ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಸರ್ ಎಂ. ವಿಶ್ವೇಶ್ವರಯ್ಯ ಬಡಾವಣೆಯ 3ನೇ ಬ್ಲಾಕ್ನ ನಿವೇಶನ ಸಂಖ್ಯೆ 433ರ ಪಕ್ಕದಲ್ಲಿರುವ ಉಳಿಕೆ ಜಾಗ, ಉದ್ಯಾನವನ ಸಂಖ್ಯೆ 05 ಮತ್ತು ರಾಜಕಾಲುವೆಯ ಮೇಲೆ ಅನಧಿಕೃತವಾಗಿ ನಡೆಯುತ್ತಿರುವ ರಸ್ತೆ ನಿರ್ಮಾಣ ಕಾಮಗಾರಿಯನ್ನು ತಡೆಹಿಡಿಯುವುದರ ಜೊತೆಗೆ ಸರ್ಕಾರಿ ನೆಲಗಳ್ಳರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಬಿಜೆಪಿ ಮುಖಂಡ ಎನ್.ಆರ್ ರಮೇಶ್ ಆಗ್ರಹಿಸಿದ್ದಾರೆ.
ಸುಮಾರು 30×40 ಅಡಿಗಳಷ್ಟು ಇರುವ ಈ ಉಳಿಕೆ ಜಾಗವನ್ನು ಇನ್ನೂ ಹರಾಜು ಪ್ರಕ್ರಿಯೆಗೆ ಒಳಪಡಿಸಿಲ್ಲ. ಈ ಜಾಗಕ್ಕೆ ಹೊಂದಿಕೊಂಡಂತೆ ಉದ್ಯಾನವನ ಮತ್ತು ರಾಜಕಾಲುವೆ ಇದ್ದರೂ, ಖಾಸಗಿ ಲಾಭಕ್ಕಾಗಿ ರಸ್ತೆ ನಿರ್ಮಿಸಲು ಪ್ರಯತ್ನ ನಡೆಯುತ್ತಿದೆ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಿಡಿಎ, ಜಿಬಿಎ ಆಯುಕ್ತರಿಗೆ ಪತ್ರ ಬರೆದು ದೂರು ಸಲ್ಲಿಸಿರುವ ಎನ್.ಆರ್ ರಮೇಶ್ ಅವರು, ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಈ ಹಿಂದೆ ನಿವಾಸಿಗಳ ದೂರು ಮೇರೆಗೆ ರಸ್ತೆ ಕಾಮಗಾರಿಯನ್ನು ತಡೆಹಿಡಿಯಲಾಗಿತ್ತು. ಆದರೆ, ಮತ್ತೆ ಕಾಮಗಾರಿ ಆರಂಭಿಸಲು ಯತ್ನಗಳು ನಡೆಯುತ್ತಿವೆ. ಈ ರಸ್ತೆ ನಿರ್ಮಾಣದಿಂದ ಸಾರ್ವಜನಿಕರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ, ಬದಲಾಗಿ ಕೆಲವು ಖಾಸಗಿ ವ್ಯಕ್ತಿಗಳಿಗೆ ಮಾತ್ರ ಲಾಭವಾಗುತ್ತದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.
ಇನ್ನು, ಸ್ಥಳೀಯ ರಾಜಕೀಯ ವ್ಯಕ್ತಿಯೊಬ್ಬರ ಮುತುವರ್ಜಿಯಲ್ಲಿ ಸರ್ಕಾರೀ ಜಾಗದಲ್ಲಿ ಅಕ್ರಮ ಕಾಮಗಾರಿ ನಡೆಯುತ್ತಿದೆ ಎಂಬ ಆರೋಪವೂ ಕೇಳಿಬಂದಿದ್ದು, ಇದರ ಹಿಂದೆ ಭ್ರಷ್ಟಾಚಾರ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ, ಉಳಿಕೆ ಜಾಗ, ಉದ್ಯಾನವನ ಮತ್ತು ರಾಜಕಾಲುವೆಯನ್ನು ಸರ್ವೆ ಮಾಡಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಅಕ್ರಮ ರಸ್ತೆ ನಿರ್ಮಾಣವನ್ನು ತಕ್ಷಣ ನಿಲ್ಲಿಸಬೇಕು ಹಾಗೂ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಲಂಚ ಸ್ವೀಕರಿಸುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಎಸ್ಡಿಎ ಸಿಬ್ಬಂದಿ!


















