ಬೆಂಗಳೂರು : ಕೆಪಿಎಸ್ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮತ್ತು ಮಧ್ಯವರ್ತಿ ಬಸವರಾಜ್ ಕನ್ನಾಳೆ ಅವರನ್ನು ಬಂಧಿಸಿದ್ದಾರೆ.
ನಾಲ್ಕು ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣೆ ನಡೆಸಿದ ಬಳಿಕ, ತನಿಖೆಗೆ ಸರಿಯಾಗಿ ಸಹಕರಿಸದ ಕಾರಣ ಇಬ್ಬರನ್ನೂ ಇಡಿ ಬಂಧಿಸಿದೆ ಎಂದು ತಿಳಿದುಬಂದಿದೆ.
ಇಡಿ ಅಧಿಕಾರಿಗಳು ಶುಕ್ರವಾರ ಸಂಜೆ ಇಬ್ಬರನ್ನೂ ಬಂಧಿಸಿ ತಡರಾತ್ರಿ ಸ್ಪೆಷಲ್ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಕಸ್ಟಡಿಗೆ ಪಡೆದಿದ್ದಾರೆ. ಇಂದಿನಿಂದ ಇಡಿ ಕಚೇರಿಯಲ್ಲಿ ಜ್ಞಾನೇಂದ್ರ ಮತ್ತು ಬಸವರಾಜ್ ಕನ್ನಾಳೆ ಅವರ ವಿಚಾರಣೆ ಮುಂದುವರೆಯಲಿದೆ.
ಈ ಹಿಂದೆ, ಸಿಐಡಿ ಅಧಿಕಾರಿಗಳು ಇವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇಡಿ ಅಧಿಕಾರಿಗಳು ಈ ಪ್ರಕರಣದಲ್ಲಿ ಹವಾಲಾ ಹಣದ ವಹಿವಾಟು ನಡೆದಿರುವ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಸಿಐಡಿ ಅಧಿಕಾರಿಗಳು ಕೆಪಿಎಸ್ಸಿ ಸದಸ್ಯೆ ಶಾಂತಾ ಹೊಸಮನಿ ಅವರ ಮನೆಗಳ ಪರಿಶೀಲನೆ ನಡೆಸಿ, ಎರಡು ಮೊಬೈಲ್ ಮತ್ತು ಒಂದು ಟ್ಯಾಬ್ ವಶಕ್ಕೆ ಪಡೆದಿದ್ದಾರೆ. ಅವರೂ ತನಿಖೆಗೆ ಸಹಕರಿಸುತ್ತಿಲ್ಲ ಎನ್ನಲಾಗಿದೆ.
ಇದನ್ನೂ ಓದಿ : ಸರ್ಕಾರಿ ಸ್ವಾಮ್ಯದ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ 52 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ



















