ಬೆಂಗಳೂರು: ನಟ ಆದಿತ್ಯ ಅವರಿಗೆ ಹುಟ್ಟು ಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ, ಸಿಲ್ಕ್ ಮಂಜು ಅವರ ನಿರ್ಮಾಣದ, ರಂಜನ್ ಶಿವರಾಮ್ ಗೌಡ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ “ಟೆರರ್” ಚಿತ್ರದ “ಹರ ಹರ ಮಹದೇವ” ಎಂಬ ಹಾಡು ಬಿಡುಗಡೆ ಮಾಡಲಾಗಿದೆ.

ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರ ತಂಡ ಆದಿತ್ಯ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದೆ. ಶಿವನ ಕುರಿತಾದ ಗೀತೆಯನ್ನು ಡಾ. ವಿ.ನಾಗೇಂದ್ರ ಪ್ರಸಾದ್ ಬರೆದಿದ್ದು, ಹರ್ಷವರ್ಧನ್ ರಾಜ್ ಸಂಗೀತ ನೀಡಿದ್ದಾರೆ. ಎಂ.ಆರ್.ಟಿ ಮ್ಯೂಸಿಕ್ ಮೂಲಕ ಈ ಹಾಡು ಬಿಡುಗಡೆಯಾಗಿದೆ. ನಿರ್ಮಾಪಕ ಮಂಜು ಅವರ ಸ್ನೇಹಿತರಾದ ರವಿ ವಸಿಷ್ಠ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಮಾತನಾಡಿದ ನಟ ಆದಿತ್ಯ, ನಮ್ಮ ನಿರ್ಮಾಪಕರು ಆರೋಗ್ಯದ ತೊಂದರೆಯಿಂದ ಇಂದಿನ ಸಮಾರಂಭಕ್ಕೆ ಬಂದಿಲ್ಲ. ಹಾಗಾಗಿ ನಾನು ಅವರಿಗೆ ನೀವಿಲ್ಲದೆ ಸಮಾರಂಭ ಮಾಡುವುದು ಬೇಡ ಅಂತ ಹೇಳಿದೆ. ಅವರು ಒಪ್ಪಲಿಲ್ಲ. ಇನ್ನೂ ಮೇ 4 ನನ್ನ ಹುಟ್ಟು ಹಬ್ಬ. ಈ ಸಂದರ್ಭದಲ್ಲಿ ಶಿವನ ಕುರಿತಾದ “ಹರಹರ ಮಹದೇವ” ಎಂಬ ಅದ್ಭುತ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ಹರ್ಷವರ್ಧನ್ ಸಂಗೀತ ನಿರ್ದೇಶನ ಹಾಗೂ ಪ್ರಸಿದ್ದ ಗಾಯಕರ ಗಾಯನದಲ್ಲಿ ಈ ಹಾಡು ಸೊಗಸಾಗಿ ಮೂಡಿ ಬಂದಿದೆ.

ನಿರ್ದೇಶಕ ರಂಜನ್ ಉತ್ತಮವಾದ ಕಥೆ ಮಾಡಿಕೊಂಡಿದ್ದಾರೆ. ಶ್ರೀನಗರ ಕಿಟ್ಟಿ, ದೇವರಾಜ್, ಶಶಿಕುಮಾರ್, ಕುಮಾರ್ ಬಂಗಾರಪ್ಪ, ಶರತ್ ಲೋಹಿತಾಶ್ವ, ಧರ್ಮ, ಕೋಟೆ ಪ್ರಭಾಕರ್ ಹೀಗೆ ಹಿರಿಯ ಹಾಗೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗ ಈ ಚಿತ್ರದಲ್ಲಿದೆ. ಸದ್ಯದಲ್ಲೇ ಚಿತ್ರ ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದರು.

ಶ್ರೀನಗರ ಕಿಟ್ಟಿ ಮಾತನಾಡಿ, ಚಿತ್ರದ ಕಥೆ ಇಷ್ಟವಾಯಿತು. ನನ್ನ ಪಾತ್ರ ಚೆನ್ನಾಗಿದೆ. ಗೆಳೆಯ ಆದಿತ್ಯ ಜೊತೆಗೆ ನಟಿಸಿದ್ದು ಖುಷಿಯಾಗಿದೆ ಎಂದುರು.

“ಹರಹರ ಮಹದೇವ” ಹಾಡಿನ ಬಗ್ಗೆ ಸಂಗೀತ ನಿರ್ದೇಶಕ ಹರ್ಷವರ್ಧನ್ ರಾಜ್, ಗೀತರಚನೆಕಾರ ವಿ.ನಾಗೇಂದ್ರಪ್ರಸಾದ್ ಮಾಹಿತಿ ನೀಡಿದರು. ಚಿತ್ರದಲ್ಲಿ ನಟಿಸಿರುವ ಕುಮಾರ್ ಬಂಗಾರಪ್ಪ, ಶರತ್ ಲೋಹಿತಾಶ್ವ, ಧರ್ಮ, ಕೋಟೆ ಪ್ರಭಾಕರ್, ರವಿ ಭಟ್ ಮುಂತಾದವರು ಚಿತ್ರ ಹಾಗೂ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಲಹರಿ ವೇಲು, ಕನ್ನಡವೇ ಸತ್ಯ ರಂಗಣ್ಣ ಸೇರಿದಂತೆ ಹಲವರು ಭಾಗವಹಿಸಿದ್ದಾರೆ.



















