ಸಿನಿಮಾ ಶೂಟಿಂಗ್ ವೇಳೆ ಲೈಟ್ ಮ್ಯಾನ್ ಸಾವನ್ನಪ್ಪಿದ್ದು, ನಿರ್ದೇಶಕ ಯೋಗರಾಜ್ ಭಟ್ ಸೇರಿದಂತೆ ಹಲವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಮನದ ಕಡಲು ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಲೈಟ್ ಮ್ಯಾನ್ 30 ಅಡಿ ಎತ್ತರದಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಲೈಟ್ ಮ್ಯಾನ್ ಮೋಹನ್ ಕುಮಾರ್ ಬಿದ್ದು ಸಾವನ್ನಪ್ಪಿದ ವ್ಯಕ್ತಿ. ಹೀಗಾಗಿ ನಿರ್ದೇಶಕ ಯೋಗರಾಜ್ ಭಟ್ ಸೇರಿದಂತೆ ಕೆಲವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಸರಿಯಾದ ಮುನ್ನೆಚ್ಚರಿಕೆ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಈ ದುರ್ಘಟನೆ ನಡೆದಿದೆ. ಹೀಗಾಗಿ ನಿರ್ದೇಶಕ ಯೋಗರಾಜ್ ಭಟ್, ನಿರ್ಮಾಪಕ ಅಡಕಮಾರನಹಳ್ಳಿಯ ಈ.ಕೆ. ಕೃಷ್ಣಪ್ಪ, ಮಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್ ಮೇಲೆ ಎಫ್ ಐಆರ್ ದಾಖಲಾಗಿದೆ.
ಕಳೆದ 15 ದಿನಗಳಿಂದ ಅಡಕಮಾರನಹಳ್ಳಿಯ ವಿ.ಆರ್.ಎಲ್. ಗೋಡೌನ್ನಲ್ಲಿ ‘ಮನದ ಕಡಲು’ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಆದರೆ, ಇಂದು ಸಂಜೆ ಈ ದುರ್ಘಟನೆ ನಡೆದಿದೆ. 30 ಅಡಿ ಎತ್ತರದ ಅಲ್ಯುಮಿನಿಯಂ ರೊಸ್ಟ್ರಮ್ ಮೇಲೆ ಹತ್ತಿ ಲೈಟ್ ಬಿಚ್ಚುತ್ತಿದ್ದ ಮೋಹನ್ ಅಲ್ಲಿಂದ ಬಿದ್ದಿದ್ದಾರೆ. ಸುರಕ್ಷತಾ ಸಾಧನಗಳನ್ನು ನೀಡದೆ ಕೆಲಸ ಮಾಡಿಸಿಕೊಂಡಿದ್ದರಿಂದಾಗಿ ಈ ದುರ್ಘಟನೆ ನಡೆದಿದೆ.
ಮೋಹನ್ ಕುಮಾರ್ ಮೇಲಿಂದ ಕೆಳಕ್ಕೆ ಬಿದ್ದಾಗ ತಲೆಗೆ ಏಟಾಗಿ ತೀವ್ರ ರಕ್ತಸ್ರಾವ ಆಗಿದೆ. ಕೂಡಲೇ ಅವರನ್ನು ಗೊರಗುಂಟೆಪಾಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರು ಅಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.