ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಅವರಿಗೆ ಕೊಂಚ ನೆಮ್ಮದಿ ಸಿಕ್ಕಿದೆ. ತಮ್ಮನ್ನು ಬೇರೆ ಬ್ಯಾರಕ್ಗೆ ಸ್ಥಳಾಂತರಿಸುವಂತೆ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ನಗರದ 58ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಅಂಗೀಕರಿಸಿದೆ.
ಇತ್ತೀಚೆಗೆ ಪವಿತ್ರಾ ಗೌಡ ಅವರನ್ನು ಹೆಚ್ಚು ಆರೋಪಿಗಳಿದ್ದ ಬ್ಯಾರಕ್ಗೆ ಸ್ಥಳಾಂತರಿಸಲಾಗಿತ್ತು. ಶಿಫ್ಟ್ ಮಾಡಿದ ಕೆಲವೇ ದಿನಗಳ ಬಳಿಕ ಬ್ಯಾರಕ್ನಲ್ಲಿ ಎದುರಾಗಿದ್ದ ಸಮಸ್ಯೆಗಳ ಹಿನ್ನೆಲೆಯಲ್ಲಿ ತಮ್ಮನ್ನು ಬೇರೆ ಬ್ಯಾರಕ್ಗೆ ಸ್ಥಳಾಂತರಿಸುವಂತೆ ಅವರು ತಮ್ಮ ವಕೀಲರ ಮೂಲಕ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಪವಿತ್ರಾ ಗೌಡ ಅವರು ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 55ಎ ಅಡಿ ಅರ್ಜಿ ಸಲ್ಲಿಸಿ, ತಮ್ಮ ಆರೋಗ್ಯದ ಹಿನ್ನೆಲೆಯಲ್ಲಿ ಅಗತ್ಯ ವೈದ್ಯಕೀಯ ಚಿಕಿತ್ಸೆ ಹಾಗೂ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸುವಂತೆ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದರು. ಅಲ್ಲದೆ, ತಕ್ಷಣ ವೈದ್ಯಕೀಯ ಪರೀಕ್ಷೆ ನಡೆಸುವುದು ಹಾಗೂ ಬ್ಯಾರಕ್ವಾರು ವಸತಿ ವ್ಯವಸ್ಥೆ ಸೇರಿದಂತೆ ಹಲವು ನಿರ್ದೇಶನಗಳನ್ನು ನೀಡುವಂತೆ ವಿವರವಾದ ಮನವಿಯನ್ನೂ ಸಲ್ಲಿಸಿದ್ದರು.
ಈ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಕಾರಾಗೃಹದ ಅಧೀಕ್ಷಕರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕರು ಕೂಡ ಕಾನೂನಿನ ಅನ್ವಯ ಪವಿತ್ರಾ ಗೌಡ ಅವರ ಮನವಿಯನ್ನು ಪರಿಗಣಿಸಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.
ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸುಜಾತಾ ಎಂ. ಸಾಂಬ್ರಾಣಿ ಅವರಿದ್ದ 58ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಪವಿತ್ರಾ ಗೌಡ ಅವರ ಅರ್ಜಿಯನ್ನು ಅಂಗೀಕರಿಸಿ, ಅವರ ಆರೋಗ್ಯ ಮತ್ತು ಜೈಲಿನಲ್ಲಿನ ವಸತಿ ವ್ಯವಸ್ಥೆಗೆ ಸಂಬಂಧಿಸಿದಂತೆ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದೆ.
ಕೋರ್ಟ್ ನೀಡಿರುವ ಪ್ರಮುಖ ನಿರ್ದೇಶನಗಳು
- ಪವಿತ್ರಾ ಗೌಡ ಅವರಿಗೆ ಸಾಧ್ಯವಾದಷ್ಟು, ಲಭ್ಯತೆ, ವರ್ಗೀಕರಣ ಹಾಗೂ ಭದ್ರತಾ ನಿಯಮಗಳಿಗೆ ಒಳಪಟ್ಟು ಸದ್ಯಕ್ಕೆ ತುಸು ಕಡಿಮೆ ಜನಸಂದಣಿ ಇರುವ ವಸತಿ ವ್ಯವಸ್ಥೆ ಕಲ್ಪಿಸಬೇಕು.
- ಇತರ ಕೈದಿಗಳಂತೆ ಅನ್ವಯವಾಗುವ ಜೈಲು ನಿಯಮಗಳ ಪ್ರಕಾರ ಸಮರ್ಪಕ ಕುಡಿಯುವ ನೀರು, ಸ್ವಚ್ಛತೆ, ಶೌಚಾಲಯ ಮತ್ತು ಸ್ನಾನದ ಸೌಲಭ್ಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.
- ಅಗತ್ಯವಿದ್ದಾಗ ಅವರ ಹಿಂದಿನ ವೈದ್ಯಕೀಯ ದಾಖಲೆಗಳು ಹಾಗೂ ಪ್ರಸ್ತುತ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ವೈದ್ಯಕೀಯ ಪರೀಕ್ಷೆ, ಚಿಕಿತ್ಸೆ ಮತ್ತು ಮುಂದಿನ ಆರೈಕೆಯನ್ನು ಒದಗಿಸಬೇಕು.
- ನ್ಯಾಯಾಂಗ ಬಂಧನದಲ್ಲಿರುವ ಅವಧಿಯಲ್ಲಿ ವಿಚಾರಣಾಧೀನ ಮಹಿಳಾ ಕೈದಿಯಾಗಿ ಪವಿತ್ರಾ ಗೌಡ ಅವರ ಸುರಕ್ಷತೆ, ಗೌರವ ಹಾಗೂ ಕಾನೂನು ಮಾನ್ಯ ಹಕ್ಕುಗಳನ್ನು ಕಾನೂನಿನ ಪ್ರಕಾರ ರಕ್ಷಿಸಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.
ಇದನ್ನೂ ಓದಿ : ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು


















