ಬೆಂಗಳೂರು : ದೇಶದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನು ಕೇಂದ್ರೀಕರಿಸುವ ನೆಪದಲ್ಲಿ ಜಾರಿಗೆ ತರಲಾದ NEET (National Eligibility cum Entrance Test) ಪರೀಕ್ಷೆಯು ಇಂದು ಭ್ರಷ್ಟಾಚಾರ ಮತ್ತು ಅಕ್ರಮಗಳ ಕೇಂದ್ರವಾಗಿ ಮಾರ್ಪಟ್ಟಿದೆ. ಈ ವ್ಯವಸ್ಥಿತ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಕರ್ನಾಟಕದ ವಿದ್ಯಾರ್ಥಿಗಳ ಹಿತರಕ್ಷಣೆಗಾಗಿ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷ ವತಿಯಿಂದ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ದೀಪಕ್ ಸಿ.ಎನ್, ಮೇ 3ರಂದು ನಡೆದ NEET ಪರೀಕ್ಷೆಗೆ ದೇಶಾದ್ಯಂತ ಸುಮಾರು 23 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದು, ವಿದ್ಯಾರ್ಥಿಗಳ ಜೊತೆಗೆ ಅವರ ಪೋಷಕರು ಲಕ್ಷಾಂತರ ರೂಪಾಯಿ ವೆಚ್ಚ, ಸಾವಿರಾರು ಗಂಟೆಗಳ ಪರಿಶ್ರಮ ಮತ್ತು ಅಪಾರ ನಿರೀಕ್ಷೆಗಳನ್ನು ಈ ಪರೀಕ್ಷೆಯ ಮೇಲೆ ಇಟ್ಟಿದ್ದರು. ಆದರೆ, ಪ್ರಶ್ನೆಪತ್ರಿಕೆ ಸೋರಿಕೆ, ಅಂಕಗಳ ನೀಡಿಕೆಯಲ್ಲಿ ತಾರತಮ್ಯ ಹಾಗೂ ಪರೀಕ್ಷಾ ವ್ಯವಸ್ಥೆಯ ವೈಫಲ್ಯ ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯವನ್ನು ಅನಿಶ್ಚಿತತೆಯೊಳಗೆ ತಳ್ಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕವು ದೇಶದಲ್ಲೇ ಅತಿ ಹೆಚ್ಚು ವೈದ್ಯಕೀಯ ಕಾಲೇಜುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದಾಗಿದ್ದರೂ, ರಾಜ್ಯದ ತೆರಿಗೆ ಹಣ ಹಾಗೂ ಭೂಮಿಯಲ್ಲಿ ನಿರ್ಮಾಣವಾದ ಕಾಲೇಜುಗಳ ಸೀಟು ಹಂಚಿಕೆಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಸಮರ್ಪಕ ಅವಕಾಶ ಸಿಗದಿರುವುದು ಗಂಭೀರ ಅನ್ಯಾಯವಾಗಿದೆ ಎಂದು ಪ್ರತಿಭಟನಾಕಾರರು ಆಕ್ಷೇಪಿಸಿದರು. ದೇಶದ ಯಾವುದೋ ಮೂಲೆಯಲ್ಲಿ ನಡೆಯುವ ಅಕ್ರಮದ ಪರಿಣಾಮವಾಗಿ ಪ್ರಾಮಾಣಿಕವಾಗಿ ಓದಿದ ಕರ್ನಾಟಕದ ವಿದ್ಯಾರ್ಥಿಗಳು ವೈದ್ಯಕೀಯ ಸೀಟುಗಳಿಂದ ವಂಚಿತರಾಗುತ್ತಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತಿದೆ ಎಂದು ತಿಳಿಸಿದ್ದಾರೆ.

NEET ಜಾರಿಯಾದ ನಂತರ ಕರ್ನಾಟಕದ ವೈದ್ಯಕೀಯ ಕಾಲೇಜುಗಳಲ್ಲಿ ಹೊರರಾಜ್ಯದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯದ ಪ್ರತಿಭಾವಂತ ಮತ್ತು ಬಡ ವಿದ್ಯಾರ್ಥಿಗಳು ವೈದ್ಯರಾಗುವ ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಈ ವ್ಯವಸ್ಥೆ ಕೇವಲ ಹಣವಂತರಿಗೆ ಅನುಕೂಲವಾಗುವಂತೆ ರೂಪುಗೊಂಡಿದ್ದು, ಬಡ ಆದರೆ ಅರ್ಹ ವಿದ್ಯಾರ್ಥಿಗಳು ವೈದ್ಯರಾಗುವ ಕನಸನ್ನೇ ಕಾಣುವುದನ್ನು ಬಿಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
ನಂತರ ಮಾತನಾಡಿದ ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್, ವಿಶ್ವಾಸಾರ್ಹತೆ ಕಳೆದುಕೊಂಡಿರುವ NEET ಪರೀಕ್ಷಾ ವ್ಯವಸ್ಥೆಯನ್ನು ತಕ್ಷಣವೇ ರದ್ದುಗೊಳಿಸಿ, ರಾಜ್ಯಮಟ್ಟದ ಪ್ರವೇಶ ಪರೀಕ್ಷಾ ವ್ಯವಸ್ಥೆಯನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿದರು. ವೈದ್ಯಕೀಯ ಪ್ರವೇಶಾತಿಯ ನಿರ್ಧಾರಾಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ಮರಳಿ ನೀಡಬೇಕು ಹಾಗೂ ಕರ್ನಾಟಕದ ವೈದ್ಯಕೀಯ ಕಾಲೇಜುಗಳಲ್ಲಿನ ಶೇ. 80ಕ್ಕಿಂತ ಹೆಚ್ಚು ಸೀಟುಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೇ ಮೀಸಲಿಡಬೇಕು ಎಂದು ಒತ್ತಾಯಿಸಿದ್ದಾರೆ.
