ದೇವನಹಳ್ಳಿ | ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೆಟ್ಟಕೋಟೆ ಗ್ರಾಮದ ಬಳಿ ಸಂಭವಿಸಿದೆ. ಬೆಟ್ಟಕೋಟೆ ನಿವಾಸಿ ವೆಂಕಟೇಗೌಡ (45) ಎಂಬುವವರು ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ.
ಅತಿವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿದ್ದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಬೆಟ್ಟಕೋಟೆ ಗ್ರಾಮದ ಬಳಿ ಅತಿವೇಗವಾಗಿ ಬಂದ ಕಾರು ಮೊದಲು ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಕಾರು, ಮುಂದೆ ಚಲಿಸುತ್ತಿದ್ದ ವೆಂಕಟೇಗೌಡ ಅವರ ಬೈಕ್ಗೆ ಗುದ್ದಿದೆ. ಡಿಕ್ಕಿಯ ತೀವ್ರತೆಗೆ ವೆಂಕಟೇಗೌಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತ ಎಸಗಿದ ಕಾರು ದೇವನಹಳ್ಳಿಯ ಆಕಾಶ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ಆನಂದ್ ಎಂಬುವವರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ : ಐವರ ಮೇಲೆ ಆ್ಯಸಿಡ್ ದಾಳಿ, ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಎಸ್ಕೇಪ್!



















