ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲಿನಲ್ಲಿದ್ದು, ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ದರ್ಶನ್ ಆಂಡ್ ನ್ಯಾಯಾಂಗ ಅವಧಿ ಇಂದಿಗೆ (ಆಗಸ್ಟ್ 28) ಅಂತ್ಯಗೊಳ್ಳುವುದರಲ್ಲಿತ್ತು. ಹೀಗಾಗಿ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪೊಲೀಸರು ಹಾಜರು ಪಡಿಸಿದ್ದರು. ಕೋರ್ಟ್, ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಸೆಪ್ಟೆಂಬರ್ 9ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗರೇಟ್ ಸೇದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್, ಪೊಲೀಸರು ವಿಚಾರಣೆ ಎದುರಿಸಿದ ನಂತರ ಬಳ್ಳಾರಿಗೆ ಶಿಫ್ಟ್ ಆಗಲಿದ್ದಾರೆ. ಪ್ರಕರಣದ ಆರೋಪಿ ಪ್ರದೂಶ್ ರನ್ನು ಬೆಳಗಾವಿ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಇದನ್ನು ಮಾಡದಂತೆ ಅವರು ಕೊರಿದ್ದಾರೆ. ‘ನನ್ನ ತಂದೆಗೆ ಕ್ಯಾನ್ಸರ್ ಇದೆ. ತಂದೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಾಯರ್ ಭೇಟಿಗೂ ಅವಕಾಶ ನೀಡುತ್ತಿಲ್ಲ. ಹೀಗಾಗಿ ಬೇರೆ ಕಡೆಗೆ ಶಿಫ್ಟ್ ಮಾಡಬೇಡಿ’ ಎಂದು ಪ್ರದೂಶ್ ಮನವಿ ಮಾಡಿದ್ದಾನೆ. ಆದರೆ, ಮನವಿಯನ್ನು ಕೋರ್ಟ್ ಪುರಸ್ಕರಿಸಿಲ್ಲ. ‘ಕಾನೂನಿನ ಪ್ರಕಾರ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಾರೆ’ ಎಂದು ಜಡ್ಜ್ ಹೇಳಿದ್ದಾರೆ.
ದರ್ಶನ್ ಮೃತನ ಕುಟುಂಬಕ್ಕೆ ಬೆದರಿಕೆ ಹಾಕಬಹುದು ಎಂದು ಪೊಲೀಸರು ಆತಂಕ ಹೊರಹಾಕಿದ್ದಾರೆ. ಈ ಕಾರಣಕ್ಕೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಲಾಗಿದೆ. ಹೀಗಾಗಿ ಆರೋಪಿಗಳಿಗೆ ಮತ್ತೆ ಜೈಲು ಗತಿ ಎನ್ನುವಂತಾಗಿದೆ.