NEET ಪರೀಕ್ಷೆಯಲ್ಲಿ ಅಕ್ರಮ ನಡೆಯುತ್ತಿರುವುದು ಇದೇ ಮೊದಲ ಬಾರಿಯಲ್ಲ. ಹಿಂದಿನ ಪ್ರಕರಣಗಳ ಅಪರಾಧಿಗಳಿಗೆ ಶಿಕ್ಷೆಯಾಗಿಲ್ಲ ಹಾಗೂ ಸೂತ್ರಧಾರರನ್ನು ಪತ್ತೆ ಮಾಡುವಲ್ಲಿ ತನಿಖಾ ಸಂಸ್ಥೆಗಳು ವಿಫಲವಾಗಿವೆ. ಆದ್ದರಿಂದ NEET ಅಕ್ರಮಗಳ ಹಿಂದೆ ಇರುವ ಮಾಫಿಯಾವನ್ನು ಪತ್ತೆಹಚ್ಚಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ದೇಶದ ಮಟ್ಟದಲ್ಲಿ ನಡೆಯುವ ಕೇಂದ್ರೀಯ ಪರೀಕ್ಷೆಗಳಲ್ಲಿ ನಡೆದಿರುವ ಬಹುತೇಕ ಅಕ್ರಮಗಳಲ್ಲಿ ಕರ್ನಾಟಕದವರ ಪಾತ್ರವಿಲ್ಲ. ಆದರೆ ಅದರ ನಷ್ಟವನ್ನು ಅನುಭವಿಸುತ್ತಿರುವುದು ಕರ್ನಾಟಕದ ವಿದ್ಯಾರ್ಥಿಗಳೇ ಎಂಬುದು ವಿಷಾದನೀಯ, ವಿದ್ಯಾರ್ಥಿಗಳ ಭವಿಷ್ಯವನ್ನು ರಾಜಕೀಯ ಲಾಭಕ್ಕಾಗಿ ಅಥವಾ ಹಣ ಮಾಡುವ ದಂಧೆಗೆ ಬಳಸಿಕೊಳ್ಳುವುದನ್ನು KRS ಪಕ್ಷ ಸಹಿಸುವುದಿಲ್ಲ. ಒಕ್ಕೂಟ ಸರ್ಕಾರವು ಕೂಡಲೇ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕು ಹಾಗೂ ರಾಜ್ಯ ಸರ್ಕಾರವು ಈ ರೀತಿಯ ಅನ್ಯಾಯಕ್ಕೆ ಒಳಗಾಗುತ್ತಿರುವ ತಮಿಳುನಾಡಿನಂತಹ ರಾಜ್ಯಗಳೊಂದಿಗೆ ಸಮಾಲೋಚಿಸಿ ಜಂಟಿ ಹೋರಾಟಕ್ಕೆ ಮುಂದಾಗಬೇಕು ಎಂದು KRS ಪಕ್ಷ ಆಗ್ರಹಿದೆ.
ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ದೀಪಕ್ ಸಿ.ಎನ್, ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಆರೋಗ್ಯ ಸ್ವಾಮಿ, ರಘುನಂದನ, ಅಕ್ಷಯ್, ಆನಂದ, ರಾಜ್ಯ ಯುವ ಘಟಕದ ಕಾರ್ಯದರ್ಶಿ ಪ್ರಮೋದ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಮೋಹನ್, ನಾಗರಾಜ್ ಬೆಂಗಳೂರು ಪಶ್ಚಿಮ ಜಿಲ್ಲಾಧ್ಯಕ್ಷರಾದ ದೇವರಾಜ್, ಬೆಂಗಳೂರಿನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನೂ ಓದಿ : ಹಾಡಹಗಲೇ ಪಿಜಿಗೆ ನುಗ್ಗಿ ಲ್ಯಾಪ್ಟಾಪ್ ಕದ್ದ ಖತರ್ನಾಕ್ ಕಳ್ಳ!


















