ಮೈಸೂರು: ಬಿಜೆಪಿಯಲ್ಲಿ ಆಂತರಿಕ ಕಲಹ ಹೆಚ್ಚಾಗಿದ್ದು, ಈಗ ವಿರೋಧ ಪಕ್ಷದ ನಾಯಕ ಆರ್. ಅಶೋಕ ಈ ಕುರಿತು ಮಾತನಾಡಿದ್ದಾರೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಣ ಹಾಗೂ ಅವರ ವಿರೋಧಿ ಬಣದ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ. ಈ ಎರಡು ಬಣಗಳಲ್ಲಿ ಆಗಾಗಿ ಮುಸುಕಿನ ಗುದ್ದಾಟಗಳು ನಡೆಯುತ್ತಲೇ ಇರುತ್ತವೆ. ಅದರಲ್ಲೂ ಬಿಜೆಪಿ ಹಿರಿಯ ಶಾಸಕ ಬಸನಗೌಡ ಯತ್ನಾಳ್, ಬಿಎಸ್ವೈ ಕುಟುಂಬದ ವಿರುದ್ಧ ಟೀಕೆ ಮಾಡುತ್ತಲೇ ಬಂದಿದ್ದಾರೆ. ಹೀಗಾಗಿ ಹಲವರು ಯತ್ನಾಳ್ ಅವರನ್ನು ಏಕೆ ನಿಯಂತ್ರಿಸಲು ಆಗುತ್ತಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ. ಏಕೆ ಶಿಸ್ತು ಸಮಿತಿ ನೋಟಿಸ್ ನೀಡುತ್ತಿಲ್ಲ? ಅವರ ಬೆನ್ನಿಗೆ ಹೈಕಮಾಂಡ್ ನಿಂತಿದೆಯೇ? ಎನ್ನುವುದು ಇಲ್ಲಿಯವರೆಗೆ ತಿಳಿದಿಲ್ಲ. ಈ ಮಧ್ಯೆ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿರುವ ಅವರು, ಬಸನಗೌಡ ಯತ್ನಾಳ್ ಶಾಸಕರು, ಕೇಂದ್ರದಲ್ಲಿ ಮಂತ್ರಿಯಾಗಿದ್ದವರು. ಹೀಗಾಗಿ ಯತ್ನಾಳ್ ವಿರುದ್ಧ ನಾವು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಹೈಕಮಾಂಡ್ ಈಗಾಗಲೇ ಎರಡು ಬಾರಿ ಕರೆಯಿಸಿ ಮಾತನಾಡಿದ್ದಾರೆ. ಮುಂದಿನ ವಾರ ರಾಜ್ಯ ಬಿಜೆಪಿ ಉಸ್ತುವಾರಿಗಳು ಆಗಮಿಸುತ್ತಿದ್ದಾರೆ. ಆಗ ಮಾತನಾಡುತ್ತಾರೆ ಎಂದು ಹೇಳುವ ಮೂಲಕ ರಾಜ್ಯ ನಾಯಕರೆಲ್ಲ ಅಸಹಾಯಕರಾಗಿದ್ದೇವೆ ಎಂಬಂತೆ ಹೇಳಿದ್ದಾರೆ.
ಮಂಡ್ಯದಲ್ಲಿ ಪ್ರೀತಂಗೌಡ-JDS ಕಾರ್ಯಕರ್ತರ ಗಲಾಟೆ ಬಗ್ಗೆ ಮಾತನಾಡಿ, ಬಿಜೆಪಿ-ಜೆಡಿಎಸ್ ಒಂದಾಗಿ ಹೋಗುತ್ತಿದ್ದೇವೆ. ಕೆಲವು ಸಣ್ಣಪುಟ್ಟ ಲೋಪದೋಷ ಆಗುವುದು ಸಹಜ. ಇದನ್ನೆಲ್ಲ ಸರಿಪಡಿಸಿಕೊಂಡು ಮುಂದೆ ಹೋಗುತ್ತೇವೆ ಎಂದು ಹೇಳಿದ್ದಾರೆ.