ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಬಳಿಕ ಸಚಿವ ಸ್ಥಾನ ಕೈತಪ್ಪಿದ ಹಿರಿಯ ಕಾಂಗ್ರೆಸ್ ಶಾಸಕರ ಅಸಮಾಧಾನ ಶಮನಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ತೀವ್ರ ಕಸರತ್ತು ನಡೆಸುತ್ತಿದೆ.
ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದ ಕೆಲ ಹಿರಿಯ ಶಾಸಕರು ಬಂಡಾಯದ ಸುಳಿವು ನೀಡಿದ್ದರಿಂದ, ಪಕ್ಷದ ಪ್ರಮುಖ ನಾಯಕರು ನೇರವಾಗಿ ಅವರ ನಿವಾಸಗಳಿಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ದಿನೇಶ್ ಗುಂಡೂರಾವ್, ಹೆಚ್.ಕೆ. ಪಾಟೀಲ್ ಹಾಗೂ ಟಿ.ಬಿ. ಜಯಚಂದ್ರ ಅವರ ನಿವಾಸಗಳಿಗೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಮತ್ತೊಂದೆಡೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಎಂ. ಕೃಷ್ಣಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದಾರೆ.

ಈ ವೇಳೆ ಪಕ್ಷದ ಜೊತೆಗೆ ಒಗ್ಗಟ್ಟಾಗಿ ಸಾಗುವಂತೆ ಹಿರಿಯ ನಾಯಕರಿಗೆ ಮನವಿ ಮಾಡಲಾಗಿದೆ. ಪಕ್ಷದಲ್ಲಿ ಅವರ ಅನುಭವಕ್ಕೆ ಸದಾ ಗೌರವವಿದ್ದು, ಸೂಕ್ತ ಸಮಯದಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ನಾಯಕರು ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಎಂ. ಕೃಷ್ಣಪ್ಪ ಹಾಗೂ ಪ್ರಿಯಕೃಷ್ಣ ಅವರಿಗೆ ನಿಗಮ–ಮಂಡಳಿ ಅಧ್ಯಕ್ಷ ಸ್ಥಾನ ಸೇರಿದಂತೆ ಮುಂದಿನ ದಿನಗಳಲ್ಲಿ ಸೂಕ್ತ ಜವಾಬ್ದಾರಿ ನೀಡುವ ಭರವಸೆಯನ್ನೂ ನೀಡಲಾಗಿದೆ ಎಂದು ತಿಳಿದುಬಂದಿದೆ. ಇದೇ ವೇಳೆ ಸುರ್ಜೇವಾಲಾ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭವಿಷ್ಯದಲ್ಲಿ ಉತ್ತಮ ಅವಕಾಶಗಳು ದೊರೆಯಲಿವೆ ಎಂದು ಇಬ್ಬರು ನಾಯಕರಿಗೂ ವಿಶ್ವಾಸ ತುಂಬಿದ್ದಾರೆ.
ದಿನೇಶ್ ಗುಂಡೂರಾವ್, ಹೆಚ್.ಕೆ. ಪಾಟೀಲ್ ಹಾಗೂ ಟಿ.ಬಿ. ಜಯಚಂದ್ರ ಅವರ ಅಸಮಾಧಾನವನ್ನೂ ಮಾತುಕತೆಯ ಮೂಲಕ ತಗ್ಗಿಸುವಲ್ಲಿ ಕೆಪಿಸಿಸಿ ಅಧ್ಯಕ್ಷರು ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!



















