ಗದಗ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆಯಾಗಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.
ನಗರದಲ್ಲಿನ ದಾಸರ ಓಣಿಯಲ್ಲಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆಯಾಗಿದ್ದಾರೆ. ಮೃತರು ತಮ್ಮ ಮನೆಯ ಮೊದಲ ಮಹಡಿಯಲ್ಲಿ ಮಲಗಿದ್ದರು. ಈ ಮೂವರು ಮೂಲತಃ ಕೊಪ್ಪಳ ಜಿಲ್ಲೆಯವರು ಎನ್ನಲಾಗಿದೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದ ದುರ್ದೈವಿಗಳು.
ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಮದುವೆ ತಯಾರಿಯ ಹಿನ್ನೆಲೆಯಲ್ಲಿ ಸಂಬಂಧಿಕರಾದ ಪರಶುರಾಮ, ಪತ್ನಿ ಲಕ್ಷ್ಮೀ, ಪುತ್ರಿ ಆಕಾಂಕ್ಷಾ ಕೊಪ್ಪಳದಿಂದ ಗದಗ ನಗರಕ್ಕೆ ಬಂದಿದ್ದರು. ರಾತ್ರಿ ಪರಶುರಾಮ ಪತ್ನಿ ಲಕ್ಷ್ಮೀಯವರ ಹುಟ್ಟಿದ ಹಬ್ಬವನ್ನು ಕುಟುಂಬಸ್ಥರು ಆಚರಿಸಿದ್ದಾರೆ. ಬಳಿಕ ಪರಶುರಾಮ ಕುಟುಂಬ ಮನೆಯ ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿತ್ತು.
ತಡರಾತ್ರಿ ಪರಶುರಾಮ ಮಲಗಿದ್ದ ಕೋಣೆ ಗಾಜಿನ ಕಿಟಕಿಯನ್ನು ಒಡೆದು ಒಳ ನುಗ್ಗಿದ ದುಷ್ಕರ್ಮಿಗಳು ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕಿರುಚಾಟದ ಸುದ್ದಿ ಕೇಳುತ್ತಿದ್ದಂತೆ ಕೆಳಗಿನ ಕೋಣೆಯಲ್ಲಿ ಮಲಗಿದ್ದ ಕಾರ್ತಿಕ್ ಬಾಕಳೆ ನೋಡಲು ಹೋಗಿದ್ದಾರೆ. ಆಗ ಕಾರ್ತಿಕ್ ನನ್ನೂ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಆನಂತರ ದುಷ್ಕರ್ಮಿಗಳು ಮಾಲಿಕ ಪ್ರಕಾಶ್ ಬಾಕಳೆ ಹಾಗೂ ಪತ್ನಿ, ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಮಲಗಿದ್ದ ಕೋಣೆ ತಟ್ಟಿದ್ದಾರೆ. ಆದರೆ, ಅವರು ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದಾರೆ. ಆಗ ದುಷ್ಕರ್ಮಿಗಳು ಹಿಂದಿನಿಂದ ಓಡಿ ಹೋಗಿದ್ದಾರೆ. ಮಾರಕಾಸ್ತ್ರಗಳನ್ನು ದುಷ್ಕರ್ಮಿಗಳು ಚರಂಡಿಯಲ್ಲಿ ಬಿಸಾಕಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಂತಕರ ಕುರಿತು ಇದುವರೆಗೂ ಮಾಹಿತಿ ಸಿಕ್ಕಿಲ್ಲ.
