ಢಾಕಾ: ಬಾಂಗ್ಲಾದೇಶದಲ್ಲಿ ಉದ್ಯೋಗ ಕೋಟಾ ಸುಧಾರಣೆಗಳ ಕುರಿತು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆ ತೀವ್ರತೆ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ ಎಂದು ಬಾಂಗ್ಲಾದೇಶ ಹೈಕಮಿಷನ್ ಅಧಿಕಾರಿಗಳು ತಿಳಿಸಿದ್ದಾರೆ.
ಶೇಖ್ ಹಸೀನಾ ರಾಜೀನಾಮೆ ನಂತರ ಢಾಕಾದಿಂದ “ಸುರಕ್ಷಿತ ಸ್ಥಳ”ಕ್ಕೆ ಪಲಾಯನ ಮಾಡಿದ್ದಾರೆ. ರಾಯಿಟರ್ಸ್ ವರದಿಯಂತೆ, ಅವರು ಇಂದು ಭಾರತಕ್ಕೆ ಬಂದಿಳಿದಿದ್ದಾರೆ. ಅವರು ಮತ್ತು ಅವರ ಸಹೋದರಿ ತಮ್ಮ ಅಧಿಕೃತ ನಿವಾಸವಾದ ಗೊನೊ ಭಾಬನ್ನಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಬಾಂಗ್ಲಾದೇಶದಲ್ಲಿ ಕನಿಷ್ಠ 300 ಜನರನ್ನು ಬಲಿತೆಗೆದುಕೊಂಡ ಹಿಂಸಾಚಾರದ ಹಿನ್ನೆಲೆಯಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ ಎಂದು ದೆಹಲಿಯಲ್ಲಿರುವ ಬಾಂಗ್ಲಾದೇಶ ಹೈಕಮಿಷನ್ ಅಧಿಕಾರಿಗಳು ಹೇಳಿದ್ದಾರೆ. ತನ್ನ ಸಹೋದರಿಯೊಂದಿಗೆ ದೇಶವನ್ನು ತೊರೆದಿದ್ದಾರೆ. ಈಗಾಗಲೇ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಭಾರತದ ಅಗರ್ತಲಾಕ್ಕೆ ಬಂದಿಳಿದಿದ್ದಾರೆ. ದೇಶದ ಸೇನಾ ಮುಖ್ಯಸ್ಥ ವಾಕರ್-ಉಜ್-ಜಮಾನ್ ಸಂಜೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಡೈಲಿ ಸ್ಟಾರ್ ವರದಿ ಮಾಡಿದೆ.
ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಎಲ್ಲ ನಾಗರಿಕರಿಗೆ ಬಾಂಗ್ಲಾದೇಶಕ್ಕೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಹಾಗೂ ಎಚ್ಚರಿಕೆ ವಹಿಸುವಂತೆ ತಿಳಿಸಿದೆ.
ಬಾಂಗ್ಲಾದೇಶದಲ್ಲಿ ಐದು ದಶಕಗಳ ಹಿಂದೆ ದಕ್ಷಿಣ ಏಷ್ಯಾ ರಾಷ್ಟ್ರದ ಜನನದ ನಂತರದ ನಡೆದ ಈ ಕೆಟ್ಟ ಹಿಂಸಾಚಾರಗಳಲ್ಲಿ ಹೆಚ್ಚಿನ ಜನರು ಸಾವನ್ನಪ್ಪಿದ್ದರಿಂದ ಅವರು ಸೋಮವಾರ ದೇಶವನ್ನು ತೊರೆದಿದ್ದಾರೆ ಎಂದು ಮಾಧ್ಯಮ ವರದಿ ಮಾಡಿವೆ. ಪ್ರತಿಭಟನಾಕಾರರು ಪ್ರಧಾನಿಯವರ ಅಧಿಕೃತ ನಿವಾಸಕ್ಕೆ ನುಗ್ಗಿದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಘರ್ಷಣೆಯಲ್ಲಿ 14 ಜನ ಪೊಲೀಸರು ಸೇರಿದಂತೆ ಕನಿಷ್ಠ 101 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಹೀಗಾಗಿ ಕರ್ಫ್ಯೂ ಜಾರಿಗೊಳಿಸಲಾಗಿದೆ.