಾಗೂ ಶಿಕ್ಷಕರ ಪರವಾಗಿ ಇಂದು ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ. ಹಿಂದಿನ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ಅವಧಿಯಲ್ಲಿ ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಪ್ರತಿಭಟನೆ ನಡೆಸಿದ್ದ ರೈತರು ಮತ್ತು ಶಿಕ್ಷಕರ ವಿರುದ್ಧ ದಾಖಲಾಗಿದ್ದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲಾಗುವುದು ಎಂದು ಅವರು ಘೋಷಿಸಿದ್ದಾರೆ.
ತಮಿಳುನಾಡು ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ವಿಜಯ್, ಮೇ 2021ರಿಂದ 2026ರ ಅವಧಿಯಲ್ಲಿ ಪ್ರತಿಭಟನೆ ನಡೆಸಿದ್ದಕ್ಕಾಗಿ ರೈತರು ಮತ್ತು ಶಿಕ್ಷಕರ ಮೇಲೆ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿತ್ತು. ಪ್ರಕರಣಗಳು ಇನ್ನೂ ಬಾಕಿ ಉಳಿದಿರುವುದರಿಂದ ಅನೇಕರು ನಿರಂತರವಾಗಿ ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಈ ಹಿಂದಿನ ಸರ್ಕಾರವು ಪ್ರತಿಭಟನಾಕಾರರನ್ನು ಅತ್ಯಂತ ಅಮಾನವೀಯವಾಗಿ ನಡೆಸಿಕೊಂಡಿತ್ತು ಎಂದು ಆರೋಪಿಸಿದ ಅವರು, “ನಮ್ಮ ಸರ್ಕಾರವು ರೈತರು ಮತ್ತು ಶಿಕ್ಷಕರ ನ್ಯಾಯಯುತ ಬೇಡಿಕೆಗಳ ಪರವಾಗಿ ನಿಲ್ಲಲಿದೆ. ಹೀಗಾಗಿ ಅವರೆಲ್ಲರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯುತ್ತೇವೆ” ಎಂದು ಭರವಸೆ ನೀಡಿದರು.
ವಿವಿಧ ಯೋಜನೆಗಳ ವಿರುದ್ಧದ ಹೋರಾಟಗಳು
ರಾಜ್ಯದ ಬೆನ್ನೆಲುಬಾಗಿರುವ ರೈತರು ಸಿಪ್ಕಾಟ್ (SIPCOT) ಕೈಗಾರಿಕಾ ಅಭಿವೃದ್ಧಿ ಯೋಜನೆಗಳು ಮತ್ತು ಉದ್ದೇಶಿತ ಪರಂದೂರು ವಿಮಾನನಿಲ್ದಾಣ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾಗ ಅವರ ವಿರುದ್ಧ ಕೇಸುಗಳನ್ನು ಜಡಿಯಲಾಗಿತ್ತು. ಅದೇ ರೀತಿ ಶಿಕ್ಷಕರು ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಧರಣಿ ನಡೆಸಿದ್ದರೂ ಅವರ ಮೇಲೆಯೂ ಮೊಕದ್ದಮೆಗಳನ್ನು ಹೂಡಲಾಗಿತ್ತು. ಇಂತಹ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ರದ್ದುಗೊಳಿಸುವುದರಿಂದ ಸಾರ್ವಜನಿಕರು ಮತ್ತು ಸರ್ಕಾರದ ನಡುವೆ ನಂಬಿಕೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ವಿಜಯ್ ಸ್ಪಷ್ಟಪಡಿಸಿದ್ದಾರೆ.
ಇತರ ಪ್ರಕರಣಗಳ ಹಿಂಪಡೆಯುವಿಕೆಗೆ ಒತ್ತಾಯ
ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಿರುವ ಸಿಪಿಐ (CPI), ನೀಟ್ ಪರೀಕ್ಷೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಮೇಲಿನ ಪ್ರಕರಣಗಳನ್ನೂ ಹಿಂಪಡೆಯಬೇಕೆಂದು ಮನವಿ ಮಾಡಿದೆ. ಇದರ ಜೊತೆಗೆ ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ (NLC) ಯೋಜನೆ ವಿರುದ್ಧ ಹೋರಾಡಿದವರ ಮೇಲಿನ ಪ್ರಕರಣಗಳನ್ನು ರದ್ದುಗೊಳಿಸುವಂತೆ ಪಿಎಂಕೆ (PMK) ಆಗ್ರಹಿಸಿದೆ. ಈ ಬೇಡಿಕೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ನಿರ್ಮಲ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ : ಮುಂಬೈ ತಂಡದ ನಾಯಕತ್ವಕ್ಕೆ ಅಯ್ಯರ್ vs ಸೂರ್ಯಕುಮಾರ್ ; ಯಾರಿಗೆ ಸಿಗಲಿದೆ ಹೊಣೆ?


















