ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಸಿಎಂ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆಯ ಹಿನ್ನೆಲೆಯಲ್ಲಿ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ನೇತೃತ್ವದಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ಸಿಆರ್ ಪಿಸಿ ಅಡಿಯಲ್ಲಿ ಎಫ್ ಐಆರ್ ದಾಖಲಿಸಿ ಎಂದು ಕೋರ್ಟ್ ಆದೇಶ ನೀಡಿತ್ತು. ಈಗ ಸಿದ್ದರಾಮಯ್ಯ ವಿರುದ್ಧ ಸಿಆರ್ಪಿಸಿ 156(3)ರ ಹಲವು ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಅಲ್ಲದೇ, ಸಿಎಂ ಸೇರಿದಂತೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಅಡಿ ಎಫ್ಐಆರ್ ದಾಖಲಾಗಿದೆ. ಹಾಗೇ ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಾಗಿದೆ.
ಭ್ರಷ್ಟಾಚಾರ ತಡೆ ಕಾಯ್ದೆ 1988 , ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ, ಸೆ, 166 ಸಾರ್ವಜನಿಕ ಸೇವಕ ಕಾನೂನು ಉಲ್ಲಂಘನೆ ಮಾಡುವುದು, ಸೆ 403 ಆಸ್ತಿಯ ದುರ್ಬಳಕೆ, ಸೆ 406 ನಂಬಿಕೆಯ ಉಲ್ಲಂಘನೆ, ಸೆ 420 ವಂಚನೆ, ಸೆ 426 ದುಷ್ಕೃತ್ಯವೆಸಗುವುದು, ಸೆ 465 ಪೋರ್ಜರಿ, ಸೆ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಪೋರ್ಜರಿ, ಸೆ 340 ಅಕ್ರಮ ಬಂಧನ, ಸೆ 351 ಇತರರಿಗೆ ಹಾನಿಯನ್ನುಂಟು ಮಾಡಿರುವ ಕುರಿತಂತೆ ದೂರು ದಾಖಲಾಗಿದೆ.
ದೂರುದಾರ ಸ್ನೇಹಮಯಿ ಕೃಷ್ಣ ಅವರ ದೂರಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ನ್ಯಾಯಾಲಯ ಸೂಚಿಸಿತ್ತು. ನ್ಯಾಯಾಲಯ ಸೂಚಿಸಿರುವ ಐಪಿಸಿ ಸೆಕ್ಷನ್ ಭ್ರಷ್ಟಾಚಾರ ತಡೆ ಕಾಯ್ದೆ, ಬೇನಾಮಿ ಆಸ್ತಿ ವಹಿವಾಟು ಕಾಯ್ದೆ, ಭೂ ಕಬಳಿಕೆ ನಿರ್ಬಂಧ ಕಾಯ್ದೆಯಡಿ ಲೋಕಾಯುಕ್ತ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
ಸಿಎಂ ಸಿದ್ದರಾಮಯ್ಯ A 1 ಆರೋಪಿಯಾಗಿದ್ದರೆ, ಪತ್ನಿ ಪಾರ್ವತಿ A 2 ಆರೋಪಿಯಾಗಿದ್ದಾರೆ. ಬಾಮೈದಾ ಮಲ್ಲಿಕಾರ್ಜುನ A 3, ಭೂಮಾಲೀಕ ದೇವರಾಜು ಎ4 ಹಾಗೂ ಎ5 ಇತರರು ಎಂದು ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಈ ಎಫ್ ಐಆರ್ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಲಿದ್ದಾರೆ. ಅಗತ್ಯವಿದ್ದರೆ, ಸಿಎಂ ಅವರನ್ನು ವಿಚಾರಣೆಗೆ ಬರುವಂತೆ ನೋಟಿಸ್ ನೀಡಬಹುದು. ಲೋಕಾಯುಕ್ತ ಬಂಧಿಸುವ ಅಧಿಕಾರವನ್ನೂ ಹೊಂದಿದೆ. ಅಲ್ಲದೇ, ಸಿಎಂ ಕಾನೂನು ತಜ್ಞರ ಅಭಿಪ್ರಾಯದಂತೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು.