ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದಲ್ಲಿ ಭಾರೀ ಗಾತ್ರದ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಕಳೆದ ಹಲವು ದಿನಗಳಿಂದ ಗ್ರಾಮ ಸುತ್ತಮುತ್ತ ಕಾಣಿಸಿಕೊಳ್ಳುತ್ತಿದ್ದ ಚಿರತೆಯಿಂದ ಆತಂಕಗೊಂಡಿದ್ದ ಗ್ರಾಮಸ್ಥರು ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ.
ಕಳೆದ ಸುಮಾರು 15 ದಿನಗಳಿಂದ ಚಿಂದಗಿರಿಕೊಪ್ಪಲು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡು ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ರಾತ್ರಿ ವೇಳೆ ಗ್ರಾಮಗಳ ಬಳಿ ಓಡಾಡುತ್ತಿದ್ದ ಚಿರತೆಯಿಂದ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದು, ಅರಣ್ಯ ಇಲಾಖೆಗೆ ಹಲವು ಬಾರಿ ದೂರು ನೀಡಿ ಚಿರತೆ ಸೆರೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಗ್ರಾಮ ಸಮೀಪ ಬೋನು ಅಳವಡಿಸಿದ್ದರು. ಬೋನಿನೊಳಗೆ ನಾಯಿಯನ್ನು ಇರಿಸಿ ಚಿರತೆ ಸೆರೆ ಹಿಡಿಯಲು ತಂತ್ರ ರೂಪಿಸಲಾಗಿತ್ತು. ನೆನ್ನೆ ರಾತ್ರಿ ಆಹಾರಕ್ಕಾಗಿ ಬೋನಿನೊಳಗೆ ಬಂದ ಚಿರತೆ ಸೆರೆಯಾಗಿದೆ.
ಭಾರೀ ಗಾತ್ರದ ಚಿರತೆ ಬೋನಿಗೆ ಬಿದ್ದಿರುವ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲ ಗ್ರಾಮಗಳ ಜನರು ಸ್ಥಳಕ್ಕೆ ಮುಗಿಬಿದ್ದು ಚಿರತೆಯನ್ನು ನೋಡಲು ಹರಿದುಬಂದಿದ್ದರು. ಸ್ಥಳದಲ್ಲಿ ಕೆಲಕಾಲ ಜನಸಂದಣಿ ಉಂಟಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಭದ್ರತಾ ಕ್ರಮ ಕೈಗೊಂಡರು. ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲು ಅರಣ್ಯ ಇಲಾಖೆ ಮುಂದಾಗಿದ್ದು, ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಸೂಚಿಸಿದ್ದಾರೆ.
ಇದನ್ನೂ ಓದಿ : 12 ಸಿಲಿಂಡರ್, 25 ಬೈಕ್ ಕದ್ದಿದ್ದ ಖತರ್ನಾಕ್ ಕಳ್ಳನ ಬಂಧನ!



















