ಬೆಂಗಳೂರು: ಮೂಡಾ ನಿವೇಶನ ಹಂಚಿಕೆಯಲ್ಲಿ ಹಗರಣ ನಡೆದಿರುವ ಆರೋಪ ಕೇಳಿ ಬಂದಿದ್ದು, ಇದು ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತೊಂದೊಡ್ಡುತ್ತಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಲು ಚಿಂತನೆ ನಡೆಸಿದ್ದಾರೆ. ಹೀಗಾಗಿ ಸಂಪೂರ್ಣ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೇಳಿದ್ದಾರೆ.
ಈಗಾಗಲೇ ಸರ್ಕಾರಿಂದ ಒಂದು ಬಾರಿ ವರದಿ ಪಡೆದುಕೊಂಡಿರುವ ರಾಜ್ಯಪಾಲರು ನವದೆಹಲಿಯಲ್ಲಿ ಉಳಿದು, ಮತ್ತೊಂದು ವರದಿ ಕೇಳಿರುವುದು ಭಾರೀ ಸಂಚಲನ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲಾಗಿರುವುದಿರಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮತ್ತೊಮ್ಮೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವರದಿ ಕೇಳಿದ್ದಾರೆ.
ಈಗಾಗಲೇ ರಾಜ್ಯಪಾಲರಿಗೆ ಅಧಿವೇಶನದ ಸಂದರ್ಭದಲ್ಲಿ ವರದಿ ನೀಡಲಾಗಿತ್ತು. ನಂತರ ಸಿಎಂ ಖುದ್ದು ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಈಗ ನೂತನ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್ ಅವರು ಹೆಚ್ಚಿನ ಮಾಹಿತಿ ನೀಡಲು ವರದಿ ಸಿದ್ಧಪಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಟಿಜೆ ಅಬ್ರಾಹಂ ದೂರಿನ ಮೇರೆಗೆ ಈಗಾಗಲೇ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡುವ ಕುರಿತು ಕಾನೂನು ಸಲಹೆ ಪಡೆದಿದ್ದಾರೆ ಎನ್ನಲಾಗಿದೆ. ದೆಹಲಿ ಪ್ರವಾಸದಲ್ಲಿರುವಾಗಲೇ ಎರಡನೇ ಬಾರಿಗೆ ವರದಿ ಕೇಳಿರುವುದು ಮತ್ತಷ್ಟು ಅಚ್ಚರಿಗೆ ಹಾಗೂ ಸಂಶಯಕ್ಕೆ ದಾರಿ ಮಾಡಿಕೊಟ್ಟಿದೆ. ಹೀಗಾಗಿ ಎಲ್ಲರ ಚಿತ್ತ ರಾಜಭವನದತ್ತ ಎನ್ನುವಂತಾಗಿದೆ.