ಬೀದರ್ : ಜಿಲ್ಲೆಯ ಔರಾದ್ ಪಟ್ಟಣದಲ್ಲಿ ಎರಡು ಬೈಕ್ಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಔರಾದ್ ಪಟ್ಟಣದ ಬಂಧಿಖಾನೆ ಸಮೀಪದ ರಾಷ್ಟ್ರೀಯ ಹೆದ್ದಾರಿ-161ರಲ್ಲಿ ಈ ಘಟನೆ ನಡೆದಿದೆ. ಔರಾದ್ ತಾಲೂಕಿನ ವಡಗಾಂವ್ ಗ್ರಾಮದ ನಿವಾಸಿ ಮಹಾದೇವ ಖಳೂರೆ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.
ಮೃತ ಮಹಾದೇವ ಖಳೂರೆ ಔರಾದ್ ಪಟ್ಟಣದ ಖಾಸಗಿ ಸಹಕಾರ ಬ್ಯಾಂಕ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಪ್ರತಿದಿನದಂತೆ ವಡಗಾಂವ್ ಗ್ರಾಮದಿಂದ ಬ್ಯಾಂಕ್ಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸಂತಪೂರ ಕಡೆಯಿಂದ ಔರಾದ್ ಕಡೆ ಬರುತ್ತಿದ್ದ ಇನ್ನೊಂದು ಬೈಕ್ ಮತ್ತು ಮಹಾದೇವ ಸವಾರಿಯಾಗಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಬೈಕ್ ಸವಾರರು ರಸ್ತೆಯ ಮೇಲೆ ಬಿದ್ದಿದ್ದಾರೆ ಎನ್ನಲಾಗಿದೆ. ಅಪಘಾತದಲ್ಲಿ ಮಹಾದೇವ ಖಳೂರೆ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನೋರ್ವ ಬೈಕ್ ಸವಾರ ಜಹೀರಾಬಾದ್ ಮೂಲದವನಾಗಿದ್ದು, ಆತನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅಪಘಾತದ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಗನ್ ಇಟ್ಟುಕೊಂಡು ಓಡಾಡುತ್ತಿದ್ದ ವ್ಯಕ್ತಿಯ ಬಂಧನ..!


















