ಇಂದು ದೇಶದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನಡೆಸಿದರು. ತೆರೆದ ಜೀಪಿನಲ್ಲಿ ಪರಿವೀಕ್ಷಣೆ ಮಾಡಿದರು. ಪೋಡಿಯಂ ಮೇಲಿದ್ದ ಬುಲೆಟ್ ಪ್ರೂಫ್ ತೆರವು ಮಾಡಲು ಸಿಎಂ ಸೂಚಿಸಿದ್ದು ಸಿಎಂ ಸೂಚನೆ ಮೇರೆಗೆ ಬುಲೆಟ್ ಪ್ರೂಫ್ ತೆರವುಗೊಳಿಸಲಾಯಿತು.
ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಕಿಡಿಕಾರಿದರು. ಜನಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ರಾಜ್ಯದ ಜವಾಬ್ದಾರಿಯಾದರೆ, ಇವುಗಳಿಗೆ ಪೂರಕ ಸಂಪನ್ಮೂಲ ಒದಗಿಸುವುದು ಕೇಂದ್ರದ ಹೊಣೆ. ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಈ ಆಶಯದಿಂದ ದೂರ ಸರಿಯುತ್ತಿದೆ. ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ತಾರತಮ್ಯವಾಗುತ್ತಿದೆ. ಕೇಂದ್ರ ಸರ್ಕಾರ ಸಂವಿಧಾನದ ಆಶಯ ನಿರ್ಲಕ್ಷಿಸಿದೆ ಎಂದು ಹೇಳಿದ್ದಾರೆ.
ರಾಜ್ಯಕ್ಕೆ ದೊರೆಯಬೇಕಾದ ಹಣಕಾಸಿನ ಪಾಲು ನೀಡಲು ಕೇಂದ್ರ ಮೀನಮೇಷ ಎಣಿಸುತ್ತಿದೆ. ಹಣ ಪಡೆಯಲು ಕೋರ್ಟ್ ಮೊರೆ ಹೋಗುವ ಅನಿವಾರ್ಯತೆ ಎದುರಾಗಿದೆ. ಜನಹಿತಕ್ಕೆ ಇದು ಒಳ್ಳೆಯದಲ್ಲ. ರಾಜ್ಯಗಳು ಅಭಿವೃದ್ಧಿ ಹೊಂದಿದರೆ ಮಾತ್ರ ರಾಷ್ಟ್ರ ಅಭಿವೃದ್ಧಿಯಾಗಲು ಸಾಧ್ಯ. ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಅನುದಾನ ಬಿಡುಗಡೆಗೆ ಸಿಎಂ ಒತ್ತಾಯಿಸಿದರು.
ಲೋಕಸಭೆ ಚುನಾವಣೆಯಲ್ಲಿ ಮತದಾರರು ತಮ್ಮ ರಾಜಕೀಯ ಪ್ರಬುದ್ಧತೆ ಮೆರೆದಿದ್ದಾರೆ. ಪ್ರಜಾಪ್ರಭುತ್ವ ಯಾರ ಕೈಗೊಂಬೆಯಾಗಲು ಸಾಧ್ಯವಿಲ್ಲವೆಂಬ ಸಂದೇಶ ರವಾನೆ ಮಾಡಿದ್ದಾರೆ. ಮೇಕೆದಾಟು ಯೋಜನೆ, ಕುಡಿಯುವ ನೀರಿನ ಯೋಜನೆ ಹಾಗೂ ಕಾಮಗಾರಿ ಮತ್ತು ಭೂಸ್ವಾಧೀನ ಪ್ರಕ್ರಿಯೆಗೆ ಬೇರೆಡೆ ಕಚೇರಿ ಸ್ಥಾಪನೆ ಮಾಡಲಾಗುವುದು. ಮಳೆ, ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಪರಿಹಾರ ಜೊತೆಗೆ ಮನೆ ಹಂಚಿಕೆ. ಮಾನವ-ವನ್ಯ ಜೀವಿಗಳ ಸಂಘರ್ಷ ತಡೆಗಟ್ಟಲು 120 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ. 7 ಆನೆ ಟಾಸ್ಕ್ ಫೋರ್ಸ್, 2 ಚಿರತೆ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ವಸತಿ ಯೋಜನೆಯಡಿ 2.38 ಲಕ್ಷ ಮನೆಗಳನ್ನ ಪೂರ್ಣಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಬರಪೀಡಿತ ಜಿಲ್ಲೆಗಳ ಪ್ರತಿ ರೈತರಿಗೆ 2000 ರೂ.ನಂತೆ 636.45 ಕೋಟಿ ಮಧ್ಯಂತರ ಪರಿಹಾರ ನೀಡಿದ್ದೇವೆ ಎಂದು ಹೇಳಿದ್ದಾರೆ.